ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಶಾಸಕಾಂಗ ಸಭೆ ನಿರ್ಣಯಗಳು
ಬೆಂಗಳೂರು, ಮಾರ್ಚ್.08: ಕರ್ನಾಟಕದಲ್ಲಿ 2021-22ನೇ ಸಾಲಿನ ಬಜೆಟ್ ಮಂಡನೆ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಲಾಯಿತು.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ಡಾ. ಜಿ. ಪರಮೇಶ್ವರ, ಆರ್.ವಿ. ದೇಶಪಾಂಡೆ, ಕೆ.ಆರ್. ರಮೇಶ್ ಕುಮಾರ್, ಶ್ಯಾಮನೂರು ಶಿವಶಂಕರಪ್ಪ, ಸಿ.ಎಂ. ಇಬ್ರಾಹಿಂ, ಕೆ.ಜೆ. ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಧೃವನಾರಾಯಣ್ ಮತ್ತಿತರರ ಉಪಸ್ಥಿತರಿದ್ದರು.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಣಯಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಕಾಂಗ್ರೆಸ್ ಶಾಸಕಾಂಗ ಸಭೆಯ ನಿರ್ಣಯಗಳ ಪಟ್ಟಿ:
- ಬಡವರು, ಮಧ್ಯಮ ವರ್ಗದ ಜನ ಸಂಕಷ್ಟಕ್ಕೆ ತಳ್ಳಿರುವ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಮಂಗಳವಾರ ನಿಲುವಳಿ ಸೂಚನೆ ಮಂಡನೆ.
- ಸಿ.ಡಿ ಪ್ರಕರಣ, ಪ್ರಸಾರಕ್ಕೆ ತಡೆ ಕೋರಿ ಸಚಿವರಿಂದ ನ್ಯಾಯಾಲಯಕ್ಕೆ ಮೊರೆ, ಉಭಯ ಸದನದಲ್ಲಿ ಹೋರಾಟ.
- ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ನಿರ್ಣಯ.
- ಶಾಸಕ ಸಂಗಮೇಶ್ವರ ಕುಟುಂಬ ಹಾಗೂ ಬೆಂಬಲಿಗರ ಮೇಲೆ ಹಾಕಿರುವ ಕೊಲೆ ಯತ್ನ ಪ್ರಕರಣ ಸುಳ್ಳು. ಯಾವುದೇ ಅಹಿತಕರ ಘಟನೆ ನಡೆಯದಿದ್ದರೂ ಬಂಧಿಸುವ ಉದ್ದೇಶದಿಂದ ಪ್ರಕರಣ ದಾಖಲು.
- ಸದನದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಮಾಡಲಾಗಿದ್ದು, ಸ್ಫೀಕರ್ ಅವರಿಗೆ ಮನವಿ ಮಾಡಿದರೂ ಅಮಾನತು ಆದೇಶ ವಾಪಸ್ ಪಡೆದಿಲ್ಲ.
- ಪೊಲೀಸ್ ದೌರ್ಜನ್ಯ ಖಂಡಿಸಿ 13ರಂದು ಶಿವಮೊಗ್ಗ ಚಲೋ ನಡೆಸಲು ತೀರ್ಮಾನ. ಎಲ್ಲ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲು ನಿರ್ಧಾರ.












Click it and Unblock the Notifications