Rahul Gandhi: ಬಸವ ಜಯಂತಿಯಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ; ಲಿಂಗಾಯತ ಮತಕ್ಕಾಗಿ ಕಾಂಗ್ರೆಸ್ನಿಂದ ಮತ್ತೊಂದು ತಂತ್ರ
ನೆತ್ತಿ ಸುಡುವ ಬಿಸಿಲಿನಂತೆ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಮತ್ತು ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಈ ಬಾರಿಯ ವಿಧಾನಸಭೆಯ ಚುನಾವಣೆ ಅಖಾಡ ಜಿದ್ದಾಜಿದ್ದಿನಿಂದ ಕೂಡಿದ್ದು, ಮೂರೂ ಪ್ರಮುಖ ಪಕ್ಷಗಳು ಗೆಲುವಿಗಾಗಿ ಭಾರೀ ಕಸರತ್ತು ನಡೆಸುತ್ತಿವೆ. ಆಯಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮತದಾರರ ಓಲೈಕೆಗೆ ಜದ್ದಿಗೆ ಬಿದ್ದವರಂತೆ ಓಡಾಡುತ್ತಿದ್ದಾರೆ.

ಇದರ ನಡುವೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಾತಿ ಮತ್ತು ಧರ್ಮದ ವಿಚಾರವನ್ನೇ ಚುನಾವಣೆಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಅದರಲ್ಲೂ ರಾಜ್ಯದ ಪ್ರಬಲ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸರ್ಕಸ್ ನಡೆಸುತ್ತಿವೆ.
ಒಂದು ಕಡೆ ಬಿಜೆಪಿ ಪಕ್ಷವು ಲಿಂಗಾಯತ ಸಮುದಾಯವನ್ನು ಮತ್ತು ನಾಯಕರನ್ನು ಕಡೆಗಣಿಸುತ್ತಿದೆ ಎಂಬ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದ್ದು, ಇದೀಗ ಲಿಂಗಾಯತ ಮತಗಳನ್ನು ಸೆಳೆಯುವ ದೃಷ್ಟಿಯಿಂದ ಮತ್ತೊಂದು ತಂತ್ರವನ್ನು ರೂಪಿಸಿದ್ದಾರೆ.
ಈ ಬಾರಿ ಕಾಂಗ್ರೆಸ್ ಪಕ್ಷ ಬಸವಣ್ಣನ ಐಕ್ಯ ಸ್ಥಳವಾದ ಕೂಡಲಸಂಗಮದಲ್ಲಿ ಏಪ್ರಿಲ್ 23ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಕಾರ್ಯಕ್ರಮ ನಡೆಸದೆ, ಅದರಲ್ಲಿ ರಾಹುಲ್ ಗಾಂಧಿ ಹಾಗೂ ಇತರ ನಾಯಕರು ಭಾಗವಹಿಸುವುದರ ಮೂಲಕ ತಾವು ಲಿಂಗಾಯತ ಪರ ಎಂದು ತಿಳಿಸುವುದು ಇದರ ಉದ್ದೇಶವಾಗಿದೆ.
ಏಪ್ರಿಲ್ 23ರಂದು ಕೂಡಲಸಂಗಮಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಸಂಗಮೇಶ್ವರ ದೇವಸ್ಥಾನ, ಬಸವೇಶ್ವರರ ಐಕ್ಯಮಂಟಪ ದರ್ಶನ ಮಾಡಲಿದ್ದಾರೆ. ನಂತರ ಸಭಾಭವನದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಲಿಂಗಾಯತ ಸಮುದಾಯ ಬಸವಣ್ಣನನ್ನು ಪರಮದೈವ ಎಂದು ಆಚರಿಸುತ್ತಾರೆ. ಅದರಲ್ಲೂ ಉತ್ತರ ಕರ್ನಾಟಕದ ಲಿಂಗಾಯತ ಜನರು ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುತ್ತಾರೆ.

ಬಸವ ಜಯಂತಿಯಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿಯ ಕಾರಣ, ಕಾಂಗ್ರೆಸ್ ನಾಯಕರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾ ಅಧ್ಯಕ್ಷ ಎಸ್ ಜಿ.ನಂಜಯ್ಯನಮಠ ಜೊತೆ ಕೆಪಿಸಿಸಿ ಹಾಗೂ ಎಐಸಿಸಿ ಪ್ರತಿನಿಧಿಗಳು ಸಭೆ ನಡೆಸಿದ್ದಾರೆ. ಬಸವ ಸಂಘಟನೆಯ ಹೆಸರಿನಲ್ಲಿ ಕಾರ್ಯಕ್ರಮ ಆಯೋಜನೆಯಾಗುತ್ತಿದೆ.
ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್ ಪಕ್ಷದ ಯಾವೆಲ್ಲ ಮುಖಂಡರು ಭಾಗವಹಿಸಲಿದ್ದಾರೆ ಎಂಬ ಕುರಿತು ಚರ್ಚೆಯಾಗಿಲ್ಲ. ಆದರೆ, ಸ್ವಾಮೀಜಿ ಮತ್ತು ಲಿಂಗಾಯತ ನಾಯಕರಿಗೆ ಹೆಚ್ಚಿನ ಪ್ರಾತನಿಧ್ಯ ನೀಡಿ ಲಿಂಗಾಯತ ಸಮುದಾಯವನ್ನು ಸೆಳೆಯುವುದು ಕಾಂಗ್ರೆಸ್ ಯೋಜನೆಯಾಗಿದೆ.
ಒಂದು ಕಡೆ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಕಾಂಗ್ರೆಸ್ ಮುಂದಾಗಿದ್ದರೆ, ಇದಕ್ಕೆ ಪ್ರತಿಯಾಗಿ ಬಿಜೆಪಿಯೂ ತಾಕತ್ತಿದ್ದರೆ ಕಾಂಗ್ರೆಸ್ ಪಕ್ಷ ಲಿಂಗಾಯತ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿ ಎಂದು ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಇತರ ಲಿಂಗಾಯತ ನಾಯಕರನ್ನು ಮುನ್ನೆಲೆ ತರುವ ಮೂಲಕ ಲಿಂಗಾಯತ ವಿರೋಧಿ ಹಣೆಪಟ್ಟಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿದೆ.












Click it and Unblock the Notifications