Breaking; 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅತಿಥ್ಯ ಮಂಡ್ಯಕ್ಕೆ
ಬೆಂಗಳೂರು, ಜನವರಿ 08; 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಥಳ ನಿಗದಿಯಾಗಿದೆ. ಸಕ್ಕರೆ ನಾಡು ಮಂಡ್ಯಕ್ಕೆ ಕನ್ನಡದ ತೇರು ಎಳೆಯುವ ಅತಿಥ್ಯ ಸಿಕ್ಕಿದೆ.
ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದ ಕೊನೆಯ ದಿನವಾದ ಭಾನುವಾರ ಬೆಳಗ್ಗೆ ನಡೆಸಿದ ಸಭೆಯಲ್ಲಿ ಮುಂದಿನ ಸಮ್ಮೇಳನದ ಸ್ಥಳ ನಿಗದಿ ಮಾಡಲಾಗಿದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮಂಡ್ಯ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳು ಪ್ರಸ್ತಾವನೆ ಸಲ್ಲಿಸಿದ್ದವು.
ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಳ್ಳಾರಿ ಮತ್ತು ಮಂಡ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಸಮ್ಮೇಳನದ ಅತಿಥ್ಯ ಮಂಡ್ಯ ಜಿಲ್ಲೆಗೆ ಸಿಕ್ಕಿತು.
ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ 2ನೇ ದಿನ ಸಭೆ ಸೇರಿ ಮುಂದಿನ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಸಬೇಕು? ಎಂದು ತೀರ್ಮಾನ ಮಾಡಲಾಗುತ್ತದೆ.
ಶನಿವಾರ ಡಾ. ಮಹೇಶ್ ಜೋಶಿ ನೇತೃತ್ವದಲ್ಲಿ ಸಭೆ ನಡೆದರೂ ಸಹ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಮಹೇಶ್ ಜೋಶಿ ಮುಂದಿಟ್ಟ ಹೊಸ ಸೂತ್ರಕ್ಕೆ ಎಲ್ಲಾ ಜಿಲ್ಲೆಗಳು ಒಪ್ಪಿಗೆ ನೀಡಿರಲಿಲ್ಲ. ಆದ್ದರಿಂದ ಭಾನುವಾರಕ್ಕೆ ಸಭೆ ಮುಂದೂಡಲಾಗಿತ್ತು.
ಚಾಮರಾಜನಗರ, ಯಾದಗಿರಿ, ರಾಮನಗರ ಜಿಲ್ಲೆಗಳಲ್ಲಿ ಇದುವರೆಗೂ ಸಾಹಿತ್ಯ ಸಮ್ಮೇಳನ ನಡೆದಿಲ್ಲ ಎಂಬ ಕುರಿತು ಸಭೆಯಲ್ಲಿ ಚರ್ಚೆ ನಡೆದಿತ್ತು. ರಾಜಕೀಯ ನಾಯಕರ ಜೊತೆ ಚರ್ಚೆ ಮಾಡಿ ಮುಂದಿನ ತಿಂಗಳು ಸ್ಥಳ ನಿರ್ಧರಿಸೋಣ ಎಂದು ಚರ್ಚೆ ನಡೆದಿತ್ತು.











Click it and Unblock the Notifications