ಮಸ್ಕಿ, ಬಸವಕಲ್ಯಾಣ ಉಪಚುನಾವಣೆ: ಕುಮಾರಸ್ವಾಮಿ ಶಸ್ತ್ರತ್ಯಾಗ
ಬೆಂಗಳೂರು, ನ 23: ಜೆಡಿಎಸ್ ಭದ್ರಕೋಟೆಯಾಗಿದ್ದ ಶಿರಾ ಮತ್ತು ಒಕ್ಕಲಿಗ ಮತಬ್ಯಾಂಕ್ ನಿರ್ಣಾಯಕವಾಗಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಜೆಡಿಎಸ್ ಸೋತ ನಂತರ, ಮುಂಬರುವ ಎರಡು ಕ್ಷೇತ್ರದ ಅಸೆಂಬ್ಲಿ ಉಪಚುನಾವಣೆಯಲ್ಲಿ ಎಚ್ಚರಿಕೆಯ ನಡೆಯಿಡಲು ಪಕ್ಷ ನಿರ್ಧರಿಸಿದೆ.
ಎರಡು ಕಡೆ ಅದರಲ್ಲೂ ಆರ್.ಆರ್.ನಗರದಲ್ಲಿ ಜೆಡಿಎಸ್ ಠೇವಣಿಯನ್ನು ಕಳೆದುಕೊಂಡಿತ್ತು. ಸೋಲಿನಿಂದಾಗುವ ಸಂಘಟನಾತ್ಮಕ ಹಿನ್ನಡೆಯನ್ನು ಗಮನದಲ್ಲಿ ಇಟ್ಟುಕೊಂಡು, ಮಸ್ಕಿ ಮತ್ತು ಬಸವಕಲ್ಯಾಣ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರಲು ನಿರ್ಧರಿಸಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, "ಮಂಡ್ಯ ಮತ್ತು ತುಮಕೂರು ಲೋಕಸಭಾ ಕ್ಷೇತ್ರದ ಸೋಲಿನ ನಂತರ ನಮ್ಮ ಮುಂದೆ ದೊಡ್ಡ ಸವಾಲು ಇದೆ. ನಾವೀಗ, ಪಕ್ಷ ಸಂಘಟನೆಯ ವಿಚಾರಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದೇವೆ"ಎಂದು ಎಚ್ಡಿಕೆ ಹೇಳಿದ್ದಾರೆ.

"ಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಸ್ಪರ್ಧಿಸದೇ ಇರುವುದೇ ಉತ್ತಮ ಎನ್ನುವ ನಿರ್ಣಯಕ್ಕೆ ಬಂದಿದ್ದೇವೆ. ಆದರೆ, ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಜೊತೆಗೆ ಚರ್ಚಿಸಿ, ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ"ಎಂದು ಕುಮಾರಸ್ವಾಮಿ ಹೇಳಿದ್ದಾರೆ.
"ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಪಕ್ಷ ಬಲವೃದ್ದನೆಯ ಕೆಲಸ ನಡೆಯಬೇಕಿದೆ. ಈ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅದು ವ್ಯರ್ಥ. ಹಾಗಾಗಿ, ಸದ್ಯದ ಪರಿಸ್ಥಿತಿಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬೇಡ ಎಂದು ನಿರ್ಧರಿಸಿದ್ದೇವೆ"ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಶಾಲಾ ಕಾಲೇಜು ತೆರೆಯುವ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯ ಬಗ್ಗೆ ಪ್ರಸ್ತಾವಿಸಿದ ಕುಮಾರಸ್ವಾಮಿ, "ಮುಂದಿನ 2 ತಿಂಗಳು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ, ಸರ್ಕಾರ ಜನರ ಮತ್ತು ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡಬಾರದು"ಎನ್ನುವ ಎಚ್ಚರಿಕೆಯನ್ನು ಕುಮಾರಸ್ವಾಮಿ ನೀಡಿದ್ದಾರೆ.












Click it and Unblock the Notifications