ಮಹದಾಯಿ : ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಪ್ರಶ್ನೆಗಳು
Recommended Video

ಬೆಂಗಳೂರು, ಡಿಸೆಂಬರ್ 27 : 'ಬಿ.ಎಸ್.ಯಡಿಯೂರಪ್ಪ ಅವರಿಗೆ ಶಹಬ್ಬಾಸ್ ಗಿರಿ ನೀಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರನ್ನು ಛೂ ಬಿಟ್ಟು ಪ್ರತಿಭಟನೆ ಮಾಡಿಸುತ್ತಿದ್ದಾರೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿ ಮುಂದೆ ಬುಧವಾರ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೋವಾ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವುದು ಬೇಡವಾಗಿದೆ. ಕರ್ನಾಟಕದ ಜನರಿಗೆ ಕುಡಿಯುವ ನೀರು ಕೊಡುವುದು ನಿಮ್ಮ ಕರ್ತವ್ಯವಲ್ಲವೇ?' ಎಂದು ಪ್ರಶ್ನಿಸಿದರು.
'ಪಕ್ಷದ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಬರುತ್ತಿದ್ದ ಕಾರ್ಯಕರ್ತರನ್ನು ತಡೆಯುತ್ತಾರೆ. ಸಿದ್ದರಾಮಯ್ಯ ಅವರು ಪೊಲೀಸರನ್ನು ಬಿಟ್ಟು ಬೆದರಿಸುತ್ತಾರೆ. ಇದೇನು ಗೂಂಡಾ ರಾಜ್ಯವೇ?' ಎಂದು ಕೇಳಿದರು.
'ಪಕ್ಷಾತೀತವಾಗಿ ನಾವು ಕುಡಿಯುವ ನೀರಿನ ವಿಚಾರದಲ್ಲಿ ಹೋರಾಟ ಮಾಡಬೇಕಿತ್ತು. ಆದರೆ, ಗೋವಾ ಕಾಂಗ್ರೆಸ್ ನಾಯಕರ ಮನವೊಲಿಸಲು ನಿಮಗೆ ಏಕೆ ಸಾಧ್ಯವಾಗಿಲ್ಲ?' ಎಂದು ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.
'ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ರೈತರು ಪ್ರತಿಭಟನೆ ನಡೆಸುವಾಗ ಏಕೆ ಬರಬೇಕಿತ್ತು. ಪಕ್ಷದ ಕಚೇರಿ ಮುಂದೆ ರೈತರನ್ನು ಕರೆಸಿ ಪ್ರತಿಭಟನೆ ಮಾಡಿಸಿದ್ದು ನಿಮ್ಮ ರಾಜಕೀಯ ಕುತಂತ್ರವಲ್ಲವೇ?'
ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶೋಭಾ ಕರಂದ್ಲಾಜೆ, ಆರ್.ಅಶೋಕ್, ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.












Click it and Unblock the Notifications