ಸಂಕಷ್ಟಕ್ಕೆ ಸಿಲುಕಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ!
ಬೆಂಗಳೂರು, ಅಕ್ಟೋಬರ್ 29 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತ, ಬಿಜೆಪಿ ಹೈಕಮಾಂಡ್ ನಾಯಕರ ನೆಚ್ಚಿನ ನಾಯಕ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚುನಾವಣೆಯಲ್ಲಿ ಸೋತರೂ ಡಿಸಿಎಂ ಹುದ್ದೆ ಸಿಕ್ಕಿರುವುದು ಅವರಿಗೆ ಸಂತಸವನ್ನೇನು ತಂದಿಲ್ಲ.
ಕರ್ನಾಟಕದ ಕೆಲವು ಬಿಜೆಪಿ ನಾಯಕರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. 15 ಕ್ಷೇತ್ರಗಳ ಉಪ ಚುನಾವಣೆ ಬಳಿಕ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ ಎಂಬ ಸುದ್ದಿ ಹಬ್ಬಿವೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಅಥಣಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 79,763 ಮತಗಳನ್ನು ಪಡೆದು ಕಾಂಗ್ರೆಸ್ ಮಹೇಶ್ ಕುಮಟಳ್ಳಿ ವಿರುದ್ಧ ಸೋಲು ಕಂಡಿದ್ದರು. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಉಪ ಮುಖ್ಯಮಂತ್ರಿ ಪಟ್ಟ ಸಿಕ್ಕಿದೆ.
ಹೈಕಮಾಂಡ್ ನಾಯಕರಿಗೆ ಲಕ್ಷ್ಮಣ ಸವದಿ ಆಪ್ತರು. ಅದೇ ಕಾರಣಕ್ಕೆ ಸಾರಿಗೆಯಂತಹ ಮಹತ್ವದ ಖಾತೆ ಅವರ ಹೆಗಲೇರಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲೂ ಅವರಿಗೆ ಕೆಲವು ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿತ್ತು.

ವಿವಾದಾತ್ಮಕ ಹೇಳಿಕೆ
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಅನರ್ಹ ಶಾಸಕರು ಕಾರಣ. ಆದರೆ, ಅನರ್ಹ ಶಾಸಕರ ಬಗ್ಗೆ ಲಕ್ಷ್ಮಣ ಸವದಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದಾಗಿ ಬಿಜೆಪಿಯ ಕೆಲವು ನಾಯಕರು ಅವರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಉಪ ಚುನಾವಣೆ ಟಿಕೆಟ್ ಇಲ್ಲ
ಅಥಣಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಲಕ್ಷ್ಮಣ ಸವದಿಗೆ ಟಿಕೆಟ್ ಸಿಗುವುದು ಖಚಿತವಾಗಿಲ್ಲ. ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ. ಇದರಿಂದಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮುಂದಿನ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಪರಿಷತ್ ಸ್ಥಾನವೂ ಖಾಲಿ ಇಲ್ಲ
ಲಕ್ಷ್ಮಣ ಸವದಿಗೆ ವಿಧಾನಸಭೆ ಉಪ ಚುನಾವಣೆ ಟಿಕೆಟ್ ಇಲ್ಲ. ಅತ್ತ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಬಿಟ್ಟುಕೊಡಲು ಯಾರೂ ಒಪ್ಪುತ್ತಿಲ್ಲ. ಆದ್ದರಿಂದ, ಲಕ್ಷ್ಮಣ ಸವದಿ ಭವಿಷ್ಯ ಅತಂತ್ರವಾಗಿದೆ. ವಿಧಾನಸಭೆ, ಪರಿಷತ್ ಎಲ್ಲೂ ಸದಸ್ಯರಾಗಲಿಲ್ಲ ಎಂದರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಹಲವು ನಾಯಕರ ಪ್ರಶ್ನೆ
ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯ ಹಲವು ನಾಯಕರಿದ್ದಾರೆ. ಆದರೆ, ಲಕ್ಷ್ಮಣ ಸವದಿಯನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದು ಏಕೆ? ಎಂಬುದು ಹಲವು ಬಿಜೆಪಿ ನಾಯಕರ ಪ್ರಶ್ನೆ. ಶಾಸಕರೂ ಅಲ್ಲದ, ಪರಿಷತ್ ಸದಸ್ಯರೂ ಅಲ್ಲದ ಲಕ್ಷ್ಮಣ ಸವದಿ ತಮ್ಮ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆಯೇ? ಕಾದು ನೋಡಬೇಕು.












Click it and Unblock the Notifications