ಬ್ರೇಕಿಂಗ್ ನ್ಯೂಸ್ : ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆಗೆ ಸೂಚನೆ
ಬೆಂಗಳೂರು, ಜೂನ್ 19 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನ್ಮದಿನದಂದು ಪಕ್ಷ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಕರ್ನಾಟಕದ ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲು ಸೂಚನೆ ನೀಡಲಾಗಿದೆ.
ಎಐಸಿಸಿ ಬುಧವಾರ ಈ ಕುರಿತು ಆದೇಶ ನೀಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಪುನಾರಚನೆಗೆ ಸೂಚನೆ ನೀಡಲಾಗಿದೆ. ಕೆಪಿಸಿಸಿಯ ಎಲ್ಲಾ ಸಮಿತಿಗಳನ್ನು ವಿಸರ್ಜನೆ ಮಾಡಿ ಹೊಸದಾಗಿ ಸದಸ್ಯರನ್ನು ನೇಮಕ ಮಾಡಲಾಗುತ್ತದೆ.
ಎರಡು ದಿನಗಳಿಂದ ದೆಹಲಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಅವರು ಈ ತೀರ್ಮಾನದ ಹಿಂದೆ ಇದ್ದಾರೆಯೇ? ಕಾದು ನೋಡಬೇಕು. ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ತರಲು ಎಐಸಿಸಿ ಮುಂದಾಗಿದೆ.
ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಎಐಸಿಸಿ ಈ ತೀರ್ಮಾನವನ್ನು ಕೈಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹಿರಿಯ ನಾಯಕರಿಗೆ ಮಹತ್ವದ ಜವಾವ್ದಾರಿಗಳನ್ನು ನೀಡಿ, ಪಕ್ಷ ಸಂಘಟನೆಯ ಹೊಣೆಯನ್ನು ನೀಡುವ ನಿರೀಕ್ಷೆ ಇದೆ.....

ಎಐಸಿಸಿಯ ಸೂಚನೆ ಏನು?
ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಸಂಘಟನೆಯಲ್ಲಿ ಬದಲಾವಣೆ ಮಾಡುವಂತೆ ಎಐಸಿಸಿ ಸೂಚನೆ ನೀಡಿದೆ. ಇದರಿಂದಾಗಿ ಕೆಪಿಸಿಸಿ ಪುನಾರಚನೆ ಆಗಲಿದ್ದು, ಹಿರಿಯ ನಾಯಕರಿಗೆ ಹೆಚ್ಚಿನ ಜವಾಬ್ದಾರಿ ಸಿಗುವ ನಿರೀಕ್ಷೆ ಇದೆ.

ಯಾವ-ಯಾವ ಸಮಿತಿಗಳು
ಕೆಪಿಸಿಸಿಯ ಕಾರ್ಯಕಾರಿ ಸಮಿತಿ, ಪ್ರಚಾರ ಸಮಿತಿ, ಸಮನ್ವಯ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ವಿಸರ್ಜನೆ ಮಾಡಲಾಗುತ್ತದೆ. ಎಲ್ಲಾ ಸಮಿತಿಗಳಿಗೂ ಹೊಸ ಸದಸ್ಯರ ನೇಮಕಾತಿ ನಡೆಯಲಿದೆ. ಇದರಿಂದಾಗಿ ಪಕ್ಷದಲ್ಲಿ ಹಲವು ಬದಲಾವಣೆಯಾಗಲಿದೆ.

ಅಧ್ಯಕ್ಷರ ಬದಲಾಣೆಗೆ ತಡೆ
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಉಂಟಾದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನಡೆಯಲಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ, ಎಐಸಿಸಿ ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರ ಬದಲಾವಣೆ ಮಾಡದಂತೆ ಸೂಚಿಸಿದೆ. ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರು ಮತ್ತು ಈಶ್ವರ ಖಂಡ್ರೆ ಕಾರ್ಯಾಧ್ಯಕ್ಷರಾಗಿದ್ದಾರೆ.

ಮುಂದಿನ ಚುನಾವಣೆಯತ್ತ ಗಮನ
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ 1 ಸ್ಥಾನದಲ್ಲಿ ಜಯಗಳಿಸಿದೆ. ಈ ಫಲಿತಾಂಶದ ಬಳಿಕ ಕೆಪಿಸಿಸಿ ಪುನಾರಚನೆ ಮಾಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಬಹುದು ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಪುನಾರಚನೆ ಮಾಡಲಾಗುತ್ತಿದೆ.

ಸ್ಥಾನ ಕಳೆದುಕೊಳ್ಳಲಿರುವವರು
ಕೆಪಿಸಿಸಿಯಲ್ಲಿ ಬದಲಾವಣೆ ಆಗುವುದರಿಂದ ಉಪಾಧ್ಯಕ್ಷರಾದ ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್, ಡಾ.ಎಲ್.ಹನುಮಂತಯ್ಯ, ವೀರಣ್ಣ ಮತ್ತೀಕಟ್ಟಿ, ಪ್ರೊ.ಬಿ.ಕೆ.ಚಂದ್ರಶೇಖರ್, ಖಜಾಂಚಿ ಕೃಷ್ಣಂರಾಜು, ಪ್ರಧಾನ ಕಾರ್ಯದರ್ಶಿ ಆತ್ಮಾನಂದ ಅವರು ಸ್ಥಾನಗಳನ್ನು ಕಳೆದುಕೊಳ್ಳಲಿದ್ದಾರೆ.












Click it and Unblock the Notifications