ಸೆ.13ರಿಂದ ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮ
ಬೆಂಗಳೂರು, ಸೆಪ್ಟೆಂಬರ್ 19 : 2018ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಇದಕ್ಕಾಗಿ 'ಮನೆ-ಮನೆಗೆ ಕಾಂಗ್ರೆಸ್' ಎಂಬ ಕಾರ್ಯಕ್ರಮವನ್ನು ಸೆ.23ರಂದು ಆರಂಭಿಸಲಿದೆ.
ಈ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಡಾ.ಜಿ.ಪರಮೇಶ್ವರ ಅವರು ಜಿಲ್ಲಾ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದರು. ಮಾಜಿ ಸಚಿವ ಖಮರುಲ್ ಇಸ್ಲಾಂ ನಿಧನದ ಸುದ್ದಿ ಬಂದ ಕಾರಣ ಸಭೆಯನ್ನು ಅರ್ಧದಲ್ಲೇ ಮೊಟಕುಗೊಳಿಸಲಾಯಿತು.

'ಮನೆ-ಮನೆಗೆ ಕಾಂಗ್ರೆಸ್' ಕಾರ್ಯಕ್ರಮದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಬೂತ್ ಮಟ್ಟದಲ್ಲಿ ಜನರಿಗೆ ತಲುಪಿಸಲು ಉದ್ದೇಶಿಸಲಾಗಿದೆ.
ರಾಜ್ಯದಲ್ಲಿ 56 ಸಾವಿರ ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೆ ತಲಾ 20 ಜನರ ಸಮಿತಿ ರಚನೆ ಮಾಡಲಾಗುತ್ತದೆ. ಈ ಸಮಿತಿ ಮನೆ-ಮನೆಗೆ ಭೇಟಿ ನೀಡಿ ಸರ್ಕಾರದ ಸಾಧನೆಗಳನ್ನು ತಲುಪಿಸಲಿದೆ. ಒಂದು ವಾರಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಸ್ಥಳೀಯ ನಾಯಕರುಗಳು ಇದರ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ.
ಸೆ.23ರಂದು ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಆಯೋಜನೆ ಮಾಡಲಾಗುತ್ತದೆ. ಈ ಸಮಾವೇಶದಲ್ಲಿ 'ಮನೆ-ಮನೆಗೆ ಕಾಂಗ್ರೆಸ್' ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಕರ್ನಾಟಕ ಬಿಜೆಪಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದು 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆ'ಯನ್ನು ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲು ನಿರ್ಧರಿಸಿದೆ. ನವೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಈ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.












Click it and Unblock the Notifications