28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸ್ಥಾನಗಳೆಷ್ಟು? ಅಂಕಿ ಅಂಶಗಳನ್ನ ಬಿಚ್ಚಿಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಮೇ 19: 2023 ರ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಕರ್ನಾಟಕದಲ್ಲಿ ಕೈ ಪಡೆ ಸರ್ಕಾರ ರಚಿಸಿದೆ. ಲೋಕಸಭಾ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾಂಗ್ರೆಸ್ ಬರೋಬ್ಬರಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ. ಇತ್ತ ಕೈ ನಾಯಕರಿಗೆ ಠಕ್ಕರ್ ಕೊಡಲು ಕಮಲ-ದಳ ನಾಯಕರು ಮೈತ್ರಿಯಾಗಿದ್ದು, ಕೈ ಪಾಳಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ.
ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಉತ್ತರ ಭಾರತದ ರಾಜ್ಯಗಳಲ್ಲೂ ಚುನಾವಣೆ ಉತ್ತಮವಾಗಿ ನಡೆಯುತ್ತಿದ್ದು ಜನ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳ ಆಸುಪಾಸು ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಪೆನ್ ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ ಮತ್ತೆ ನಿಮ್ಮ ಹೆಸರು ಪ್ರಸ್ತಾಪ ಮಾಡಿ 100 ಕೋಟಿ ಆಮಿಷ ಒಡ್ಡಿರುವುದಾಗಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ದೇವರಾಜೇಗೌಡನ ಬಳಿ ಆರೋಪಗಳ ಬಗ್ಗೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಆತ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಅವನಂತಹ ಮೆಂಟಲ್ ಗಿರಾಕಿ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವನು ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ.
ನನಗೆ ನಿಮ್ಮ (ಮಾಧ್ಯಮ) ಬಗ್ಗೆ ಅನುಕಂಪವಿದೆ. ಮಾಧ್ಯಮದವರು ವಿದ್ಯಾವಂತರು, ಪ್ರಜ್ಞಾವಂತರಿದ್ದೀರಿ. ಯಾರೋ ಏನೋ ಹೇಳುತ್ತಾರೆ ಎಂದು ಇಂತಹ ವಿಚಾರ ಹಾಕಿಕೊಂಡು ಕೂತರೆ, ನಿಮ್ಮ ಘನತೆ ಏನಾಗಬೇಕು. ಅವನ ಹೇಳಿಕೆಯಲ್ಲಿ ಸತ್ಯ ಇದೆಯೇ, ಇಲ್ಲವೆ ಎಂದು ಪರಿಶೀಲಿಸಬೇಕಲ್ಲವೇ? ಯಾರಾದರೂ ಆರೋಪ ಮಾಡುವಾಗ ಅದಕ್ಕೆ ಆಧಾರ ಇರಬೇಕಲ್ಲವೇ? ತಲೆಕೆಟ್ಟು, ಆಸ್ಪತ್ರೆ ಸೇರಬೇಕಾದವರ ಮಾತಿಗೆ ಇಷ್ಟು ಪ್ರಾಮುಖ್ಯತೆ ನೀಡುವುದು ಸರಿಯಲ್ಲ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಇನ್ನು ಬಂಧನವಾಗಿಲ್ಲ, ಸಂತ್ರಸ್ತೆಯರಿಗೆ ನ್ಯಾಯ ಸಿಗುತ್ತದೆಯೇ ಎಂದು ಕೇಳಿದಾಗ, "ಇಷ್ಟು ದಿನವೂ ಪೆನ್ ಡ್ರೈವ್ ಬಗ್ಗೆ ಚರ್ಚೆಯಾಗುತ್ತಿದೆಯೇ ಹೊರತು ಸಂತ್ರಸ್ತೆಯರ ಬಗ್ಗೆ, ಅವರಿಗಾಗಿರುವ ಅನ್ಯಾಯದ ಬಗ್ಗೆ ಯಾರೂ ಚರ್ಚೆ ಮಾಡುತ್ತಿಲ್ಲ. ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿ ಸಂತ್ರಸ್ತೆಯರಿಗೆ ನ್ಯಾಯ ಒದಗಿಸಲಿದೆ ಎಂಬ ವಿಶ್ವಾಸ ನನಗಿದೆ. ಸಂತ್ರಸ್ತೆಯರಿಗೆ ನ್ಯಾಯ ಒದಗಿಸಿಕೊಡುವುದು ನಮ್ಮ ಕರ್ತವ್ಯ ಎಂದರು.
ಬಿಡಿಎ ಕಾಂಪ್ಲೆಕ್ಸ್ ಗಳನ್ನು ಒಡೆಯುತ್ತಿರುವ ಕುರಿತು ಮಾತನಾಡಿ, "ಈ ವಿಚಾರವಾಗಿ ಅಶೋಕ್ ಅವರು ಮಾತನಾಡಿದ್ದು, ಈ ಪ್ರಕ್ರಿಯೆ ಯಾರ ಕಾಲದಲ್ಲಿ ಆರಂಭವಾಗಿದೆ, ಇದಕ್ಕೆ ಅನುಮತಿ ಕೊಟ್ಟವರು ಯಾರು ಎಂದು ಅವರು ಮರೆತಿದ್ದಾರೆ. ನನ್ನ ಬಳಿ ಈ ಬಗ್ಗೆ ಎಲ್ಲಾ ಮಾಹಿತಿ ಇದೆ. ಬೊಮ್ಮಾಯಿ ಅವರು ಈ ಹಿಂದೆ ಒಪ್ಪಂದ ಮಾಡಿಕೊಂಡು ಟೆಂಡರ್ ಕರೆದಿದ್ದರು.
ಯಡಿಯೂರಪ್ಪ ಅವರು ಇದನ್ನು ತಡೆಹಿಡಿಯಲು ಹೇಳಿದ್ದರು. ನಂತರ ಬೊಮ್ಮಾಯಿ ಅವರು ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ಮಾಡಿ, ಒಪ್ಪಂದ ಮಾಡಿಕೊಂಡಿಯಾಗಿದೆ, ನಮಗೆ ನಷ್ಟವಾಗುತ್ತಿದ್ದು ಈ ಪ್ರಕ್ರಿಯೆ ಮುಂದುವರಿಸಬೇಕು ಎಂದು ಪತ್ರ ಕೂಡ ಬರೆದಿದ್ದಾರೆ. ಅವರ ಕಾಲದಲ್ಲಿ ಆಗಿರುವ ಕ್ರಮ ಈಗ ಮುಂದುವರಿಯುತ್ತಿದೆ. ಈಗ ಬೋಗ್ಯಕ್ಕೆ ಕೊಡಲಾಗಿದ್ದು, ಸರ್ಕಾರಕ್ಕೆ ಆದಾಯ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದ ಬಗ್ಗೆ ಪ್ರತ್ಯೇಕವಾಗಿ ಹೇಳಿಕೆ ಬಿಡುಗಡೆ ಮಾಡುತ್ತೇನೆ. ಈ ವಿಚಾರವಾಗಿ ಅಶೋಕ್ ಅವರಿಗೆ ಎಷ್ಟು ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಅವರಿಗೆ ಸಂಪೂರ್ಣ ಮಾಹಿತಿ ರವಾನಿಸುತ್ತೇನೆ ಎಂದರು.
ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ ವಿಚಾರವಾಗಿ ಬಿಜೆಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, ಬಿಜೆಪಿ ಇರುವುದೇ ಆರೋಪ ಮಾಡಲು, ಸರ್ಕಾರಕ್ಕೆ ಕೆಟ್ಟ ಹೆಸರು ತರಲು. ಅವರ ಹುಳುಕು ಮುಚ್ಚಿಹಾಕಿ ಕಾಂಗ್ರೆಸ್ ಬಗ್ಗೆ ಟೀಕೆ ಮಾಡುವುದು ಅವರ ಕೆಲಸವಾಗಿದೆ. ನಾವು ಸಮರ್ಥವಾಗಿ ಸರ್ಕಾರ ನಡೆಸುತ್ತಿರುವುದನ್ನು ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ತಿಳಿಸಿದರು.












Click it and Unblock the Notifications