ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಖರ್ಗೆ ಹೇಳಿದ್ದೇನು?
Recommended Video

ಬೆಂಗಳೂರು, ಜೂನ್ 27 : ಧರ್ಮಸ್ಥಳದ ಶಾಂತಿವನದಿಂದ ದೆಹಲಿಯ ತನಕ ಒಂದೇ ಮಾತು. ಕರ್ನಾಟಕದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿ ಎಷ್ಟು ದಿನ?. ಆದರೆ, ಸರ್ಕಾರ ಪತನವಾಗಲಿದೆ ಎಂಬ ಮಾತನ್ನು ಕೆಲವು ಕಾಂಗ್ರೆಸ್ ನಾಯಕರು ತಳ್ಳಿ ಹಾಕಿದ್ದಾರೆ.
ಆಪ್ತರ ಜೊತೆ ಧರ್ಮಸ್ಥಳದ ಶಾಂತಿವನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ ಬಳಿಕ ಬಹಿರಂಗವಾದ ವಿಡಿಯೋ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಉಳಿಯಲಿದೆಯೇ? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ಸರ್ಕಾರ ಐದು ವರ್ಷಗಳನ್ನು ಪೂರ್ಣಗೊಳಿಸಲಿದೆ. ಈ ಬಗ್ಗೆ ಎಷ್ಟು ಸಲ ಪ್ರಶ್ನೆ ಮಾಡಿದರೂ ಇದೇ ಉತ್ತರ ನೀಡುವೆ' ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಬುಧವಾರ ಮಾತನಾಡಿದ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, 'ಸಿದ್ದರಾಮಯ್ಯ ಜೊತೆ ನಾನು ಮಾತುಕತೆ ನಡೆಸುತ್ತೇನೆ. ವಿಡಿಯೋ ಬಗ್ಗೆ ವಿಶೇಷವಾದ ಮಾಹಿತಿ ಇಲ್ಲ. ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ' ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಹೇಳಿಕೆ
'ನಾಳೆ ಅಥವ ನಾಡಿದ್ದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದೇನೆ. ಸಮ್ಮಿಶ್ರ ಸರ್ಕಾರದ ಭವಿಷ್ಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕುರಿತು ಆಗ ಮಾತುಕತೆ ನಡೆಸುತ್ತೇನೆ. ವಿಡಿಯೋವನ್ನು ನಾನು ಟಿವಿಯಲ್ಲಿ ನೋಡಿದ್ದೇನೆ ಅಷ್ಟೇ. ಯಾವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಹೇಳಿಕೆ ತಿರುಚಲಾಗಿದೆ?
'ವಿಭಿನ್ನ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ಇವು ವಾಸ್ತವದ ಹೇಳಿಕೆಯೋ? ಅಥವ ಮಾಧ್ಯಮಗಳಲ್ಲಿ ತಿರುಚಲಾಗಿದೆಯೋ ಪರಿಶೀಲಿಸಲಾಗುತ್ತದೆ. ಭಿನ್ನ ಹೇಳಿಕೆ ನೀಡಿರುವ ನಾಯಕರ ಅಭಿಪ್ರಾಯವನ್ನು ಕೇಳಲಿದ್ದೇವೆ' ಎಂದು ಖರ್ಗೆ ಹೇಳಿದರು.
'ಈ ವಿಚಾರವನ್ನು ಹೈಕಮಾಂಡ್ ಸಹ ಗಮನಿಸುತ್ತಿದೆ. ವೈರಲ್ ಆಗಿರುವ ವಿಡಿಯೋವನ್ನು ತಿರುಚಿರುವ ಸಾಧ್ಯತೆ ಇದೆ. ನಿಜವಾಗಿಯೂ ಸಿದ್ದರಾಮಯ್ಯ ಹೇಳಿದ್ದಾರೆಯೇ? ಎಂದು ಅವರನ್ನೇ ಕೇಳಬೇಕಿದೆ' ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲರೂ ಶಕ್ತಿ ತುಂಬುವ ಕೆಲಸ ಮಾಡಬೇಕು
'ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರಕ್ಕೆ ಶಕ್ತಿ ತುಂಬುವ ಕೆಲಸವನ್ನು ಎಲ್ಲರೂ ಮಾಡಬೇಕು. ಮೈತ್ರಿ ಸರ್ಕಾರ ಒಗ್ಗಟ್ಟಾಗಿ ಇದೆ. ಎಷ್ಟು ತೊಂದರೆಗಳು ಬಂದರು ಮೈತ್ರಿ ಮುನ್ನಡೆಸಬೇಕಿದೆ. ಕೋಮುವಾದಿ ಬಿಜೆಪಿಯನ್ನು ದೂರವಿಡುವುದು ನಮ್ಮ ಗುರಿ. ಅದಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇವೆ' ಎಂದು ಖರ್ಗೆ ಹೇಳಿದರು.

ಡಿ.ಕೆ.ಶಿವಕುಮಾರ್ ಹೇಳಿಕೆ
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು, 'ಮೈತ್ರಿ ಸರ್ಕಾರ ಐದು ವರ್ಷಗಳನ್ನು ಪೂರೈಸಲಿದೆ. ಎಲ್ಲರೂ ವ್ಯಕ್ತಿ ಪೂಜೆ ಮಾಡುವುದನ್ನು ಬಿಟ್ಟು ಪಕ್ಷ ಪೂಜೆ ಮಾಡಿ' ಎಂದು ಹೇಳಿದರು.












Click it and Unblock the Notifications