ಸಂಕ್ರಾಂತಿ ಮುನ್ನ ಸಚಿವ ಸಂಪುಟದಲ್ಲಿ Some ಕ್ರಾಂತಿ!
ಬೆಂಗಳೂರು, ಡಿ. 28: ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ಆಗಲಿದೆ. ಮುಂದಿನ ಸಂಕ್ರಾಂತಿ ವೇಳೆಗೆ ಸಚಿವ ಸಂಪುಟದಲ್ಲಿ some ಕ್ರಾಂತಿ ಆಗಲಿವೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಬೃಹತ್ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಕೆಲವರು ಸಚಿವ ಸ್ಥಾನದಿಂದ ನಿರ್ಗಮಿಸಲಿದ್ದಾರೆ ಎಂಬ ಹೊಸ ಸಂಗತಿ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಹುಟ್ಟು ಹಾಕಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಆಗುತ್ತಾರೆ ಎಂಬ ಸುದ್ದಿ ಹಬ್ಬಿದೆ. ತೆರವಾಗಲಿರುವ ಸಿಎಂ ಸ್ಥಾನಕ್ಕೆ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದೇ ದೊಡ್ಡ ಸುದ್ದಿಯಾಗಿತ್ತು. ಇತ್ತೀಚೆಗೆ ಬಿಜೆಪಿ ಪಾಳಯದಲ್ಲಿ ಮಹತ್ವದ ಬೆಳವಣಿಗೆ ಆಗಿವೆ. ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿಸಿಕೊಂಡಿದ್ದ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನದಿಂದ ಕೋಕ್ ಕೊಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಪಂಚಮಸಾಲಿ ಹೋರಾಟದ ಬೆನ್ನಲ್ಲಿ ಮರುಗೇಶ್ ನಿರಾಣಿ ಸಚಿವ ಸ್ಥಾನ ಅಲಂಕರಿಸಿದ್ದರು. ಸಚಿವರಾದ ಬಳಿಕ ಪಂಚಮಸಾಲಿ ಹೋರಾಟಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡಿರಲಿಲ್ಲ. ಹೀಗಾಗಿ ಹೋರಾಟಗಾರರು ಮುನಿಸಿಕೊಂಡಿದ್ದರು. ದಿಢೀರ್ ಬೆಳವಣಿಗೆ ಹಿನ್ನೆಲೆಯಲ್ಲಿ ಮುರುಗೇಶ್ ನಿರಾಣಿ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂಬ ಸಂಗತಿ ಹೊರ ಬಿದ್ದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಂಚಮಸಾಲಿ ಹೋರಾಟ ನೇತೃತ್ವ ವಹಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಬಳಿ ಸಂಧಾನಕ್ಕೆ ತೆರಳಿದ್ದಾರೆ. ನಿರಾಣಿ ಸಿಎಂ ಆದರೆ ನೀವು ಕ್ಯಾಬಿನೆಟ್ಗೆ ಸೇರ್ಪಡೆ ಆಗಿ ಎಂಬ ಮನವೊಲಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಸಂಧಾನದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ಬೆಳವಣಿಗೆಯಿಂದ ಬಿಜೆಪಿ ಕೇಂದ್ರ ನಾಯಕರು ಕೆಂಡಾಮಂಡಲವಾಗಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷದ ಸಂಘಟನೆ ಮತ್ತ ಚುನಾವಣೆ ಗೆಲುವಿನ ಬಗ್ಗೆ ಆಲೋಚಿಸದೇ ಅಧಿಕಾರಕ್ಕಾಗಿ ಬಡಿದಾಡಿಕೊಳ್ಳುತ್ತಿರುವ ಆಂತರಿಕ ಬೆಳವಣಿಗೆಗಳು ಕೇಂದ್ರ ನಾಯಕರನ್ನು ಮುಜುಗರಕ್ಕೀಡು ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ಕೆ.ಎಸ್. ಈಶ್ವರಪ್ಪ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷದಲ್ಲಿ ನಿಷ್ಠಾವಂತರು ಇದ್ದು, ಮುಂದಿನ ಒಂದು ವರ್ಷದಲ್ಲಿ ಅವರಿಗೂ ಸಚಿವ ಸ್ಥಾನ ನೀಡಬೇಕಾದ ಸಂದಿಗ್ಧತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಚಿವರಿಗೆ ಕೋಕ್ ನೀಡಲಿದ್ದು, ಇನ್ನೂ ಕೆಲವರ ಸಚಿವ ಸ್ಥಾನ ಬದಲಾಗಲಿದೆ. ಬಿಜೆಪಿ ಕಾರ್ಯಕಾರಣಿ ಸಭೆ ಬಳಿಕ ಸಚಿವ ಸಂಪುಟಕ್ಕೆ ಹೊಸಬರು ಸೇರ್ಪಡೆಯಾಗಲಿದ್ದಾರೆ. ಅದೇ ರೀತಿ ಹಳಬರಿಗೆ ಕೋಕ್ ಕೊಡಲಿದ್ದಾರೆ. ಮುಂದಿನ ಸಂಕ್ರಾಂತಿ ವೇಳೆಗೆ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದೆ. ಈ ವಿಚಾರವಾಗಿಯೇ ಜ. 8 ರ ಬಳಿಕ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು.

ಮತ್ತೊಬ್ಬ ಸಚಿವರಿಗೆ ಗೇಟ್ ಪಾಸ್?
ಇನ್ನು ಬಿಜಿಪಿ ಪಕ್ಷದಲ್ಲಿದ್ದುಕೊಂಡು, ಸಚಿವ ಸ್ಥಾನ ಅಲಂಕರಿಸಿದರೂ, ವಿಧಾನ ಪರಿಷತ್ ಚುನಾವಣೆಯಲ್ಲಿ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ ಕಾರಣಕ್ಕೆ ಕ್ರೀಡಾ ಸಚಿವ ನಾರಾಯಣಗೌಡ ಅವರ ಬಗ್ಗೆ ಕೇಂದ್ರ ವರಿಷ್ಠರಿಗೆ ದೂರು ಸಲ್ಲಿಕೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ವರಿಷ್ಠರು ನಾರಾಯಣಗೌಡ ಅವರನ್ನು ಈ ಕಾರಣ ಕೊಟ್ಟು ಸಚಿವ ಸ್ಥಾನದಿಂದ ಇಳಿಸಲಾಗುತ್ತಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಹಲವರ ಖಾತೆ ಬದಲಾವಣೆ
ಕೆಲ ಸಚಿವರಿಗೆ ಕೋಕ್ ಕೊಡಲಿರುವ ಬೆನ್ನಲ್ಲೇ ಕೆಲವು ಸಚಿವರ ಖಾತೆಗಳಲ್ಲಿ ಬದಲಾವಣೆಯಾಗಲಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರ ಖಾತೆ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ಕೊಡಲು ಕೇಂದ್ರ ವರಿಷ್ಠರು ಚಿಂತನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಬದಲಾವಣೆ ಸುದ್ದಿ ಪಕ್ಕಕ್ಕೆ ಸರಿದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ಬದಲಾವಣೆ ಮಾತು ಚರ್ಚೆಯ ಮುನ್ನೆಲೆಗೆ ಬಂದಿದೆ.

ಮೂಲಗಳ ಪ್ರಕಾರ ಬಿಜೆಪಿ ಸಚಿವ ಸಂಪುಟದಲ್ಲಿ ಐವರಿಗೆ ಕೋಕ್ ಕೊಡಲಾಗುತ್ತಿದೆ. ಪಕ್ಷದ ನಿಷ್ಠರಿಗೆ ಆದ್ಯತೆ ನೀಡಲಾಗುತ್ತಿದೆ. ಇದರ ಜತೆಗೆ ಹಲವು ಸಚಿವರ ಖಾತೆಗಳು ಬದಲಾವಣೆಯಾಗಲಿವೆ ಎಂದೇ ಹೇಳಲಾಗುತ್ತಿದೆ. ಅಂತೂ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ನಿರ್ಗಮಿಸಿದ ಬಳಿಕ ಕೇಂದ್ರ ವರಿಷ್ಠರ ಉತ್ತಮ ಆಡಳಿತ ನಿರೀಕ್ಷಿಸಿದ್ದರು. ಆದರೆ, ರಾಜ್ಯದ ಪ್ರಗತಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ವರಿಷ್ಠರು ಮುನಿಸಿಕೊಂಡಿದ್ದಾರೆ. ಹೀಗಾಗಿ ನಾನಾ ಕಾರಣ ಕೊಟ್ಟು ಕೆಲವು ಸಚಿವರ ಸ್ಥಾನಕ್ಕೆ ಕೋಕ್ ಕೊಡಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.












Click it and Unblock the Notifications