ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವುದಿಲ್ಲವೇ ಮಧು ಬಂಗಾರಪ್ಪ?
Recommended Video
ಬೆಂಗಳೂರು, ನವೆಂಬರ್ 13 : ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವುದಿಲ್ಲ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಲಿದ್ದಾರೆ?.
ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಸೋತರೂ ಮಧು ಬಂಗಾರಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಅವರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂಬ ಸುದ್ದಿ ಹಬ್ಬಿದೆ.
ಮಧು ಬಂಗಾರಪ್ಪಗೆ ಸಚಿವ ಸ್ಥಾನ : ಓದುಗರ ಅಭಿಪ್ರಾಯವೇನು?
ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಪ್ತರು. ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರು ನಾಮಪತ್ರ ಸಲ್ಲಿಸುವಾಗ ಕುಮಾರಸ್ವಾಮಿ ಅವರು ಜೊತೆಗಿದ್ದರು.
ಮಧು ಬಂಗಾರಪ್ಪಗೆ ಸಚಿವ ಸ್ಥಾನ, ಇದು ದೇವೇಗೌಡರ ಹೊಸ ತಂತ್ರ!
ಚುನಾವಣೆಯಲ್ಲಿ ಸೋತ ಬಳಿಕ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಸೋಲಿಗೆ 5 ಕಾರಣಗಳು!
2 ಸಚಿವ ಸ್ಥಾನಗಳು
ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್ಗೆ, 2 ಸ್ಥಾನಗಳು ಜೆಡಿಎಸ್ಗೆ ಸಿಗಲಿವೆ. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತು ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ಸಂಪುಟ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಆದ್ದರಿಂದ, ಮಧು ಬಂಗಾರಪ್ಪ ಅವರು ಸಂಪುಟ ಸೇರುವುದಿಲ್ಲ.
ಮಧು ಬಂಗಾರಪ್ಪಗೆ ಬೇರೆ ಹುದ್ದೆ
ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ರಾಜಕೀಯ ಕಾರ್ಯದರ್ಶಿ ಹುದ್ದೆ ಸಂಪುಟ ದರ್ಜೆ ಸಚಿವರಿಗೆ ಸಮನಾಗಿರುತ್ತದೆ.
ಚುನಾವಣೆಯಲ್ಲಿ ಸೋಲು
2013ರ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಜಯಗಳಿಸಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ 58505 ಮತಗಳನ್ನು ಪಡೆದು ಸಹೋದರ, ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ವಿರುದ್ಧ ಸೋಲು ಅನುಭವಿಸಿದ್ದಾರೆ.
2018ರ ನವೆಂಬರ್ನಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 4,91,158 ಮತಗಳನ್ನು ಪಡೆದು ಬಿಜೆಪಿಯ ಬಿ.ವೈ.ರಾಘವೇಂದ್ರ ಅವರಿಗೆ ಪ್ರಬಲ ಪೈಪೋಟಿ ನೀಡಿ ಮಧು ಬಂಗಾರಪ್ಪ ಅವರು ಸೋಲು ಕಂಡಿದ್ದಾರೆ.
ವಿಧಾನ ಪರಿಷತ್ ನೇಮಕ
ಚುನಾವಣೆಯಲ್ಲಿ ಸೋತರೂ ಮಧು ಬಂಗಾರಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ವಿಧಾನ ಪರಿಷತ್ ನಾಮ ನಿರ್ದೇಶನದಲ್ಲಿ ಜೆಡಿಎಸ್ ಒಂದು ಸ್ಥಾನ ಬಾಕಿ ಉಳಿಸಿಕೊಂಡಿದೆ. ಈ ಸ್ಥಾನಕ್ಕೆ ಮಧು ಬಂಗಾರಪ್ಪ ಅವರನ್ನು ನಾಮ ನಿರ್ದೇಶನ ಮಾಡಿ ಕುಮಾರಸ್ವಾಮಿ ಅವರ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು.
ಸ್ಥಾನ ಮಾನ ನೀಡಬೇಕು
ಯುವ ನಾಯಕರಾದ ಮಧು ಬಂಗಾರಪ್ಪ ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಅವರನ್ನು ಬೆಳೆಸಬೇಕಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ಯಾವುದೇ ಜೆಡಿಎಸ್ ಶಾಸಕರು ಇಲ್ಲ. 2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಸೂಕ್ತ ಸ್ಥಾನ ಮಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರವೂ ಇದೆ.