ಅಂಬರೀಶ್, ರಮ್ಯಾ ವಿರುದ್ಧ ಮಂಡ್ಯ ಕಾಂಗ್ರೆಸಿಗರು ಗರಂ!
ಮಂಡ್ಯ, ಜ.16 : ಮಂಡ್ಯ ಕಾಂಗ್ರೆಸ್ ಭಿನ್ನಮತ ಮತ್ತೊಮ್ಮೆ ಭುಗಿಲೆದ್ದಿದೆ. ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಮತ್ತು ಸಂಸದೆ ರಮ್ಯಾ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ನಟ-ನಟಿಯರಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡಬೇಡಿ ಎಂದು ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಗುರುವಾರ ಶ್ರೀರಂಗಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಮುಖಂಡ ರವೀಂದ್ರ ಶ್ರೀಕಂಠಯ್ಯ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯತಿರಾಜ್ ವಸತಿ ಮತ್ತು ಮಂಡ್ಯ ಉಸ್ತುವಾರಿ ಸಚಿವ ಅಂಬರೀಶ್ ಮತ್ತು ಸಂಸದೆ ರಮ್ಯಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. [ಮಂಡ್ಯ ಕಾಂಗ್ರೆಸ್ ಸಮರ!]

ನಟ-ನಟಿಯರಿಗೆ ಜಿಲ್ಲೆಯ ಪಕ್ಷ ಸಂಘಟನೆ ಜವಾಬ್ದಾರಿ ನೀಡಬಾರದು. ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಜಿಲ್ಲೆಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರಿಗೆ ಬೇಕಾದವರಿಗೆ ಮಾತ್ರ ಕೆಲಸ ಮಾಡಿಕೊಡುತ್ತಿದ್ದಾರೆ ಎಂದು ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದಾರೆ. [ಮಂಡ್ಯದಲ್ಲಿ ಸಚಿವ ಅಂಬರೀಶ್ ಗೆ ಹಿನ್ನಡೆ!]
ಲೋಕಸಭೆ ಚುನಾವಣೆ ಹಿತದೃಷ್ಟಿಯಿಂದ ಪಕ್ಷ ಸಂಘಟನೆ ಜವಾಬ್ದಾರಿಗಳನ್ನು ಬೇರೆಯವರಿಗೆ ವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರಿಂದ ಕಾರ್ಯಕರ್ತರಿಗೆ ಯಾವುದೇ ಉಪಯೋಗವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇದರಿಂದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಮ್ಮೆ ಭಿನ್ನಮತ ಭುಗಿಲೆದ್ದಿದೆ.
ರಾಹುಲ್ ಗಾಂಧಿಗೆ ದೂರು : ಅಂಬರೀಶ್ ಮತ್ತು ರಮ್ಯಾ ಕಾರ್ಯ ವೈಖರಿಯಿಂದ ಅಸಮಾಧಾನಗೊಂಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ಯತಿರಾಜ್ ಈ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಜಿಲ್ಲೆಯ ರಾಜಕೀಯ ಚಿತ್ರಣದ ವಿವರ ನೀಡಿರುವ ಅವರು, ನಾಯಕರಿಂದ ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯದ ಕುರಿತು ಹೇಳಿದ್ದಾರೆ.
ರವೀಂದ್ರ ಶ್ರೀಕಂಠಯ್ಯ ಮತ್ತು ಅಂಬರೀಶ್ ನಡುವಿನ ಗುದ್ದಾಟ ವಿಧಾನಸಭೆ ಚುನಾವಣೆ ಕಾಲದಿಂದಲೂ ಇದೆ. ಸದ್ಯ ಅದಕ್ಕೆ ಯುವ ಕಾಂಗ್ರೆಸ್ ಧ್ವನಿ ಗೂಡಿಸಿದೆ ಮತ್ತು ಸಂಸದೆ ರಮ್ಯಾ ಅವರ ಹೆಸರನ್ನು ಎಳೆದು ತರಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಬರುವುದಿಲ್ಲ, ಜೆಡಿಎಸ್ ಪಕ್ಷಕ್ಕೆ ಸಹಾಯ ಮಾಡುವ ಅಧಿಕಾರಿಗಳಿದ್ದಾರೆ, ಅಂಬರೀಶ್ ತಮ್ಮ ಬೆಂಬಲಿಗರಿಗೆ ಮಾತ್ರ ಸಹಾಯ ಮಾಡುತ್ತಾರೆ ಎಂಬುದು ಅಸಮಾಧಾನಕ್ಕೆ ಮೂಲ ಕಾರಣವಾಗಿದೆ.











Click it and Unblock the Notifications