ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲಾತಿ ಪಡೆಯುವಲ್ಲಿ ಗೊಂದಲ: ಸಚಿವರ ಸ್ಪಷ್ಟನೆ
ಬೆಂಗಳೂರು, ಡಿಸೆಂಬರ್ 18: ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲಾತಿ ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಸೋಮವಾರ ಸ್ಪಷ್ಟಪಡಿಸಿದರು.
ವೈಜ್ಞಾನಿಕ ಜಾತಿಗಣತಿಗಾಗಿ ಆಗ್ರಹಿಸಿ 'ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ' ವತಿಯಿಂದ ನೀಡಲಾಗಿರುವ ಮನವಿಗೆ ಸಚಿವ ಎಂ.ಬಿ ಪಾಟೀಲ್ ಅವರು ಸಹ ಸಹಿ ಮಾಡಿದ್ದಾರೆ. ಈ ಕುರಿತು ಕೇಳಿದ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

ಹಾಲಿ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದರಲ್ಲಿ ಯಾವುದೇ ತಪ್ಪು ಇಲ್ಲ. ಉದಾಹರಣೆಗೆ, ಲಿಂಗಾಯತರಲ್ಲಿ ಗಾಣಿಗ, ಸಾದರ ಹೀಗೆ 50ಕ್ಕೂ ಹೆಚ್ಚು ಉಪಜಾತಿಗಳು ಇದ್ದು ಅವರಿಗೆ ಲಿಂಗಾಯತ-ಗಾಣಿಗ, ಲಿಂಗಾಯತ- ಸಾದರ ಎಂದು ನಮೂದಿಸಿದ್ದರೆ 2ಎ ಪ್ರವರ್ಗದಡಿ ಮೀಸಲಾತಿ ಸಿಗುವುದಿಲ್ಲ.
ಹೀಗಾಗಿ ಅವರೆಲ್ಲರು ಹಿಂದೂ-ಗಾಣಿಗ ಹಿಂದೂ-ಸಾದರ ಎಂದು ನಮೂದಿಸಿಕೊಳ್ಳುತ್ತಾರೆ. ಇಂತಹ ಸಮಸ್ಯೆಗಳನ್ನು ಸರಿಪಡಿಸಲು ನಾವು ಮುಖ್ಯಮಂತ್ರಿ ಅವರನ್ನು ಕೋರಿದ್ದೇವೆ. ಈ ತೊಂದರೆಗಳ ಬಗ್ಗೆ ಅವರಿಗೂ ಗೊತ್ತಿದೆ ಎಂದು ಸಚಿವರು ವಿವರಿಸಿದರು.
ಸಮುದಾಗಳಲ್ಲಿನ ತೊಡಕು ಸರಿಪಡಿಸಬೇಕು
ಈ ರೀತಿಯ ತೊಡಕುಗಳು ಒಕ್ಕಲಿಗ ಜನಾಂಗ ಸೇರಿದಂತೆ ಬೇರೆ ಸಮುದಾಯಗಳಿಗೂ ಇರಬಹುದು. ಇದ್ದರೆ, ಅವನ್ನು ಕೂಡ ಸರಿಪಡಿಸುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಕಾಂಗ್ರೆಸಿನಲ್ಲಿ 'ಒಬ್ಬ ವ್ಯಕ್ತಿ, ಒಂದು ಹುದ್ದೆ' ನೀತಿ ಅನುಸರಿಸುವ ಸಾಧ್ಯತೆ ಬಗ್ಗೆ ಕೇಳಿದಾಗ, ಅದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಬೇರೆಯವರಿಗೂ ಅವಕಾಶ ಸಿಗಲಿ ಎಂಬ ಕಾರಣಕ್ಕೆ ವರಿಷ್ಠರು ತೀರ್ಮಾನ ತೆಗೆದುಕೊಂಡಾಗ ಅದಕ್ಕೆ ತಕ್ಕಂತೆ ನಾವು ನಡೆದುಕೊಳ್ಳಬೇಕಾಗುತ್ತದೆ ಎಂದು ಸಚಿವರು ಹೇಳಿದರು.
ಕೋಟ್ಯಂತರ ರೂ.ಬಂಡವಾಳ ಹೂಡಿಕೆಗೆ ಅನುಮೋದನೆ
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ ಎಂದು ರಾಜ್ಯ ಕೈಗಾರಿಕೆ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಈ ಮೂಲಕ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವು ಕಂಪನಿಗಳ ಜೊತೆಗೆ ಕೈಗಾರಿಕೆ ಅಭಿವೃದ್ಧಿ ಕುರಿತು ಒಪ್ಪಂದಗಳು ಏರ್ಪಟ್ಟಿವೆ.












Click it and Unblock the Notifications