ಬೆಂಗಳೂರಲ್ಲಿ ರಮೇಶ್ ಜಾರಕಿಹೊಳಿ ಸರಣಿ ಸಭೆ, ಮಹೇಶ್ ಕಮಟಳ್ಳಿ ಭೇಟಿ!
ಬೆಂಗಳೂರು, ಮೇ 15 : ಒಂದು ಕಡೆ ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆ ಕಾವು ಜೋರಾಗಿದೆ. ಮತ್ತೊಂದು ಕಡೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಅವರ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಬುಧವಾರ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್ ನಿವಾಸದಲ್ಲಿ ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಶ್ ಕಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದರು. ಸೋಮವಾರದಿಂದ ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿದ್ದಾರೆ.
ಡಿಕೆಶಿ ಜೊತೆ ಕಾಣಿಸಿಕೊಂಡ ಮಹೇಶ್ ಕಮಟಳ್ಳಿ, ರಮೇಶ್ ಏಕಾಂಗಿ?
ಮೇ 9ರಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆ ಕುಂದಗೋಳ ಉಪ ಚುನಾವಣೆಗೆ ಪ್ರಚಾರ ನಡೆಸಿದ್ದ ಮಹೇಶ್ ಕಮಟಳ್ಳಿ ಅವರು ಇಂದು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ರಮೇಶ್ ಜಾರಕಿಹೊಳಿ ಭೇಟಿಯಾದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ!
ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಮಂಗಳವಾರ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಮೇ 23ರ ತನಕ ಏನೂ ಮಾತನಾಡಲ್ಲ : ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಅವರು ಏಕಾಂಗಿಯಾಗಿದ್ದಾರೆ ಎಂಬ ಸುದ್ದಿಗಳ ನಡುವೆಯೇ ಅವರು ಶಾಸಕರ ಜೊತೆ ಸಭೆ ನಡೆಸುತ್ತಿರುವುದು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅವರು ಮುಂದೇನು ಮಾಡಬಹುದು? ಎಂದು ಕಾದು ನೋಡಬೇಕಿದೆ...
ರಮೇಶ್ ಜಾರಕಿಹೊಳಿ ಬಣದಲ್ಲಿದ್ದಾರೆ
ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಶ್ ಕಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಹಿಂದೆ ಆಪರೇಷನ್ ಕಮಲದ ಸುದ್ದಿಗಳು ಹಬ್ಬಿದಾಗಲೂ ಅವರು ರಮೇಶ್ ಜಾರಕಿಹೊಳಿ ಅವರ ಜೊತೆಗೆ ಇದ್ದರು.
ಪಕ್ಷದಲ್ಲಿಯೇ ಇರುತ್ತೇವೆ
ಕುಂದಗೋಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಹೇಶ್ ಕಮಟಳ್ಳಿ ಅವರು, 'ನಮ್ಮಲ್ಲಿ ಸಣ್ಣ ಅಸಮಾಧಾನ ಇರುವುದು ನಿಜ. ಆದರೆ, ಪಕ್ಷದಲ್ಲಿಯೇ ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ರಮೇಶಣ್ಣ ಪಕ್ಷದಲ್ಲಿಯೇ ಇರುತ್ತೇವೆ' ಎಂದು ಹೇಳಿದ್ದರು.
ಪಕ್ಷ ಬಿಡುವ ನಿರ್ಧಾರ ಮಾಡಿಲ್ಲ
'ಯಾವುದೇ ಕಾರಣಕ್ಕೂ ಪಕ್ಷ ಬಿಡುವ ನಿರ್ಧಾರ ಮಾಡಿಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇವೆ. ರಮೇಶಣ್ಣ, ನಾನು ಪಕ್ಷದಲ್ಲಿಯೇ ಇದ್ದೇವೆ. ಇದು ಹೈಕಮಾಂಡ್ ನಾಯಕರಿಗೂ ತಿಳಿದಿದೆ' ಎಂದು ಮಹೇಶ್ ಕಮಟಳ್ಳಿ ಹೇಳಿದ್ದರು.
ಪಕ್ಷ ಬಿಡುವುದಿಲ್ಲ ಎಂಬ ಭರವಸೆ
ಮಹೇಶ್ ಕಮಟಳ್ಳಿ ಅವರು ಪಕ್ಷ ಬಿಡುವುದಿಲ್ಲ, ಪಕ್ಷದಲ್ಲಿಯೇ ಮುಂದುವರೆಯಲಿದ್ದಾರೆ ಎಂಬ ಭರವಸೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ರಮೇಶ್ ಜಾಧವ್, ನಾಗೇಂದ್ರ ಅವರು ಸಹ ಪಕ್ಷದಲ್ಲೇ ಇರುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು.