ಪ್ರಶಾಂತ್ ಮಾಡಾಳ್ ಲಂಚ ಪ್ರಕರಣ; ಸರ್ಕಾರದ ವಿರುದ್ಧ ಗಂಭೀರ ಆರೋಪ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣದ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಬೆಂಗಳೂರು, ಮಾರ್ಚ್ 08; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಟೆಂಡರ್ಗೆ 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದ ಮೊದಲ ಆರೋಪಿ ಬಿಜೆಪಿ ಶಾಸಕನಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಪ್ರಶಾಂತ್ ಮಾಡಾಳ್ ಮನೆ ಮೇಲೆ ಲೋಕಾಯುಕ್ತರು ದಾಳಿ ಮಾಡಿದಾಗ 6 ಕೋಟಿ ರೂ. ಹಣ ಸಿಕ್ಕಿದೆ. 80 ಲಕ್ಷ ರೂ. ಲಂಚವನ್ನು ಅವರು ಕೇಳಿದ್ದರು ಎಂಬುದು ಆರೋಪ. ಈ ಪ್ರಕರಣದಲ್ಲಿ ಬಂಧನವಾಗಿರುವ ಅವರು 14 ದಿನಗಳ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಪ್ರಕರಣದ ಕರ್ನಾಟಕದ ಬಿಜೆಪಿಗೆ ಭಾರೀ ಮುಜುಗರ ಉಂಟು ಮಾಡಿದೆ.

ಬಿಜೆಪಿ ಶಾಸಕನ ಪುತ್ರನ ಲಂಚ ಪ್ರಕರಣವನ್ನು ಕರ್ನಾಟಕ ಕಾಂಗ್ರೆಸ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸರ್ಕಾರ, ಬಿಜೆಪಿ ವಿರುದ್ಧದ ಹೋರಾಟದ ಅಸ್ತ್ರವಾಗಿ ಮಾಡಿಕೊಂಡಿದೆ. ಈಗ ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕರ್ನಾಟಕ ಹೈಕೋರ್ಟ್ ಕೆ. ಮಾಡಾಳು ವಿರೂಪಾಕ್ಷಪ್ಪಗೆ 48 ಗಂಟೆಯಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂಬ ಸೂಚನೆಯನ್ನು ಮಂಗಳವಾರ ನೀಡಿದೆ.
ಬುಧವಾರ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ಮಾಡಾಳ್ ವಿರೂಪಾಕ್ಷಪ್ಪನವರ ತನಿಖಾಧಿಕಾರಿಗಳ ಬದಲಾವಣೆಯಾಗುತ್ತದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಲೋಕಾಯುಕ್ತ ವಕೀಲರು ಆಕ್ಷೇಪಣೆ ಸಲ್ಲಿಸಲು ತನಿಖಾಧಿಕಾರಿಗಳನ್ನು ಕೇಳಬೇಕು ಎನ್ನುತ್ತಾರೆ. ಇದನ್ನೆಲ್ಲಾ ನೋಡಿದರೆ ಲೋಕಾಯುಕ್ತ ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ ಎನ್ನಲು ಸಾಧ್ಯವೇ?. ಬಸವರಾಜ ಬೊಮ್ಮಾಯಿ ಭ್ರಷ್ಟ ರಕ್ಷಕ ಅಲ್ಲ ಎನ್ನಲು ಸಾಧ್ಯವೇ?' ಎಂದು ಕೇಳಿದೆ.
ಮತ್ತೊಂದು ಟ್ವೀಟ್ನಲ್ಲಿ ಕಾಂಗ್ರೆಸ್, 'ಬಸವರಾಜ ಬೊಮ್ಮಾಯಿ ಅವರು ಭ್ರಷ್ಟಾಚಾರದ ವಾಚ್ ಮ್ಯಾನ್ ಆಗಿದ್ದಾರೆ. ಭ್ರಷ್ಟರನ್ನು ಕಾಯುವುದರಲ್ಲಿ ಅವರ ನಿಷ್ಠೆ ಅನನ್ಯವಾದುದು!. ಮಾಡಾಳ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ಲೋಕಾಯುಕ್ತ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಸೂಚನೆ ಇಲ್ಲ ಎಂದು ಹೇಳಿರುವುದು ನಿಜವೇ?. ಇದರಲ್ಲಿ ಸಿಎಂ ಹಸ್ತಕ್ಷೇಪ ಇದೆಯೇ? ಭ್ರಷ್ಟ ಬಿಜೆಪಿ ಕರ್ನಾಟಕಕ್ಕೆ ಜನರ ಭಯ ಇಲ್ಲವೇ?' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

'ಜನಸಾಮಾನ್ಯರಿಗೊಂದು ಕಾನೂನು, ಬಿಜೆಪಿಯ ಭ್ರಷ್ಟರಿಗೊಂದು ಕಾನೂನು ಎನ್ನುವಂತೆ ಒಂದೇ ದಿನದಲ್ಲಿ ಮಾಡಾಳ್ ವಿರೂಪಾಕ್ಷಪ್ಪರಿಗೆ ಆದ್ಯತೆ ಮೇರೆಗೆ ಜಾಮೀನು ನೀಡಲಾಗಿದೆ ಎಂಬ ವಕೀಲರ ಸಂಘದ ದೂರಿಗೆ ಬಸವರಾಜ ಬೊಮ್ಮಾಯಿ ಅವರ ಪ್ರತಿಕ್ರಿಯೆ ಏನು?. ಈ ಜಾಮೀನು ಪ್ರಕ್ರಿಯೆಯಲ್ಲಿ ಸರ್ಕಾರದ ಪ್ರಭಾವ, ಹಸ್ತಕ್ಷೇಪ ಇದೆಯೇ?. ಭ್ರಷ್ಟರ ರಕ್ಷಣೆ ಬೊಮ್ಮಾಯಿಯವರ ಹೊಣೆ' ಎಂದು ಪ್ರತಿಪಕ್ಷ ವಾಗ್ದಾಳಿ ನಡೆಸಿದೆ.
ಜಾಮೀನು ಸಿಗಲು ಹೇಗೆ ಸಾಧ್ಯ?; ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, "ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಅವರ ಕಚೇರಿ ಹಾಗೂ ನಿವಾಸದಲ್ಲಿ ಸುಮಾರು 8 ಕೋಟಿಯಷ್ಟು ಅಕ್ರಮ ಹಣ ಸಿಕ್ಕಿದೆ. ಈ ಪ್ರಕರಣದಲ್ಲಿ ಶಾಸಕರಿಗೆ ಒಂದೇ ದಿನದಲ್ಲಿ ಜಾಮೀನು ಸಿಕ್ಕಿದೆ. ಸರ್ಕಾರ ಹಾಗೂ ಸರ್ಕಾರಿ ವಕೀಲರ ಬೆಂಬಲ ಇಲ್ಲವಾದರೆ ಕೇವಲ ಒಂದೇ ದಿನದಲ್ಲಿ ಜಾಮೀನು ಸಿಗಲು ಹೇಗೆ ಸಾಧ್ಯ?" ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
"ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಭ್ರಷ್ಟಾಚಾರಗಳು ಪ್ರಕರಣಗಳು ಬೆಳಕಿಗೆ ಬಂದಿವೆ. ಇಷ್ಟಾದರೂ ಬಿಜೆಪಿಯವರು ಸಾಕ್ಷಿ ಕೊಡಿ ಎನ್ನುತ್ತಿದ್ದರು. ಆದರೆ ಈಗ ಬಿಜೆಪಿ ಶಾಸಕರೇ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಆ ಮೂಲಕ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಮತ್ತೊಂದು ಮುಖವಾಡ ಕಳಚಿದೆ" ಎಂದು ರಾಮಲಿಂಗಾ ರೆಡ್ಡಿ ದೂರಿದ್ದಾರೆ.
ಲಂಚ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಲೋಕಾಯುಕ್ತ ಪೊಲೀಸರು ತನಿಖಾಧಿಕಾರಿಗಳನ್ನು ಬದಲಾವಣೆ ಮಾಡಿದ್ದರು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಡಿವೈಎಸ್ಪಿ ಪ್ರಮೋದ್ ಕುಮಾರ್, ಇನ್ಸ್ಪೆಕ್ಟರ್ ಕುಮಾರಸ್ವಾಮಿಯನ್ನು ಬದಲಾವಣೆ ಮಾಡಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗ ತನಿಖಾಧಿಕಾರಿಗಳ ವರ್ಗಾವಣೆ ಕುತೂಹಲಕ್ಕೆ ಕಾರಣವಾಗಿತ್ತು. ಡಿವೈಎಸ್ಪಿ ಅಂಥೋನಿ ಜಾನ್ ಮತ್ತು ಇನ್ಸ್ಪೆಕ್ಟರ್ ಬಾಲಾಜಿ ಬಾಬು ಅವರನ್ನು ಪ್ರಕರಣದ ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ.












Click it and Unblock the Notifications