ಈ ಚುನಾವಣೆಯಲ್ಲಿ ಮೋದಿ ಸೋಲುತ್ತಾರೆ: ಭವಿಷ್ಯ ನುಡಿದ ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 27: 2047 ಕ್ಕೇ ವಿಕಸಿತ ಭಾರತ್ ಎಂದು ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಅದಕ್ಕಾಗಿಯೇ 400 ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದಾರೆ. ಸಂವಿಧಾನ ಬದಲಾಯಿಸಲು 400 ಸೀಟು ಬೇಕೆಂದು ಹೇಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಸೋಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ, ಬದ್ಧತೆ ಇಲ್ಲ. ಸಂವಿಧಾನಕ್ಕೆ, ಸಾಮಾಜಿಕ ನ್ಯಾಯಕ್ಕೆ, ಬಡವರಿಗೆ ವಿರುದ್ದವಾಗಿದ್ದಾರೆ. ಸಮಾಜದಲ್ಲಿ ಅಸಮಾನತೆ ಇರಬೇಕು ಎಂದು ಹೇಳುವವರು ಬಿಜೆಪಿಯವರು. ಅಸಮಾನತೆ ಇದ್ದರೆ ಮಾತ್ರ ಶೋಷಣೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಸ್ವಾಮಿನಾಥನ್ ವರದಿಯಂತೆ ರೈತರಿಗೆ ಬೆಂಬಲ ಬೆಲೆ ನೀಡಲಿಲ್ಲ. ರೈತರಿಗೆ ಕೇಂದ್ರ ಸರ್ಕಾರ ಮೋಸ ಮಾಡಿದೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ ನ್ನು ಗೆಲ್ಲಿಸಬೇಕೆಂದು ಕೋರಿದರು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ನಾನು ಮುಖ್ಯಮಂತ್ರಿಯಾಗಿ 50 ಸಾವಿರದವರೆಗೆ 27 ಲಕ್ಷ ರೈತರಿಗೆ 8165 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಬಿಜೆಪಿಯ ಮೋದಿಯಾಗಲಿ, ಯಡಿಯೂರಪ್ಪನಾಗಲಿ, ಬಸವರಾಜ ಬೊಮ್ಮಾಯಿಯಾಗಲಿ ರೈತರಿಗೆ ಸಾಲವನ್ನು ಮನ್ನಾ ಮಾಡಿಲ್ಲ. ಆದರೆ ಮೋದಿಯವರು ಅದಾನಿ ಹಾಗೂ ಅಂಬಾನಿಯವರಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ರೈತರ ಸಾಲ ಮನ್ನಾ ಮಾಡದ ಮೋದಿಯವರು ಬಂಡವಾಳಶಾಹಿಗಳ ಸಾಲವನ್ನು ಮನ್ನಾ ಮಾಡಿದರು ಎಂದು ತಿಳಿಸಿದರು.
ಸಾಲ ಮನ್ನಾ ಮಾಡಿ ಎಂದು ಜನಪ್ರತಿನಿಧಿಗಳ ಮನವಿಗೆ 'ನಮ್ಮ ಬಳಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ' ಎಂದಿದ್ದರು. ಅವರ ಬಳಿ ನೋಟು ಎಣಿಸುವ ಮಷೀನು ಇದೇಯೇ ಬದಲು ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ. ಬಿಜೆಪಿಯವರು ರಾಜ್ಯದಲ್ಲಿ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯಾಗಿಸಿದ್ದಾರೆ ಎಂದರು.

ರೂಪಾಯಿ ಮೌಲ್ಯವನ್ನು ಹೆಚ್ಚಿಸುವುದಾಗಿ ಹಾಗೂ ಪೆಟ್ರೋಲ್, ಡೀಸೆಲ್ , ಗ್ಯಾಸ್ ಸಿಲಿಂಡರ್ ಗಳ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ ನರೇಂದ್ರ ಮೋದಿಯವರು ಹೇಳಿದ 'ಅಚ್ಛೇ ದಿನ್ ಆಯೇಗಾ' ಎಂದರು. ಆದರೆ ಅಚ್ಛೇ ದಿನ್ ಬರಲೇ ಇಲ್ಲ ನರೇಂದ್ರ ಮೋದಿಯವರು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.
ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬೆಲೆಯೇರಿಕೆಯಿಂದ ತತ್ತರಿಸಿರುವ ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಿಸಲು ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ , ಅನ್ನಭಾಗ್ಯ, ಶಕ್ತಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಸವಾದಿ ಶರಣರ ಹಾದಿಯಲ್ಲಿ ನಡೆಯುವ ನಾವು ವಿಶ್ವಗುರು ಬಸವಣ್ಣನವರ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಗ್ಯಾರಂಟಿಗಳು ಯಾವ ಕಾರಣಕ್ಕೂ ನಮ್ಮ ಅವಧಿಯಲ್ಲಿ ನಿಲ್ಲಿಸುವುದಿಲ್ಲ ಎಂದು ಹೇಳಿದರು. 36000 ಕೋಟಿ ರೂಗಳನ್ನು ಖರ್ಚು ಮಾಡಿದ್ದೇವೆ. ಈ ವರ್ಷ 52009 ಕೋಟಿ ಮೀಸಲಿಟ್ಟು. 1.20 ಲಕ್ಷ ಕೋಟಿ ರೂಪಾಯಿಗಳನ್ನು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಸುಳ್ಳು ಹೇಳುವ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ತಿಳಿಸಿದರು.
ಶಕ್ತಿ ಯೋಜನೆಯಡಿ 196 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂಬ ನಮ್ಮ ಭರವಸೆಯಂತೆ ನೀಡಿದ್ದೆವು. ಆದರೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ನೀಡಲು ಒಪ್ಪಲಿಲ್ಲ. ಅಕ್ಕಿ ನೀಡದೇ ಕೇಂದ್ರ ಸರ್ಕಾರ ರಾಜ್ಯದ ಜನರಿಗೆ ಮೋಸ ಮಾಡಿದೆ. ಆದ್ದರಿಂದ ಅಕ್ಕಿಯ ಬದಲು 170 ರೂ. ಹಣವನ್ನು ನೀಡುತ್ತಿದ್ದೇವೆ. ಶಕ್ತಿ ಯೋಜನೆಯನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಪತ್ರ ಬರೆದಿದ್ದರು.












Click it and Unblock the Notifications