ಮಹದಾಯಿಗಾಗಿ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 13: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಮುಖ್ಯಮಂತ್ರಿಗಳ ಸಭೆಗೂ ಮುನ್ನ ಸರ್ವ ಪಕ್ಷ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಮುಂಬೈನಲ್ಲಿ ಅಕ್ಟೋಬರ್ 21ರಂದು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಅಕ್ಟೋಬರ್ 19ರಂದು ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ['ಮಹಾದಾಯಿ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಿರಿ']

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಅಕ್ಟೋಬರ್ 21ರಂದು ಕರ್ನಾಟಕ, ಗೋವಾ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮುಂಬೈನಲ್ಲಿ ಸಭೆ ನಿಗದಿಯಾಗಿದೆ. ಹೀಗಾಗಿ, ಅಂದಿನ ಸಭೆಯಲ್ಲಿ ರಾಜ್ಯದ ನಿಲುವು ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚಿಸಲು ಅ.19ರಂದು ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಸರ್ವ ಪಕ್ಷ ಸಭೆಗೂ ಮುಂಚೆ ಮಹದಾಯಿ ವ್ಯಾಪ್ತಿಯ ಜನಪ್ರತಿನಿಧಿಗಳು, ರೈತ ಮುಖಂಡರ ಜತೆಗೂ ಚರ್ಚೆ ನಡೆಸಿ, ಅವರ ಅಭಿಪ್ರಾಯ ಪಡೆಯಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ರೈತರಲ್ಲಿ ಆಶಾಭಾವನೆ: ಕಾವೇರಿ ನದಿ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ ತೋರಿದ ಕಾಳಜಿ, ಮುತುವರ್ಜಿ, ದಿಟ್ಟತನವನ್ನು ಮಹಾದಾಯಿ ನದಿ ನೀರು ಹಂಚಿಕೆ ವಿಷಯದಲ್ಲೂ ತೋರುತ್ತಾರೆ ಎಂಬ ನಂಬಿಕೆ ಕಳಸಾ ಬಂಡೂರಿ ಹೋರಾಟಗಾರರಲ್ಲಿದೆ.
ಉತ್ತರ ಕರ್ನಾಟಕ ಭಾಗದ ಬರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಮಹದಾಯಿ ನದಿಯಿಂದ 7 ಟಿಎಂಸಿ ಅಡಿ ನೀರನ್ನು ಹರಿಸಿ, ಕಳಸಾ -ಬಂಡೂರಿ ನಾಲೆ ಯೋಜನೆಗೆ ಅನುಮತಿ ನೀಡುವಂತೆ ಕರ್ನಾಟಕ ಮಧ್ಯಂತರ ಅರ್ಜಿ ಹಾಕಿದೆ. ಆದರೆ, ಕೋರ್ಟ್ ಹೊರಗೆ ಈ ಅಂತಾರಾಜ್ಯ ಜಲ ಸಮಸ್ಯೆ ಬಗೆಹರಿಸಿಕೊಳ್ಳಲು ಈಗ ಮಾತುಕತೆ ಆರಂಭವಾಗಿದೆ.












Click it and Unblock the Notifications