Lok Sabha Election 2024: ಕರ್ನಾಟಕದಿಂದ ಬಿಜೆಪಿ ಹೈಕಮಾಂಡ್ ಗೆ ಪಟ್ಟಿ ರವಾನೆ: ಇಲ್ಲಿದೆ ಸಂಭಾವ್ಯ ಪಟ್ಟಿ?
ಬೆಂಗಳೂರು, ಮಾರ್ಚ್ 04: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್ ಶನಿವಾರ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಪ್ರಕಟಿಸಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಅಳೆದು ತೂಗಿ ಅಭ್ಯರ್ಥಿಯನ್ನ ಆಯ್ಕೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಟಿಕೆಟ್ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಪಕ್ಷದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಭಾನುವಾರ ಸಭೆ ನಡೆದಿದ್ದು, ಚುನಾವಣಾ ನಿರ್ವಹಣಾ ಸಮಿತಿಯು ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಈ ಬಾರಿ ಹಾಲಿ ಸಂಸದರನ್ನು ಹೊರತುಪಡಿಸಿ ಹನ್ನೆರಡು ಹೊಸ ಮುಖಗಳಿಗೆ ಸ್ಥಾನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಸಭೆಯಲ್ಲಿ ಡಿ ಕೆ ಶಿವಕುಮಾರ್ ಅವರ ಸಹೋದರ ಹಾಗೂ ಕಾಂಗ್ರೆಸ್ನ ಹಾಲಿ ಸಂಸದ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಅವರನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಹಾಲಿ ಸಂಸದರಾದ ಡಿವಿ ಸದಾನಂದಗೌಡ ಮತ್ತು ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸುತ್ತಿದ್ದಂತೆ ಬೆಂಗಳೂರು ಉತ್ತರ ಮತ್ತು ಚಾಮರಾಜನಗರಕ್ಕೆ ಹೊಸ ಹೆಸರುಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ.
ಹುಬ್ಬಳ್ಳಿ-ಧಾರವಾಡದಿಂದ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ ಸೇರಿದಂತೆ ಕೆಲವು ಹಾಲಿ ಸಂಸದರನ್ನು ನಾಮನಿರ್ದೇಶನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ತುಮಕೂರಿಗೆ ಮಾಜಿ ಸಚಿವ ವಿ.ಸೋಮಣ್ಣ ಮತ್ತು ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹೊಸ ಮುಖದ ಹೊರತಾಗಿ ಶಾರ್ಟ್ಲಿಸ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಂಠೇಶ್ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರ ಅಲೋಕ್ ವಿಶ್ವನಾಥ್ ಅವರ ಹೆಸರು ಕೂಡ ಸಭೆಯಲ್ಲಿ ಚರ್ಚಿಸಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಹೆಸರುಗಳು ಕೇಳಿ ಬಂದಿದ್ದು, ತುಮಕೂರು ಕ್ಷೇತ್ರದಲ್ಲಿ ಹಾಲಿ ಸಂಸದ ಜಿಎಸ್ ಬಸವರಾಜು ಅವರು ನಿವೃತ್ತಿ ಘೋಷಿಸಿರುವುದರಿಂದ ಹೊಸ ಅಭ್ಯರ್ಥಿಯಾಗಿ ವಿ ಸೋಮಣ್ಣ ಹೆಸರು ಕೇಳಿಬಂದಿದೆ. ಇನ್ನು, ಬೆಳಗಾವಿಯಲ್ಲಿ ಹಾಲಿ ಸಂಸದೆ ಮಂಗಳಾ ಅಂಗಡಿ ಬದಲಾಗಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.
ಇನ್ನೂ ಸಭೆಯ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಎರಡ್ಮೂರು ದಿನಗಳಲ್ಲಿ 28 ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಗೆ ರವಾನೆ ಮಾಡಲಾಗುತ್ತದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಂಬಂಧ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಚರ್ಚೆ ನಡೆದಿದ್ದು, ಚರ್ಚೆಗೆ ಬಂದ ಎಲ್ಲ ಆಕಾಂಕ್ಷಿಗಳ ಹೆಸರುಗಳನ್ನು ವರಿಷ್ಠರಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಇಬ್ಬರು ವೀಕ್ಷಕರು ಹೋಗಿ ಕಾರ್ಯಕರ್ತರು ಮತ್ತು ನಾಯಕರ ಜತೆ ಚರ್ಚಿಸಿ, ಆಕಾಂಕ್ಷಿಗಳ ಹೆಸರುಗಳನ್ನು ಸಂಗ್ರಹಿಸಿಕೊಂಡು ಬಂದಿದ್ದಾರೆ. ಆ ಹೆಸರುಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ರಾಜ್ಯದಲ್ಲಿ 28 ಸ್ಥಾನಗಳನ್ನೂ ಗೆಲ್ಲುವ ವಾತಾವರಣವಿದೆ. ಬಿಜೆಪಿ- ಜೆಡಿಎಸ್ ಜತೆಯಾಗಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಎಲ್ಲ ಸ್ಥಾನಗಳನ್ನು ಗೆದ್ದು ದಾಖಲೆ ಸೃಷ್ಟಿಸಬೇಕು ಎಂಬ ತೀರ್ಮಾನ ಸಭೆಯಲ್ಲಿ ಆಯಿತು ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ಸಂಭವನೀಯ ಅಭ್ಯರ್ಥಿ ಪಟ್ಟಿ ಇಲ್ಲಿದೆ
ಬೆಂಗಳೂರು ಗ್ರಾಮಾಂತರ: ಡಾ. ಮಂಜುನಾಥ್
ಬೆಂಗಳೂರು ಕೇಂದ್ರ: ಪಿ ಸಿ ಮೋಹನ್
ತುಮಕೂರು: ವಿ ಸೋಮಣ್ಣ
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ : ಶೋಭಾ ಕರಂದ್ಲಾಜೆ
ಮೈಸೂರು: ಪ್ರತಾಪ್ ಸಿಂಹ
ಚಾಮರಾಜನಗರ: ಶ್ರೀನಿವಾಸ್ ಪ್ರಸಾದ್ ಅಳಿಯ ಡಾ. ಮೋಹನ್
ಚಿಕ್ಕಮಗಳೂರು: ಶೋಭಾ ಕರಂದ್ಲಾಜೆ
ದಾವಣಗೆರೆ: ಜಿ ಎಂ ಸಿದ್ದೇಶ್ವರ್
ಶಿವಮೊಗ್ಗ: ಬಿ ವೈ ರಾಘವೇಂದ್ರ
ಹಾವೇರಿ: ಬಿ ಸಿ ಪಾಟೀಲ್, ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್
ಚಿಕ್ಕಬಳ್ಳಾಪುರ: ಡಾ. ಕೆ ಸುಧಾಕರ್ ಅಥವಾ ಅಲೋಕ್ ವಿಶ್ವನಾಥ್
ಉತ್ತರ ಕನ್ನಡ: ಅನಂತ ಕುಮಾರ್ ಹೆಗ್ಡೆ, ವಿಶ್ವೇಶ್ವರ ಹೆಗಡೆ ಕಾಗೇರಿ
ದಕ್ಷಿಣ ಕನ್ನಡ: ನಳಿನ್ ಕುಮಾರ್ ಕಟೀಲ್
ಹುಬ್ಬಳ್ಳಿ-ಧಾರವಾಡ: ಪ್ರಹ್ಲಾದ್ ಜೋಶಿ
ಚಿತ್ರದುರ್ಗ: ಎ ನಾರಾಯಣಸ್ವಾಮಿ
ಬಾಗಲಕೋಟೆ: ಪಿ. ಸಿ. ಗದ್ದಿಗೌಡರ್
ಬಳ್ಳಾರಿ: ಶ್ರೀರಾಮುಲು
ಕೊಪ್ಪಳ: ಕರಡಿ ಸಂಗಣ್ಣ
ವಿಜಯಪುರ: ರಮೇಶ್ ಜಿಗಜಿಣಗಿ
ಕಲಬುರ್ಗಿ: ಉಮೇಶ್ ಜಾದವ್
ಕೋಲಾರ: ಮುನಿಸ್ವಾಮಿ
ಬೆಳಗಾವಿ: ಜಗದೀಶ್ ಶೆಟ್ಟರ್
ಬೀದರ್ : ಭಗವಂತ್ ಖೂಬಾ
ಚಿಕ್ಕೋಡಿ: ಅಣ್ಣಾಸಾಹೇಬ ಜೊಲ್ಲೆ ಅಥವಾ ರಮೇಶ್ ಕತ್ತಿ
ರಾಯಚೂರು : ರಾಜಾ ಅಮರೇಶ್ವರ












Click it and Unblock the Notifications