ದೆಹಲಿಗೆ ಬರುವಂತೆ ಕರ್ನಾಟಕ ಕಾಂಗ್ರೆಸಿಗರಿಗೆ ಮಲ್ಲಿಕಾರ್ಜುನ್ ಖರ್ಗೆ ಕರೆ
ಬೆಂಗಳೂರು,ಡಿಸೆಂಬರ್ 12: 2023 ರ ವಿಧಾನಸಭಾ ಚುನಾವಣೆಗೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಇಂದು(ಸೋಮವಾರ) ಮಧ್ಯಾಹ್ನ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕರೆದಿದ್ದು, ಚುನಾವಣಾ ಸಿದ್ದತೆ ಮತ್ತು ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಿದ್ದಾರೆ.
ರಾಷ್ಟ್ರ ರಾಜಧಾನಿಯ ಎಐಸಿಸಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ 14 ನಾಯಕರು ಭಾಗವಹಿಸಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ನಾಯಕರೊಂದಿಗೆ ದೆಹಲಿ ಮಟ್ಟದಲ್ಲಿ ಪ್ರಮುಖ ಸಭೆ ನಡೆಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಕಾರ್ಯತಂತ್ರ, ಪಕ್ಷ ಸಂಘಟನೆ ಹಾಗೂ ಬೃಹತ್ ಸಮಾವೇಶಗಳ ಕುರಿತು ಚರ್ಚೆ ನಡೆಯಲಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಪಕ್ಷಕ್ಕೆ ಗೆಲ್ಲುವ ಸಾಧ್ಯತೆಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಸ್ವಯಂಕೃತ ಅಪರಾಧಗಳಿಂದ ಅಧಿಕಾರದ ಅವಕಾಶ ಕಳೆದುಕೊಳ್ಳುವುದು ಬೇಡ. ಯಾವುದೇ ಗೊಂದಲಗಳಿಗೆ ಅವಕಾಶ ಕೊಡದೆ ರಾಜ್ಯ ನಾಯಕರೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಸಂದೇಶ ನೀಡಲಿದ್ದಾರೆ ಎನ್ನಲಾಗಿದೆ.
ರಾಜ್ಯ ಘಟಕದಲ್ಲಿ ಗುಂಪುಗಾರಿಕೆಯ ಲಕ್ಷಣಗಳು ಕಂಡು ಬಂದಿದ್ದು, ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮಲ್ಲಿಕಾರ್ಜುನ್ ಖರ್ಗೆ ಪಕ್ಷದ ಮುಖಂಡರಿಗೆ ಸೂಚನೆ ನೀಡುವ ಸಾಧ್ಯತೆ ಇದ್ದು, ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆ ನಡೆಯುವ ಸಾಧ್ಯತೆ ಇದೆ.
ಜನವರಿಯಿಂದ ಶುರುವಾಗಲಿರುವ ರಥಯಾತ್ರೆ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಲಿದೆ. ರಾಜ್ಯದ ಮೂಲೆ-ಮೂಲೆಗೆ ಸಂಚರಿಸುವ ರಥಯಾತ್ರೆ ಮೂಲಕ ಕಾರ್ಯಕರ್ತರಲ್ಲಿ ಗೆಲುವಿನ ವಿಶ್ವಾಸ ಮೂಡಿಸಬೇಕು. 224 ಕ್ಷೇತ್ರಗಳಲ್ಲಿ ನಡೆಯಲಿರುವ ರಥಯಾತ್ರೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೂ ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಸಿದ್ಧತೆ ಹಾಗೂ ದಿನಾಂಕ ನಿಗದಿ ಬಗ್ಗೆಯೂ ಚರ್ಚೆಯಾಗಲಿದೆ.
ಇನ್ನು ಕಾಂಗ್ರೆಸ್ ಸೇರ ಬಯಸುವವರ ನಿಜವಾದ ಕಾಳಜಿ, ಅರ್ಹತೆ ಅರ್ಥ ಮಾಡಿಕೊಂಡು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಅವರ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಆಗುವ ಲಾಭ ನಷ್ಟ, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಗುವ ಪರಿಣಾಮವನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂಬ ಅಂಶಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ
ಇನ್ನೂ ಕಲಬುರಗಿಯಲ್ಲಿ ಶನಿವಾರ ನಡೆದ ಪಕ್ಷದ ಕಾರ್ಯಕರ್ತರ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ರಾಜ್ಯದ ಪಕ್ಷದ ನಾಯಕರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಎಂದು ಒತ್ತಾಯಿಸಿ, ಚುನಾವಣೆಯಲ್ಲಿ ಗೆದ್ದ ಮೇಲೆ ಯಾರು ಮುಖ್ಯಮಂತ್ರಿ ಮತ್ತು ಮಂತ್ರಿಯಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪ್ರತಿಪಾದಿಸಿದರು.
ಇನ್ನೂ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಅವರೂ ಉಪಸ್ಥಿತರಿರಲಿದ್ದಾರೆ ಎಂದು ತಿಳಿದು ಬಂದಿದೆ.