ರಾಯಚೂರಲ್ಲಿ ಐಐಟಿ ಸ್ಥಾಪನೆಗೆ ಬೇಡಿಕೆ ಇಟ್ಟ ಖರ್ಗೆ
ಬೆಂಗಳೂರು, ಏ.1 : ರಾಯಚೂರು ಜಿಲ್ಲೆಯಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಬುಧವಾರ ಬೆಳಗ್ಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜನಪ್ರತಿನಿಧಿಗಳ ನಿಯೋಗ ಈ ಕುರಿತು ಮನವಿ ಸಲ್ಲಿಕೆ ಮಾಡಿದೆ. ಹೈದರಾಬಾದ್-ಕರ್ನಾಟಕ ಭಾಗದ 6 ಜಿಲ್ಲೆಗಳ ಜನಪ್ರತಿನಿಧಿಗಳು ಖರ್ಗೆ ಅವರೊಂದಿಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. [ಚಿತ್ರದುರ್ಗದಲ್ಲಿ ಐಐಟಿ ಸ್ಥಾಪನೆ ಮಾಡಿ]

ಮುಖ್ಯಮಂತ್ರಿಗಳ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜು ಖರ್ಗೆ ಅವರು, ರಾಯಚೂರು ಜಿಲ್ಲೆಯಲ್ಲಿ ಐಐಟಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. [ಧಾರವಾಡದಲ್ಲಿ ಐಐಟಿಗೆ 500 ಎಕರೆ: ಗುಂಡೂರಾವ್]
ನಂಜುಂಡಪ್ಪ ಅವರು ನೀಡಿರುವ ವರದಿಯ ಅನ್ವಯ ರಾಯಚೂರು ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಈ ಭಾಗದಲ್ಲಿ ಐಐಟಿ ಸ್ಥಾಪನೆ ಮಾಡಿದರೆ ಜಿಲ್ಲೆಯ ಅಭಿವೃದ್ಧಿಗೂ ಸಹಾಯಕವಾಗಲಿದೆ ಎಂಬ ಹಿನ್ನಲೆಯಲ್ಲಿ ಮವಿ ಸಲ್ಲಿಸಿದ್ದೇವೆ ಎಂದರು. [ಅಸಲಿಗೆ, ಕರ್ನಾಟಕಕ್ಕೆ ಐಐಟಿ ಅಗತ್ಯವಿದೆಯಾ?]
ರಾಯಚೂರಿಗೆ ಉತ್ತಮ ರೈಲ್ವೆ ಮಾರ್ಗವಿದ್ದು, ಸಾರಿಗೆ ಸಂಪರ್ಕ ವ್ಯವಸ್ಥೆ ಉತ್ತಮವಾಗಿದೆ. ಆದ್ದರಿಂದ ರಾಯಚೂರು ಐಐಟಿ ಸ್ಥಾಪನೆಗೆ ಉತ್ತಮ ಸ್ಥಳ ಎಂದು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದ್ದೇವೆ. ನಮ್ಮ ಮನವಿಗೆ ಅವರು ಸ್ಪಂದಿಸಿದ್ದಾರೆ ಎಂದು ಖರ್ಗೆ ತಿಳಿಸಿದರು.

ಈಗಾಗಲೇ ಮೈಸೂರು, ಹಾಸನ, ಧಾರವಾಡ, ಮಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಂದಲೂ ಐಐಟಿ ಸ್ಥಾಪನೆಗೆ ಬೇಡಿಕೆ ಬಂದಿದೆ. ಬೇರೆ ಜಿಲ್ಲೆಯಲ್ಲಿ ಐಐಟಿ ಸ್ಥಾಪಿಸಬೇಡಿ ಎಂದು ಹೇಳುತ್ತಿಲ್ಲ. ಆದರೆ, ರಾಯಚೂರು ಜಿಲ್ಲೆ ಐಐಟಿ ಸ್ಥಾಪನೆಗೆ ಉತ್ತಮ ಸ್ಥಳ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ ಎಂದು ಖರ್ಗೆ ಸ್ಪಷ್ಟಪಡಿಸಿದರು.
ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ನಿಯೋಗದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಸಚಿವರಾದ ಖಮರುಲ್ ಇಸ್ಲಾಂ, ಪರಮೇಶ್ವರ ನಾಯಕ್ ಸೇರಿದಂತೆ ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯ ವಿವಿಧ ಜನಪ್ರತಿನಿಧಿಗಳಿದ್ದರು.












Click it and Unblock the Notifications