ಕಾಂಗ್ರೆಸ್, ಬಿಜೆಪಿ ಬಂಡಾಯ ನಾಯಕರು ಜೆಡಿಎಸ್ ತೆಕ್ಕೆಗೆ? ಎಚ್ಡಿಕೆ ಭೇಟಿ ಮಾಡಿದ ಬಂಡಾಯ ನಾಯಕರು
ಬೆಂಗಳೂರು, ಏಪ್ರಿಲ್ 14: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಿನ ದಿನಕ್ಕೂ ಹೊಸ ಘಟ್ಟದತ್ತ ಕರೆದುಕೊಂಡು ಹೋಗುತ್ತಿದೆ. ಇಂದು ಈ ಪಕ್ಷದಲ್ಲಿದ್ದವರು ನಾಳೆ ಯಾವ ಪಕ್ಷದಲ್ಲಿ ಇರುತ್ತಾರೋ ಹೇಳಲು ಸಾಧ್ಯವಿಲ್ಲದಂತಹ ಸ್ಥಿತಿ ಈಗಿದೆ. ಒಂದು ಪಕ್ಷದಿಂದ ಟಿಕೆಟ್ ನಿರಾಕರಿಸಿದರೆ ಮತ್ತೊಂದು ಪಕ್ಷಕ್ಕೆ ಆರಾಮಾವಾಗಿ ರಾಜಕೀಯ ನಾಯಕರು ಜಿಗಿಯುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರಾಕರಿಸಿದರೆ ಬಿಜೆಪಿಗೆ, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ಗೆ.. ಎರಡು ಪಕ್ಷದಲ್ಲಿ ಟಿಕೆಟ್ ಸಿಗದಿದ್ದರೆ.. ಜೆಡಿಎಸ್. ಇದು ಕರ್ನಾಟಕ ವಿಧಾನಸಭಾ ಚುನಾವಣಾ ಕಣದ ಈಗಿನ ಮಾಹಿತಿ. ಟಿಕೆಟ್ ಘೋಷಣೆ ಬೆನ್ನಲ್ಲೇ ಟಿಕೆಟ್ ಸಿಗದ ಆಕಾಂಕ್ಷಿಗಳು ಭಾರೀ ಬಂಡಾಯವನ್ನೇ ಹೂಡಿದ್ದಾರೆ. ಕಾಂಗ್ರೆಸ್ಗೆ ಮಾತ್ರ ತಟ್ಟಲಿದೆ ಎಂದುಕೊಂಡಿದ್ದ ಬಂಡಾಯ ಬಿಜೆಪಿ ಬುಡವನ್ನೇ ಅಲ್ಲಾಡಿಸುತ್ತಿದೆ.

ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿರುವ ಹಲವು ಕಾಂಗ್ರೆಸ್, ಬಿಜೆಪಿ ಬಂಡಾಯಗಾರರು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಟಿಕೆಟ್ ನಿರಾಕರಿಸಿದ ಮುಖಂಡರ ದಂಡು ಬುಧವಾರ ಸಂಜೆ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಬಂದಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು.
2008ರ ಚುನಾವಣೆಯಲ್ಲಿ ಮಾಜಿ ಸಿಎಂ ದಿವಂಗತ ಧರಂ ಸಿಂಗ್ ಅವರನ್ನು ಸೋಲಿಸಿ, 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಜಯ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಲ್ ಸೇರಿದಂತೆ ಹಲವು ಮುಖಂಡರು ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

ಕಲಬುರಗಿಯ ಕಾಂಗ್ರೆಸ್ ಮುಖಂಡ ಕೃಷ್ಣಾಜಿ ಕುಲಕರ್ಣಿ, ಯಾದಗಿರಿಯ ಡಾ.ಎ.ಬಿ.ಮಾಲಕರೆಡ್ಡಿ, ಶಹಾಪುರದ ಗುರು ಪಾಟೀಲ ಶಿರವಾಳ ಅವರ ಅನುಯಾಯಿಗಳೂ ಜೆಡಿಎಸ್ ಮುಖಂಡರನ್ನು ಭೇಟಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿ ಕುಮಾರಸ್ವಾಮಿ, ಒಂದು ಕಾಲದಲ್ಲಿ ಉತ್ತರ ಕರ್ನಾಟಕ ಜನತಾ ಪರಿವಾರದ ಅದರಲ್ಲೂ ಜೆಡಿಎಸ್ನ ಭದ್ರಕೋಟೆಯಾಗಿತ್ತು ಎಂದಿದ್ದಾರೆ.
ಆಗ ಜೆಡಿಎಸ್ ಭಧ್ರಕೋಟೆಯಾಗಿದ್ದ ಭಾಗದಿಂದ ಹಲವು ಮುಖಂಡರು ಅಜ್ಞಾತ ಕಾರಣಕ್ಕೆ ಜೆಡಿಎಸ್ ತೊರೆದಿದ್ದರು. ಈಗ ಮತ್ತೆ ಜೆಡಿಎಸ್ ಸೇರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದರ ಜೊತೆಗೆ ತಮ್ಮನ್ನು ಭೇಟಿ ಮಾಡಿದ ನಾಯಕರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತೊರೆದವರಿಗೆ ಜೆಡಿಎಸ್ ಸ್ವಾಗತ ಸಮಾರಂಭವನ್ನು ಆಯೋಜಿಸಲಿದೆ.
ಇನ್ನು, ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಶುಕ್ರವಾರ ಸಂಜೆ ಅಥವಾ ಶನಿವಾರ ಪ್ರಕಟಿಸಲಾಗುವುದು. ಜೆಡಿಎಸ್ ತನ್ನ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಡಿಸೆಂಬರ್ನಲ್ಲೇ ಈಗಾಗಲೇ ಬಿಡುಗಡೆ ಮಾಡಿದೆ. ಇದಾದ ಬಳಿಕ ಈವರೆಗೂ ಯಾವುದೇ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಶುಕ್ರವಾರ ರಾಹುಕಾಲದ ನಂತರ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಮಾಜಿ ಶಾಸಕರು ಹಾಗೂ ಮುಖಂಡರ ದಂಡೇ ದೊಡ್ಡ ಮಟ್ಟದಲ್ಲಿ ಸೇರ್ಪಡೆಯಾಗಲಿದೆ. ಉತ್ತರ ಕರ್ನಾಟಕದ ಭಾಗದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ- ಕಾಂಗ್ರೆಸ್ ತೊರೆದು ಶಾಸಕರು ಜೆಡಿಎಸ್ ಸೇರಲಿದ್ದಾರೆ. ಉತ್ತರ ಕರ್ನಾಟಕದಿಂದಲೇ ನಲವತ್ತಕ್ಕೂ ಅಧಿಕ ಸ್ಥಾನಗಳು ಪಕ್ಷಕ್ಕೆ ಬರಲಿವೆ. ಹೀಗಾಗಿ ಸರಳವಾಗಿ 123 ಸ್ಥಾನಗಳು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನಿಸುತ್ತಿದೆ. ನಿರೀಕ್ಷೆ ಮೀರಿ ಮಾಜಿ ಶಾಸಕರು, ಮುಖಂಡರು ಸೇರುತ್ತಿದ್ದು ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಸೇರಿದಂತೆ ಹಲವರು ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಎಚ್ಡಿಕೆ ಸುಳಿವು ನೀಡಿದ್ದಾರೆ.












Click it and Unblock the Notifications