ವಿಧಾನಸಭೆ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ರಾಜೀನಾಮೆ?
ಬೆಂಗಳೂರು, ಸೆಪ್ಟೆಂಬರ್ 05 : ವಿಧಾನಸಭೆಯ ಉಪ ಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸೆ.12ರಂದು ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ ಅವರು ಜುಲೈನಲ್ಲಿ ವಿಧಾನಸಭೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದರೆ, ಉಪಸಭಾಪತಿ ಹುದ್ದೆಗೆ ನಾನು ಸೂಕ್ತವ್ಯಕ್ತಿ ಅಲ್ಲ ಎಂದುಕೊಂಡಿರುವ ಅವರು, ರಾಜೀನಾಮೆಗೆ ಮುಂದಾಗಿದ್ದಾರೆ.
ಪಕ್ಷದ ವಿರುದ್ಧ, ಪಕ್ಷದ ನಾಯಕರ ವಿರುದ್ದ ಯಾವುದೇ ಅಸಮಾಧಾನವಿಲ್ಲ ಎಂದು ಕೃಷ್ಣಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ಹಿಂದೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕೃಷ್ಣಾರೆಡ್ಡಿ ಅವರು ಅನಿವಾರ್ಯವಾಗಿ ಉಪಸಭಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಂಡಿದ್ದರು.

ಉಪಸಭಾಧ್ಯಕ್ಷ ಹುದ್ದೆಯನ್ನು ಹಿರಿಯ ನಾಯಕರಿಗೆ ನೀಡಿ, ಆ ಹುದ್ದೆ ಇಲ್ಲದಿದ್ದರೂ ಕ್ಷೇತ್ರಕ್ಕೆ ಅನುದಾನ ತಂದು ಅಭಿವೃದ್ಧಿ ಮಾಡುವೆ ಎಂಬುದು ಶಾಸಕರ ವಾದ. ಆದ್ದರಿಂದ, ಉಪಸಭಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ಶಾಸಕರಾದ ಎಚ್.ವಿಶ್ವನಾಥ್, ಎ.ಟಿ.ರಾಮಸ್ವಾಮಿ, ಎಚ್.ಕೆ.ಕುಮಾರಸ್ವಾಮಿ ಮುಂತಾದ ನಾಯಕರನ್ನು ಉಪಸಭಾಧ್ಯಕ್ಷ ಹುದ್ದೆಗೆ ನೇಮಿಸಬಹುದು ಎಂದು ಕೃಷ್ಣಾರೆಡ್ಡಿ ಸಲಹೆ ನೀಡಿದ್ದಾರೆ.
ವಿಧಾನಸಭೆ ಸ್ಪೀಕರ್ ಸ್ಥಾನ ಕಾಂಗ್ರೆಸ್ ಪಕ್ಷದ ಕೈಯಲ್ಲಿ ಇದೆ. ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಸ್ಪೀಕರ್ ಆಗಿದ್ದಾರೆ. ಆದ್ದರಿಂದ ಉಪಸಭಾಧ್ಯಕ್ಷರ ಸ್ಥಾನ ಜೆಡಿಎಸ್ಗೆ ಒಲಿದಿದೆ.












Click it and Unblock the Notifications