ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ
ಬೆಂಗಳೂರು, ನವೆಂಬರ್ 17: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಒಪ್ಪಿಗೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಖಂಡಿಸಿದ್ದಾರೆ. ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.
"'ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶ ವಾಪಸ್ ಪಡೆಯಲು ನವೆಂಬರ್ 27ರ ತನಕ ಸರ್ಕಾರಕ್ಕೆ ಗಡುವು ನೀಡುತ್ತೇನೆ. ಸರ್ಕಾರ ಆದೇಶ ವಾಪಸ್ ಪಡೆಯದಿದ್ದರೆ ಕನ್ನಡ ಒಕ್ಕೂಟದಿಂದ ಕರ್ನಾಟಕ ಬಂದ್ ನಡೆಸಲಾಗುತ್ತದೆ" ಎಂದು ವಾಟಾಳ್ ನಾಗರಾಜ್ ಹೇಳಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 13/11/2020ರಂದು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಮರಾಠಾ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಪ್ರಾಧಿಕಾರ ರಚನೆ ಮಾಡಲು ಆದೇಶ ನೀಡಲಾಗಿದೆ.
ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿ ಇತ್ಯಾದಿಗಳಿಗಾಗಿ ಪ್ರಾಧಿಕಾರವನ್ನು ಸ್ಥಾಪನೆ ಮಾಡುವುದು, ಸದರಿ ಪ್ರಾಧಿಕಾರ ರಚನೆಗಾಗಿ 50 ಕೋಟಿ ಅನುದಾನವನ್ನು ಆರ್ಥಿಕ ಇಲಾಖೆ ಸಹಮತದೊಂದಿಗೆ ಮೀಸಲಿಡಲು ಆದೇಶ ನೀಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಎದುರಾಗುತ್ತಿದೆ. ಚುನಾವಣೆಯನ್ನು ಮುಂದಿಟ್ಟುಕೊಂಡು ಇಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಪರ ಸಂಘಟನೆಗಳು ಆರೋಪಿಸಿವೆ. ಕನ್ನಡ ನೆಲದಲ್ಲಿ ಮರಾಠಿ ಪ್ರಾಧಿಕಾರ ಏಕೆ? ಎಂದು ಪ್ರಶ್ನಿಸಿವೆ.












Click it and Unblock the Notifications