ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
ಬೆಂಗಳೂರು, ಜೂ. 08: ರಾಜ್ಯಸಭಾ ಚುನಾವಣೆಗೆ ರಾಜ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಿಧಾನಸೌಧದಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರ ಜೊತೆಗೂಡಿ ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಜೊತೆಗಿದ್ದರು.
Recommended Video
ಇದಕ್ಕೂ ಮೊದಲು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ಬದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಎಲ್ಲ ಶಾಸಕರು ಚುನಾವಣೆಯಲ್ಲಿ ಜಾಗರೂಕತೆಯಿಂದ ಮತದಾನ ಮಾಡುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಬಿ ಫಾರಂ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಖರ್ಗೆ ಅವರು ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ. ಅವರಿಗೆ ಬಿ ಫಾರ್ಮ್ ಕೊಟ್ಟಿದ್ದೇವೆ. ನಮ್ಮದು ಸೆಕ್ಯುಲರ್ ಪಾರ್ಟಿ, ನಾವು ಬಿಜೆಪಿಗೆ ಬೆಂಬಲ ಕೊಡಲ್ಲ. ಯಾರ ಸಂಪರ್ಕದಲ್ಲೂ ನಮ್ಮ ಶಾಸಕರು ಇರಬಾರದು. ನೀವು ಅವರ ಜೊತೆಗೆ ಮಾತಾಡಿದ್ರೆ ಸಾಕು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ನಿಮ್ಮನ್ನ ಅವರು ಟ್ರಾಪ್ ಮಾಡುತ್ತಾರೆ. ಜೆಡಿಎಸ್ ಗೆ ಬೆಂಬಲ ಕೊಡುವ ವಿಚಾರ ನಮ್ಮ ಹೈಕಮಾಂಡ್ ಹೇಳಿದ ಹಾಗೆ ಮಾಡುತ್ತೇವೆ ಎಂದು ಶಾಸಕರಿಗೆ ಸೂಚನೆ ಕೊಟ್ಟಿದ್ದಾರೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದೇವೆ. ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಸಭೆಗೆ ಬಂದಿದ್ದರು. ಮಲ್ಲಿಕಾರ್ಜುನ್ ಖರ್ಗೆಯವರನ್ನ ನಾವು ಅಭ್ಯರ್ಥಿಯಾಗಿಸಿದ್ದೇವೆ ಎಂದಿದ್ದಾರೆ.