ಜನಸೇವೆಗಾಗಿ ಜಡ್ಜ್ ಹುದ್ದೆಗೆ ರಾಜೀನಾಮೆ, ಜೆಡಿಎಸ್ ಸೇರ್ಪಡೆ!
ಕಲಬುರಗಿ, ಫೆಬ್ರವರಿ 13; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿದು, ಜನಸೇವೆ ಮಾಡಲು ಹಲವರು ಮುಂದಾಗಿದ್ದಾರೆ. ವಿವಿಧ ಪಕ್ಷಗಳ ಟಿಕೆಟ್ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಏಪ್ರಿಲ್ ಅಥವ ಮೇನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.
ವಿಜಯಪುರದ ವ್ಯಕ್ತಿಯೊಬ್ಬರು ಜನಸೇವೆ ಮಾಡಲು ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಚಿತ್ತಾಪುರ ಕಿರಿಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾಗಿ ಉತ್ತಮವಾಗಿ ಸೇವೆ ಸಲ್ಲಿಸಿ ಪ್ರಸಿದ್ಧಿಯಾಗಿದ್ದ ಡಾ. ಸುಭಾಶ್ಚಂದ್ರ ರಾಠೋಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜನರ ಸೇವೆ ಮಾಡಲು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಿಂದ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿಯಾಗಿರುವುದು ಅಚ್ಚರಿ ಉಂಟು ಮಾಡಿದೆ. ಚಿತ್ತಾಪುರದ ಹಾಲಿ ಶಾಸಕರು ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರನಿಗೆ ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನ ಬೇಡ.

ಜನವರಿ 18ರಂದು ರಾಜೀನಾಮೆ
ಡಾ. ಸುಭಾಶ್ಚಂದ್ರ ರಾಠೋಡ 2023ರ ಜನವರಿ 18ರಂದು ಕಿರಿಯ ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ನೀಡಿದರು. ಫೆಬ್ರವರಿ 3ರಂದು ಎಚ್. ಡಿ. ಕುಮಾರಸ್ವಾಮಿ, ಸಿ. ಎಂ. ಇಬ್ರಾಹಿಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ಸೇರಿದರು.
ವಿಧಾನಸಭಾ ಚುನಾವಣೆಗೆ ಚಿತ್ತಾಪುರದಿಂದ ಕಣಕ್ಕಿಳಿಯಲು ತಯಾರಿ ನಡೆಸಿರುವ ಅವರು ಕಂಬಳೇಶ್ವರ ಮಠಕ್ಕೆ ಭೇಟಿ ನೀಡಿ ಸೋಮಶೇಖರ ಶಿವಾಚಾರ್ಯರ ಆಶೀರ್ವಾದ ಪಡೆದಿದ್ದಾರೆ. ಚುನಾವಣಾ ಪ್ರಚಾರವನ್ನು ಸಹ ಆರಂಭಿಸಿದ್ದಾರೆ.

ಬಾಡಿಗೆ ಮನೆ, ಪಕ್ಷದ ಕಚೇರಿ ಓಪನ್
ಡಾ. ಸುಭಾಶ್ಚಂದ್ರ ರಾಠೋಡ ಮೂಲತಃ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದವರು. ಕಾರ್ಮಿಕರ ಕಾನೂನು ವಿಷಯದಲ್ಲಿ ಪಿಎಚ್ಡಿ ಪದವಿ ಪಡೆದ ಕರ್ನಾಟಕದ ಮೊದಲ ಲಂಬಾಣಿಗ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. 2016ರಲ್ಲಿ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಆರಂಭಿಸಿದ್ದರು. ಈಗ ರಾಜೀನಾಮೆ ನೀಡಿದ್ದಾರೆ.
ಈಗಾಗಲೇ ಚಿತ್ತಾಪುರದಲ್ಲಿ ಬಾಡಿಗೆ ಮನೆ ಮಾಡಿದ್ದಾರೆ. ಕಚೇರಿ ಸಹ ತೆರೆದಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳನ್ನು ಮತ್ತು ಬೇರೆ ಪಕ್ಷಕ್ಕೆ ಹೋಗಿದ್ದವರನ್ನು ಸಂಪರ್ಕಿಸಿ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜಕೀಯಕ್ಕೆ ಬಂದಿದ್ದು ಏಕೆ?
ಉನ್ನತ ವ್ಯಾಸಂಗ ಮಾಡಿದವರು ರಾಜಕೀಯಕ್ಕೆ ಬರುವುದಿಲ್ಲ ಎಂದು ಮಾತಿನ ನಡುವೆಯೇ ಡಾ. ಸುಭಾಶ್ಚಂದ್ರ ರಾಠೋಡ ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಬಂದಿದ್ದಾರೆ.
"ಜನರ ಸೇವೆ ಉದ್ದೇಶದೊಂದಿಗೆ ರಾಜಕೀಯಕ್ಕೆ ಪ್ರವೇಶ ಮಾಡಿದ್ದೇನೆ. ಚಿತ್ತಾಪುರ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಜನಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳು ಸಿಗುವುದು ಜೆಡಿಎಸ್ನಿಂದ ಮಾತ್ರ ಸಾಧ್ಯ, ನನಗೊಂದು ಅವಕಾಶ ಕೋಡಿ, ಭ್ರಷ್ಟಾಚಾರ ಮುಕ್ತ ಸಮರ್ಥ ಸಮಾಜ ನಿರ್ಮಿಸಿಕೊಡುತ್ತೇನೆ ಎಂದು ಮತ ಕೇಳುತ್ತೇನೆ" ಎಂದು ಅವರು ಹೇಳಿದ್ದಾರೆ.

2018ರ ಚುನಾವಣೆ ಫಲಿತಾಂಶ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಹಾಲಿ ಶಾಸಕ ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ. 69700 ಮತಗಳನ್ನು ಪಡೆದು ಅವರು 2018ರ ಚುನಾವಣೆಯಲ್ಲಿ ಬಿಜೆಪಿಯ ವಾಲ್ಮಿಕಿ ನಾಯಕ್ (65307) ಸೋಲಿಸಿದ್ದರು. ಜೆಡಿಎಸ್ ಕಳೆದ ಚುನಾವಣೆಯಲ್ಲಿ ಕ್ಷೇತ್ರವನ್ನು ಬಿಎಸ್ಪಿಗೆ ಬಿಟ್ಟುಕೊಟ್ಟಿತ್ತು. ದೇವರಾಜ್ ವಿ. ಕೆ. 1218 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಈ ಬಾರಿಯ ಚುನಾವಣೆಯಲ್ಲಿಯೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಖಚಿತವಾಗಿದೆ. ತಂದೆ ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಪ್ರಿಯಾಂಕ್ ಖರ್ಗೆ ಚುನಾವಣೆ ಎದುರಿಸುತ್ತಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿ ಬದಲಾಗುವ ನಿರೀಕ್ಷೆಯೂ ಇದೆ.












Click it and Unblock the Notifications