ಏಪ್ರಿಲ್ 20 ರಂದು ಮತ್ತೆ ಕರ್ನಾಟಕಕ್ಕೆ ಮೋದಿ: ಎಲೆಲ್ಲಿ ರೋಡ್ ಶೋ? ಇಲ್ಲಿದೆ ವಿವರ
ಬೆಂಗಳೂರು, ಏಪ್ರಿಲ್ 17: 2024ರ ಲೋಕಸಭಾ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಮಾಸ್ಟರ್ ಪ್ಲಾನ್ ನಡೆಸಿದೆ. ಚುನಾವಣೆ ಘೋಷಣೆಯಾಗ ಬಳಿಕ ಪ್ರಧಾನಿ ಮೋದಿ ಈಗಾಗಲೇ ಎರಡು ಬಾರಿ ಅಬ್ಬರದ ಪ್ರಚಾರವನ್ನ ನಡೆಸಿದ್ದು, 28 ಕ್ಷೇತ್ರವನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಮಹಾ ರಣತಂತ್ರ ರೆಡಿಯಾಗಿದೆ.
ಹೌದು, ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ. ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದರು. ಬಳಿಕ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.
ಪ್ರಧಾನಿಯವರ ಕಾರ್ಯಕ್ರಮಕ್ಕೆ 2 ಲಕ್ಷ ಜನ : ಶೋಭಾ ಕರಂದ್ಲಾಜೆ
ಇದೇ 20ರಂದು ಸಂಜೆ ಅರಮನೆ ಮೈದಾನಕ್ಕೆ ಆದರಣೀಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಲಿದ್ದು, ನಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.
ಅರಮನೆ ಮೈದಾನದ ಗಾಯತ್ರಿ ವಿಹಾರ ಗೇಟ್ ನಂ.1ರಲ್ಲಿ ನಡೆಯುವ ಪ್ರಧಾನಮಂತ್ರಿಗಳ ಬೆಂಗಳೂರು ಸಮಾವೇಶದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರದ ಭಾಗದ ಜನರು, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಮೋದಿಯವರನ್ನು ನೋಡಲು ಜನರು, ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಪದೇಪದೇ ಬೆಂಗಳೂರಿಗೆ ಬರಬೇಕೆಂಬ ಉತ್ಸಾಹ ಪ್ರಧಾನಿಯವರಲ್ಲೂ ಇದೆ ಎಂದರಲ್ಲದೆ, ಪ್ರಧಾನಿಯವರ ಕಾರ್ಯಕ್ರಮಕ್ಕೆ 4 ಕ್ಷೇತ್ರಗಳಿಂದ ಸುಮಾರು 2 ಲಕ್ಷ ಸೇರುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ನಾವು ರಚಿಸಿದ ಬಿಜೆಪಿಯ ಪ್ರತಿ ಬೂತ್ ಸಮಿತಿಯಲ್ಲಿ 10-15 ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ಈ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಿದರು. ವಾರ್ಡ್, ಮಂಡಲ, ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಬೇಕು. 32 ವಿಧಾನಸಭಾ ಕ್ಷೇತ್ರಗಳಿಂದ ದೊಡ್ಡ ಸಂಖ್ಯೆಯ ಕಾರ್ಯಕರ್ತರ ತಂಡ ಬರಬೇಕೆಂದು ವಿನಂತಿಸಿದರು. 20ರಂದು ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ವಿವರ ನೀಡಿದರು.
ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications