ಕರಾವಳಿ ಭಾಗದಲ್ಲಿ ಸರಣಿ ಕೊಲೆ: ಯುವಕರಿಗೆ ಸಿದ್ದರಾಮಯ್ಯ ಪತ್ರ ಮೂಲಕ ಕಿವಿಮಾತು
ಬೆಂಗಳೂರು ಜುಲೈ 29: ಕರ್ನಾಟಕ ಕರಾವಳಿ ಭಾಗದಲ್ಲಿ ಹಿಂದುತ್ವ, ಕೋಮುವಿವಾದ ಹೊಸತೇನಲ್ಲ ಎನ್ನುವಷ್ಟರ ಮಟ್ಟಿಗೆ ಈ ಭಾಗದಲ್ಲಿ ಸಂಘರ್ಷಣೆಗಳು ಆಗಿವೆ. ಇದರಿಂದ ಸಾಕಷ್ಟು ಬಡ ಕುಟುಂಬಗಳ ಮಕ್ಕಳು ಹತ್ಯೆಗೀಡಾಗಿದ್ದಾರೆ. ಕೋಮು ಧ್ವೇಷ ಸದಾ ಹೊಗೆಯಾಡುವಂತ ಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಸಾಕ್ಷಿ ಎಂಬಂತೆ ಪ್ರವೀಣ್ ನೆಟ್ಟಾರು ಸೇರಿದಂತೆ ಅನೇಕರ ಕೊಲೆ ಆಗಿದ್ದು, ಅವುಗಳ ಕಡಿವಾಣಕ್ಕಾಗಿ, ಕೋಮು ಧ್ವೇಷದ ಮನಸ್ಥಿತಿಬದಲಾಯಿಸುವ ಸಂಬಂಧ ವಿರೋಧ ಪಕ್ಷದ ನಾಯಕರು ಕರಾವಳಿ ಸೇರಿದಂತೆ ನಾಡಿನ ಯುವಕರಿಗಾಗಿ ಪತ್ರ ಮೂಲಕ ಕಿವಿ ಮಾತು ಹೇಳಿದ್ದಾರೆ.
ಮಂಗಳೂರು: ಫಾಜಿಲ್ ದಫನಕ್ರಿಯೆ ಅಂತ್ಯ-ಸುರತ್ಕಲ್ನಲ್ಲಿ ಕಟ್ಟೆಚ್ಚರ, ನಿಷೇಧಾಜ್ಞೆ ಜಾರಿ
ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕದಲ್ಲಿ ಹಾಗೂ ನೋವಿನಲ್ಲಿ ಮುಳುಗಿಸಿವೆ. ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ, ಕೆಲವೊಮ್ಮೆ ಕಾರಣಗಳೇ ಇಲ್ಲದೆ ಹತ್ಯೆಗೊಳ್ಳುತ್ತಿರುವುದನ್ನು ನ್ನಡ ನಾಡಿನ ಆತ್ಮಸಾಕ್ಷಿ ಸಹಿಸಬಾರದು. ದುಡಿಯುವ ಜಾತಿ, ಪಂಗಡ, ಧರ್ಮಗಳಿಗೆ ಸೇರಿದ ಮಕ್ಕಳು ವಿನಾ ಕಾರಣ ಹತ್ಯೆಯಾಗುತ್ತಿರುವುದನ್ನು ಯಾವ ನಾಗರಿಕ ಸಮಾಜವೂ ಸಹಿಸಲಾಗದು. ಸಹಿಸಬಾರದು. ಶಾಂತಿ, ಸೌಹಾರ್ದತೆಗೆ ಹೆಸರಾದ ಕರ್ನಾಟಕವನ್ನು ವಿನಾಕಾರಣ ಅಶಾಂತಿಯ ಕಡಲಲ್ಲಿ ಮುಳುಗಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಧರ್ಮದ ಹೆಸರಲ್ಲಿ ಸಾವುಗಳಾದರೆ ರಾಜಕೀಯ ಲಾಭ ಎಂದು ಬಿಜೆಪಿ ನಂಬಿದೆ: ಎಚ್ಡಿಕೆ
ಕೊಲೆಯಿಂದ ಧರ್ಮ ಉಳಿಸಿಕೊಳ್ಳಲಾಗದು
ನಾಡಿನ ಆತ್ಮಸಾಕ್ಷಿಯಂತಿದ್ದ ಪೂರ್ಣಚಂದ್ರ ತೇಜಸ್ವಿಯವರು ಒಮ್ಮೆ 'ಕೊಂದು ಉಳಿಸಿಕೊಳ್ಳುವ ಧರ್ಮವಿದ್ದರೆ ಅದನ್ನು ಧರ್ಮವೆನ್ನಲಾಗುತ್ತದೆಯೇ' ಎಂದು ಪ್ರಶ್ನಿಸಿದ್ದರು. ಬಸವಣ್ಣನವರು 'ಕೊಂದವರುಳಿದರೆ ಕೂಡಲ ಸಂಗಮದೇವಾ' ಎಂದು ಆರ್ತವಾಗಿ ಕೇಳಿದ್ದರು. ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ ಎಂಬ ಮಾತುಗಳನ್ನು ಗುರು ಹಿರಿಯರು ಹೇಳುತ್ತಲೇ ಬಂದಿದ್ದಾರೆ.
ಧರ್ಮವನ್ನು ನೀನು ರಕ್ಷಿಸಿದರೆ ಅದೆ ಧರ್ಮವು ನಿನ್ನನ್ನು ರಕ್ಷಿಸುತ್ತದೆ ಎಂಬ ಮಹಾಭಾರತದ ಮಾತುಗಳನ್ನು ಕೆಲವು ಮತಾಂಧರು ಹಾಗೂ ನಿರ್ಧಿಷ್ಟ ಹಿತಾಸಕ್ತಿಯುಳ್ಳ ಜನರು ಅದರ ಅರ್ಥವನ್ನೆ ಕುಗ್ಗಿಸಿದ್ದಾರೆ. ದಯೆ, ಕರುಣೆ, ಅಸಹಾಯಕರ ರಕ್ಷಣೆ ಮುಂತಾದ ಉದಾತ್ತವಾದ ವಿಶ್ವ ಆದರ್ಶದ ಮಾತುಗಳನ್ನು ತಿರುಚಿ ಧರ್ಮಕ್ಕಾಗಿ ಕೊಲ್ಲು ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.
ಮಕ್ಕಳ ತಲೆಗೆ ಕೋಮು ಕ್ರೌರ್ಯ ತುಂಬುತ್ತಿದ್ದಾರೆ
ಇಸ್ಲಾಮಿನ ಉದಾತ್ತ ತತ್ವಗಳನ್ನು ಮತ್ತು ಶಾಂತಿ, ಸತ್ಯಗಳನ್ನು ಮುಂದು ಮಾಡುವ ಬದಲು ಅಪವ್ಯಾಖ್ಯಾನ ಮಾಡುವ ದುಷ್ಟರಿಂದಾಗಿ ಮುಸ್ಲಿಂ ಬಡ ಯುವಕರ ಮೆದುಳೂ ಹಾಳಾಗುತ್ತಿದೆ. ಹಿಂದುವಿನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಮುಸ್ಲಿಮನನ್ನು ಕೊಲ್ಲು, ಮುಸ್ಲಿಮನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಹಿಂದುವನ್ನು ಕೊಲ್ಲು ಎಂಬ ಕ್ರೌರ್ಯವನ್ನು ಈ ಮಕ್ಕಳ ತಲೆಗೆ ತುಂಬಿದವರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.
ಯುವಕರಲ್ಲಿ ಕ್ರೌರ್ಯವನ್ನು ವ್ಯವಸ್ಥಿತವಾಗಿ ತುಂಬಿದವರನ್ನು ಅಪರಾಧಿಗಳನ್ನಾಗಿ ಮಾಡುವ ಕಾನೂನಿನ ಅವಶ್ಯಕತೆ ಎಲ್ಲಕ್ಕಿಂತ ಹೆಚ್ಚಾಗಿದೆ. ದುಷ್ಟರ ತಾಳಕ್ಕೆ ತಕ್ಕಂತೆ ಈ ಬೇಜವಾಬ್ದಾರಿ ಸರ್ಕಾರವೂ ಕುಣಿಯುತ್ತಿದೆ ಅಥವಾ ಸರ್ಕಾರದ ಕ್ರೂರವಾದ, ಪಕ್ಷಪಾತಿಯಾದ ಕ್ರೂರ ದೊರೆ ಹಮ್ಮುರಾಬಿ ಕಾಲದ ನಿಲುವುಗಳೇ ಅಮಾಯಕ ಮಕ್ಕಳ ಕೊಲೆಗಳಿಗೆ ಕಾರಣವಾಗುತ್ತಿವೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.
ಸಿಎಂ ಬೊಮ್ಮಾಯಿ ಈ ಶತಮಾನದ ಹಮ್ಮುರಾಬಿ
ಬ್ಯಾಬಿಲೋನಿಯಾದಲ್ಲಿ 3,800 ವರ್ಷದ ಹಿಂದೆ ಹಮ್ಮುರಾಬಿ ಎಂಬ ರಾಜನಿದ್ದ. ಯಾರಾದರೂ ಇನ್ನೊಬ್ಬರ ಕಣ್ಣಿಗೆ ಹಾನಿ ಮಾಡಿದರೆ ಹಾನಿ ಮಾಡಿದವನ ಕಣ್ಣುಗಳನ್ನು ಕಿತ್ತು ಹಾಕುವ, ಕೊಲೆ ಮಾಡಿದರೆ ಕೊಲೆ ಮಾಡುವ, ಕೈ ಕಾಲು ಊನವಾದರೆ, ಊನ ಮಾಡಿದವನ ಅಂಗಾಂಗಗಳನ್ನು ಊನ ಮಾಡುವ ಬರ್ಬರ ಕಾನೂನು ಜಾರಿಗೆ ತಂದಿದ್ದ. ಆತ ಜಗತ್ತಿನ ಕ್ರೂರ ದೊರೆ ಎನ್ನಲಾಗುತ್ತದೆ.
ನಮ್ಮ ರಾಜ್ಯದ ಬೇಜವಾಬ್ಧಾರಿಯುತ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಕರಾವಳಿಯಲ್ಲಿ ಹೇಳಿದ 'ಕ್ರಿಯೆಗೆ ಪ್ರತಿಕ್ರಿಯೆ' ಎಂಬ ಮಾತುಗಳು ಥೇಟ್ ಹಮ್ಮುರಾಬಿಯ ಬರ್ಬರ ಕಾನೂನನ್ನೆ ನೆನಪಿಸುತ್ತದೆ. ಬೊಮ್ಮಾಯಿ 21ನೆ ಶತಮಾನದ ಹಮ್ಮುರಾಬಿ ಎಂದು ಕುಖ್ಯಾತವಾಗುತ್ತಾರೆ ಎಂದು ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದರು.
ಕರಾವಳಿಯಲ್ಲಿ ಬಡ ಯುವಕರೇ ಹೆಚ್ಚು ಸಾವು
ಕರಾವಳಿಯಲ್ಲಿ ಅಮಾಯಕ ಯುವಕರು ವಿನಾಕಾರಣ ದುರಂತ ಸಾವನ್ನಪ್ಪುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ದುಡಿಯುವ ಸಮುದಾಯಗಳು ಅತಿ ಜರೂರಾಗಿ ಜಾಗೃತಗೊಳ್ಳಬೇಕು. ಕರಾವಳಿಯ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶೇ.99 ರಷ್ಟು ಅತ್ಯಂತ ಬಡ ಹುಡುಗರು ಹಾಗೂ ಎರಡೆ ಸಮುದಾಯಗಳವರು. ಕೊಲೆಯಾಗುತ್ತಿರುವ ಎರಡೂ ಕಡೆಯ ಹುಡುಗರು. ದುಡಿದು ಕೂಲಿ ಮಾಡಿ ಬದುಕುತ್ತಿರುವವರು.
ಈ ಎರಡೂ ಕಡೆಯ ಹುಡುಗರ ಮೆದುಳಿಗೆ ವಿಷ ಹಾಕುತ್ತಿರುವವರು ಮಕ್ಕಳು ಮಾತ್ರ ಬೆಂಗಳೂರು, ಮುಂಬೈ ನಗರಗಳಲ್ಲಿ ಹಾಗೂ ಕೊಲ್ಲಿ ಯುರೋಪ್, ಅಮೆರಿಕ ಮುಂತಾದ ದೇಶಗಳಲ್ಲಿ ಲಕ್ಷ, ಕೋಟಿಗಳ ಹೆಸರಲ್ಲಿ ಸಂಬಳ ದುಡಿಯುತ್ತಾ ವಾರದ ಕೊನೆಯಲ್ಲಿ ಲಕ್ಷಾಂತರ ಖರ್ಚು ಮಾಡಿ ಪಾರ್ಟಿ ಮಾಡುತ್ತಾ ಮೋಜು ಮಾಡುತ್ತಿದ್ದಾರೆ.
ಉತ್ತಮ ಶಿಕ್ಷಣ, ಆಲೋಚನೆಯಿಂದ ಉತ್ತಮ ಜೀವನ ಸಾಧ್ಯ
ಬಹುಪಾಲು ಜನ ಸೋಷಿಯಲ್ ಮೀಡಿಯಾಗಳಲ್ಲಿ ಉಚಿತವಾಗಿ ಧರ್ಮ ಉಳಿಸುವ ಕುರಿತು ಸಲಹೆಗಳನ್ನು ನೀಡುವ ಕ್ರೌರ್ಯವನ್ನು ಮೆರೆಯುತ್ತಿದ್ದಾರೆ. ಬಡವರ ಮಕ್ಕಳನ್ನು ಬೆಂಕಿಗೆ, ಜೈಲಿಗೆ ತಳ್ಳಿ ತಮ್ಮ ಮಕ್ಕಳ ಏಳಿಗೆಗೆ ಸ್ಪರ್ಧೆ ಬರದ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಈ ಕುತಂತ್ರವನ್ನು ದುಡಿದು ಬದುಕುವ ಎಲ್ಲ ಸಮುದಾಯಗಳ ಯುವಕರು ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ಶಿಕ್ಷಣ, ಒಳ್ಳೆಯ ಉದ್ಯೋಗ, ಉದಾತ್ತವಾದ ಆಲೋಚನೆ, ಶಾಂತಿ, ಸಹಬಾಳ್ವೆಗಳು ಮಾತ್ರ ಯುವಜನರನ್ನು ಏಳಿಗೆಯತ್ತ ಕೊಂಡೊಯ್ಯಲು ಸಾಧ್ಯ. ಕರಾವಳಿಯ ಯುವಜನತೆಗೆ ಇದೆಲ್ಲವನ್ನೂ ವ್ಯವಸ್ಥಿತವಾಗಿ ತಪ್ಪಿಸಲಾಗುತ್ತಿದೆ.
ಸಹಭಾಳ್ವೆಯ ಹಳೆಯ ಕರಾವಳಿ ಪುನಃಸ್ಥಾಪಿಸಿ
ಕರಾವಳಿಯ ಯುವಜನತೆಯಲ್ಲಿ ಕೈ ಮುಗಿದು ವಿನಂತಿಸುತ್ತೇನೆ. ದಯಮಾಡಿ ಸಾಕು ಮಾಡಿ. ಧರ್ಮ, ಕೋಮು ದ್ವೇಷವನ್ನು ದೂರ ಮಾಡಿ. 30ವರ್ಷಗಳ ಹಿಂದಿದ್ದ ಕರಾವಳಿಯನ್ನು ಮತ್ತೆ ನಿರ್ಮಾಣ ಮಾಡಿ. ವೃದ್ಧಾಪ್ಯದಲ್ಲಿ ಮಕ್ಕಳನ್ನು ಕಳೆದುಕೊಂಡ ತಂದೆ ತಾಯಿಗಳನ್ನು, ಎಳೆ ವಯಸ್ಸಿನಲ್ಲಿ ಅಣ್ಣ ತಮ್ಮಂದಿರನ್ನು, ಗಂಡಂದಿರನ್ನು ಕಳೆದುಕೊಂಡವರ ಹೃದಯದ ಬೆಂಕಿಯನ್ನೊಮ್ಮೆ ಅರ್ಥ ಮಾಡಿಕೊಳ್ಳಿ.
ಅಪ್ಪಂದಿರನ್ನು ಕಳೆದುಕೊಂಡು ಅನಾಥರಾದ ಎಳೆಯ ಮಕ್ಕಳ ಗತಿ ಏನು? ಮಕ್ಕಳಿಗೆ ಹಣ ಕೊಡಲಾದೀತೆ?. ಬದುಕಿದ್ದು ಶಾಶ್ವತ ಜೈಲಿಗೆ ಹೋದವರ ಕುಟುಂಬಗಳ ಕಷ್ಟ ದುಃಖಗಳನ್ನು ಒಮ್ಮೆ ನೆನಪಿಸಿಕೊಳ್ಳಿ. ವಕೀಲರ ಫಿಸು ಕೊಡಲು ಮನೆ ಮಠ ಮಾರಿ ಬೀದಿಗೆ ಬಿದ್ದವರ ಸಂಕಷ್ಟಗಳು ನಿಮ್ಮ ಕಣ್ಮುಂದೆ ಬರಲಿ. ನಿಮ್ಮದೆ ಸ್ಕೂಲಿನಲ್ಲಿ, ನಿಮ್ಮ ಜೊತೆಯೆ ಕಲಿತ ಗೆಳೆಯ ಗೆಳತಿಯರು ಉತ್ತಮ ಉದ್ಯೋಗ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಳ್ಳುತ್ತಿರುವಾಗ, ನಿಮ್ಮ ಬದುಕನ್ನು ಯಾರು ಕಿತ್ತುಕೊಂಡರು ಎಂದು ಯೋಚಿಸಿ. ಬದುಕನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಅವರು ಕಿವಿಮಾತು ಹೇಳಿದ್ದಾರೆ.
ಕರಾವಳಿಯಲ್ಲಿ ಮಾಧಕ ದ್ರವ್ಯದ ಮಾಫಿಯಾ
ಕರಾವಳಿಯಲ್ಲಿ ಮಾದಕದ್ರವ್ಯಗಳ ಮಾಫಿಯಾ ಅಟ್ಟ ಹಾಸ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಅದಾನಿಗಳಿಗೆ ಬಂದರುಗಳನ್ನು ಬಿಟ್ಟುಕೊಡುತ್ತಿದೆ. ಗುಜರಾತಿನ ಮುಂದ್ರಾ ಬಂದರಿನಲ್ಲಿ ಒಂದೆ ದಿನ 21,000 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ನಂತರ ದೇಶದ ಒಳಗೆ ಲಕ್ಷಾಂತರ ಕೋಟಿ ಮೌಲ್ಯದ ಮಾದಕ ಪದಾರ್ಥಗಳು ಬಂದಿವೆ ಎಂದು ಹೇಳಲಾಗುತ್ತಿದೆ. ಈ ಮಾದಕ ಪದಾರ್ಥಗಳು ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿವೆ. ಈ ಕೆಟ್ಟ ಸರ್ಕಾರದಿಂದ ಯಾವ ನ್ಯಾಯವನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ.
ಸರ್ಕಾರದ ವರ್ತನೆ ಇನ್ನಷ್ಟು ಹಿಂಸೆ ಸೃಷ್ಟಿಸುವಂತೆ ಇದೆಯೆ ಹೊರತು, ಶಾಂತಿ ಸ್ಥಾಪಿಸುವ ಕಡೆಗೆ ಇಲ್ಲ. ಇನ್ನಷ್ಟು ಅಮಾಯಕರ ಹೆಣ ಬಿದ್ದರೆ ಮಾತ್ರ ತಮ್ಮ ರಾಜಕೀಯ ನಡೆಯುತ್ತದೆ ಎಂದು ಈ ಬಿಜೆಪಿ ದುಷ್ಟರು ಭಾವಿಸಿದ್ದಾರೆ. ದುರ್ಬಲ ಮತ್ತು ಕ್ರೂರ ಮನಸ್ಥಿತಿಯ ಮುಖ್ಯಮಂತ್ರಿ ಮತ್ತು ಬೇಜವಾಬ್ದಾರಿ ಗೃಹಮಂತ್ರಿಯನ್ನು ರಾಜ್ಯ ಕಂಡಿರಲಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕೆಟ್ಟ ಕಾರಣಕ್ಕಾಗಿ ಕರಾವಳಿ ರಾಜ್ಯಕ್ಕೆ ನಿದರ್ಶನವಾಗುವುದು ಬೇಡ. ರಾಜ್ಯ- ದೇಶಗಳ ಜನರು ಪ್ರೀತಿ, ಗೌರವ ಮತ್ತು ಹೆಮ್ಮೆಯ ಭಾವನೆಗಳಿಂದ ನೋಡುತ್ತಿದ್ದ ಕರಾವಳಿಯನ್ನು ನಿರ್ಮಾಣ ಮಾಡಿ. ದ್ವೇಷ ಹುಟ್ಟಿಸುವ, ಕೊಲೆಗೆ, ಹಿಂಸೆಗೆ ಪ್ರೇರೇಪಿಸುವ ಎಲ್ಲ ರಾಕ್ಷಸರನ್ನು ದೂರ ಮಾಡಿ ಇದರ ವಿರುದ್ಧ ಧೈರ್ಯವಾಗಿ ನಿಲ್ಲಿ, ಸೌಹಾರ್ದ ಸಭೆಗಳನ್ನು ಪ್ರಾರಂಭಿಸಿ, ಮನೆಯ ಸದಸ್ಯರನ್ನು ಕಳೆದುಕೊಂಡ ಕುಟುಂಬದ ಸದಸ್ಯರುಗಳೆಲ್ಲರೂ ಧರ್ಮಾತೀತವಾಗಿ ಒಂದಾಗಿ ವೇದಿಕೆ ರಚಿಸಿಕೊಂಡು ಶಾಂತಿ ಸೌಹಾರ್ದದತೆ ಬಾಳಬೇಕು ಎಂದರು.