Madal Virupakshappa Arrest : ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಲೋಕಾಯುಕ್ತ ಸಿದ್ಧತೆ; ಅಜ್ಞಾತ ಸ್ಥಳದಲ್ಲಿ ಶಾಸಕ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಬಂಧನಕ್ಕೆ ಲೋಕಾಯುಕ್ತ ಸಿದ್ದತೆ ನಡೆಸಿದೆ.
ಬೆಂಗಳೂರು,ಮಾರ್ಚ್4: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಕೆಎಸ್ಡಿಎಲ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಾಯುಕ್ತ ದಾಳಿಯಿಂದಾಗಿ ಬಿಜೆಪಿ ಗೆ ಚುನಾವಣೆ ಹೊತ್ತಲಿ ದೊಡ್ಡ ಮುಜುಗರ ಹುಟ್ಟಿಸಿದೆ. ಈ ನಡುವೆ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಾಥಮಿಕ ವರದಿಯಲ್ಲಿ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರೇ ಮೊದಲನೇ ಆರೋಪಿಯಾಗಿದ್ದಾರೆ. ಇನ್ನು ಎರಡನೇ ಆರೋಪಿಯಾಗಿ ಅವರ ಪುತ್ರ ಹಾಗೂ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಪರಿಶೋಧಕ ಪ್ರಶಾಂತ್ ಹೆಸರು ಉಲ್ಲೇಖವಾಗಿದೆ.
ಈ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ಗೆ ಈಗಾಗಲೇ 14 ದಿನ ನ್ಯಾಯಾಂಗ ಬಂಧನವಾಗಿದೆ. ಪ್ರಶಾಂತ್ ಸೇರಿದಂತೆ ಐವರರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಲೋಕಾಯುಕ್ತ ಕೋರ್ಟ್ ಆದೇಶ ಹೊರಡಿಸಿದೆ. ಈ ನಡುವೆ ಲೋಕಾಯುಕ್ತ ಪೊಲೀಸರು ಶಾಸಕ ಮಾಡಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಸಜ್ಜಾಗುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಿಗೆ ಪುತ್ರ ಪ್ರಶಾಂತ್ ಸಿಕ್ಕಿಬಿದ್ದ ಮಾಹಿತಿ ತಿಳಿದ ಕೂಡಲೇ ಚನ್ನಗಿರಿ ಕ್ಷೇತ್ರದಲ್ಲಿದ್ದ ವಿರೂಪಕ್ಷಪ್ಪ ನವರು ಇನ್ನೊಬ್ಬ ಪುತ್ರನ ಜೊತೆಗೆ ರಾತ್ರೋರಾತ್ರಿ ಅಜ್ಞಾತ ಸ್ಥಳದಲ್ಲಿದ್ದು, ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಯಾದ ಶಾಸಕ ವಿರೂಪಕ್ಷಪ್ಪ ಅವರನ್ನ ಬಂಧಿಸಲು ಲೋಕಾಯುಕ್ತ ಪೊಲೀಸರು ಸಿದ್ದತೆಯನ್ನ ನಡೆಸುತ್ತಿದ್ದು, ಇತ್ತ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಶನಿವಾರ ಬಂಧನಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಶಾಸಕ ಮಾಡಾಳ್ ವಿರೂಪಕ್ಷಪ್ಪ ಅವರ ಮನೆ ಮೇಲೆ ದಾಳಿ ನಡೆಸಿದರೂ ವಿರೂಪಾಕ್ಷಪ್ಪ ಮೊಬೈಲ್ಗೂ ಸಿಕ್ಕಿಲ್ಲ. ಈಗಾಗಲೇ ಅಧಿಕಾರಿಗಳು ಅವರ ವಾಟ್ಸಪ್ ನಂಬರ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಮೂರನೇ ಆರೋಪಿ ಪ್ರಶಾಂತ್ ಕಚೇರಿ ಲೆಕ್ಕಾಧಿಕಾರಿ ಸುರೇಂದ್ರ, ನಾಲ್ಕನೇ ಆರೋಪಿ ಶಾಸಕರ ಸಂಬಂಧಿ ಸಿದ್ದೇಶ್ ಹಾಗೂ ಪ್ರಶಾಂತ್ ಅವರ ಜತೆ ಡೀಲ್ಗೆ ಬಂದಿದ್ದ ಕರ್ನಾಟಕ ಅರೋಮಸ್ ಕಂಪನಿಯ ಉದ್ಯೋಗಿಗಳಾದ ಆಲ್ಬರ್ಚ್ ನಿಕೋಲಾ ಹಾಗೂ ಗಂಗಾಧರ್ ವಿರುದ್ಧವೂ ಕೂಡ ಎಫ್ಐಆರ್ ದಾಖಲಾಗಿದೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದೇನು.?
ಮಾರ್ಚ್ 2 ರಂದು ನಡೆದ ಲೋಕಾಯುಕ್ತ ದಾಳಿಗು ನನಗೂ ಯಾವುದೇ ಸಂಬಂಧವಿರುವುದಿಲ್ಲ. ಇದು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಶಡ್ಯಂತ್ರವಾಗಿರುತ್ತದೆ. ಆದಾಗಿಯೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದಯವಿಟ್ಟು ಈ ನನ್ನ ಜೀನಾಮೆಯನ್ನು ಅಂಗೀಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.












Click it and Unblock the Notifications