ಕೋಲಾರ ಟಿಕೆಟ್ ಜಟಾಪಟಿ: ಮುನಿಸ್ವಾಮಿ ಟಿಕೆಟ್ ಮಿಸ್- ಜೆಪಿ ನಡ್ಡಾ ಕೊಟ್ಟ ಭರವಸೆ ಏನು?
ನವದೆಹಲಿ, ಮಾರ್ಚ್ 23: ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಕರ್ನಾಟಕದ 28 ಕ್ಷೇತ್ರಗಳ ಫೈಕಿ 25 ಬಿಜೆಪಿಗೆ ಮೂರು ಕ್ಷೇತ್ರಗಳು ಜೆಡಿಎಸ್ ಗೆ ಎನ್ನುವ ಮಾತುಕತೆಯಾಗಿದ್ದು, ಕೋಲಾರ ಟಿಕೆಟ್ ಗಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವ ತೀವ್ರ ಪೈಪೋಟಿ ಏರ್ಪಟ್ಟಿದೆ.
ಹೌದು, ಮೈತ್ರಿ ಧರ್ಮದಲ್ಲಿ ಜೆಡಿಎಸ್ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿರುವ ಬಿಜೆಪಿ ಹೈಕಮಾಂಡ್ ನಾಯಕರು ಎರಡು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಆದರೆ, ಜೆಡಿಎಸ್ ಐದು ಕ್ಷೇತ್ರಗಳನ್ನ ಕೇಳಿರುವುದರಲ್ಲಿ ಕೇವಲ ಎರಡು ಕೊಟ್ಟರೆ ಹೇಗೆ ಎಂದು ಅಸಮಾಧಾನ ಹೊರಹಾಕಿದ್ದು, ಕೋಲಾರ ಕ್ಷೇತ್ರವನ್ನಾದರೂ ಕೊಡಿ ಎಂದು ಪಟ್ಟು ಹಿಡಿದಿದೆ. ಅಲ್ಲದೇ ಕೋಲಾರ ಕ್ಷೇತ್ರಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಗ್ಗಜಗ್ಗಾಟ ನಡೆದಿದ್ದು, ಅಂತಿಮವಾಗಿ ಕೋಲಾರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಶುಕ್ರವಾರ ಹಾಲಿ ಸಂಸದರಾದ ಮುನಿಸ್ವಾಮಿ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿ ಕೋಲಾರ ಕ್ಷೇತ್ರದ ಬಗ್ಗೆ ಚರ್ಚಿಸಿದರು. ಈ ವೇಳೆ ಮೈತ್ರಿ ಧರ್ಮದ ಹಿನ್ನಲೆ ಟಿಕೆಟ್ ಕೈತಪ್ಪಿದೆ ಎಂದು ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ಸಂಸದ ಮುನಿಸ್ವಾಮಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ನಿಮಗೆ ಸೂಕ್ತ ಸಮಯದಲ್ಲಿ ಪಕ್ಷ ಸ್ಥಾನಮಾನ ನೀಡಲಿದೆ ಎಂದು ನಡ್ಡಾ ಭರವಸೆ ನೀಡಿದ್ದಾರೆ ಎಂದು ಮುನಿಸ್ವಾಮಿ ಅವರೇ ತಿಳಿಸಿದ್ದಾರೆ.
ಇನ್ನೂ ಕೋಲಾರ ಲೋಕಸಭಾ ಕ್ಷೇತ್ರವನ್ನ ಬಿಜೆಪಿ ಹೈಕಮಾಂಡ್ ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ನಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದೇ ಸದ್ಯ ಸಾಕಷ್ಟಯ ಕುತೂಹಲಕ್ಕೆ ಕಾರಣವಾಗಿದೆ. ಕೋಲಾರದಿಂದ ಜೆಡಿಎಸ್ ಶಾಸಕ ಸಮೃದ್ದಿ ಮಂಜುನಾಥ್ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ಮೂಲಗಳು ತಿಳಿಸಿವೆ. ಇತ್ತ ಕಾಂಗ್ರೆಸ್ ಸಹ ಕೋಲಾರ ಅಭ್ಯರ್ಥಿಯನ್ನ ಇದುವರೆಗೂ ಫೈನಲ್ ಮಾಡಿಲ್ಲ. ಕೋಲಾರ ಕ್ಷೇತ್ರದಲ್ಲಿ ಸಚಿವ ಕೆಎಚ್ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವಿನ ಮುಸುಕಿನ ಗುದ್ದಾಟ ನಡೆದಿದೆ.
ಚಿಕ್ಕಪೆದ್ದಣ್ಣ ಅವರು ಈವರೆಗೂ ಸಬ್ರಿಜಿಸ್ಟ್ರಾರ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದು, ಇವರು ಸಹ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದಾರೆ. ಇನ್ನು, ಕೋಲಾರ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಅಳಿಯನಿಗೆ ಟಿಕೆಟ್ ಕೊಡುವಂತೆ ಸಚಿವ ಕೆ ಹೆಚ್ ಮುನಿಯಪ್ಪ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಬಹುತೇಕ ಎಲ್ ಹನುಮಂತಯ್ಯ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.












Click it and Unblock the Notifications