ಉಪಮುಖ್ಯಮಂತ್ರಿಯಾಗುವ ಆಸೆಯಿದೆ: ಎಂ.ಬಿ. ಪಾಟೀಲ್
ಬೆಂಗಳೂರು, ಮೇ 22: ತಾವು ಉಪಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿ ಎಂಬುದನ್ನು ಮಾಜಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಉಪಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ನಿಂದ ಪರಮೇಶ್ವರ್, ಶ್ಯಾಮನೂರು ಶಿವಶಂಕರಪ್ಪ ಅವರೊಂದಿಗೆ ಎಂ.ಬಿ. ಪಾಟೀಲ್ ಅವರ ಹೆಸರೂ ಕೇಳಿಬಂದಿದೆ.
ನಾನು ಸಚಿವ ಸ್ಥಾನದ ಆಕಾಂಕ್ಷಿ. ಉಪಮುಖ್ಯಮಂತ್ರಿ ಆಗುವ ಆಸೆಯೂ ಇದೆ ಎಂದು ಎಂ.ಬಿ. ಪಾಟೀಲ್ ಹೇಳಿಕೊಂಡಿದ್ದಾರೆ.
ದಕ್ಷಿಣ ಕರ್ನಾಟಕದಿಂದ ಒಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ. ಹೀಗಾಗಿ ಉಪಮುಖ್ಯಮಂತ್ರಿ ಹುದ್ದೆ ಉತ್ತರ ಕರ್ನಾಟಕದಿಂದ ಒಬ್ಬರು ಉಪ ಮುಖ್ಯಮಂತ್ರಿಯಾಗಲಿ ಎಂದು ಅವರು ಹೇಳಿದರು.

ಎಲ್ಲ 78 ಶಾಸಕರೂ ಸಚಿವ ಸ್ಥಾನದ ಆಕಾಂಕ್ಷಿಗಳೇ. ಆದರೆ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಸಚಿವ ಮತ್ತು ಉಪಮುಖ್ಯಮಂತ್ರಿ ಸ್ಥಾನಗಳು ಜಾತಿ, ಸಮುದಾಯ ಮತ್ತು ಹಿರಿತನವನ್ನು ಅವಲಂಬಿಸಿರುತ್ತದೆ.
ಸೋಮವಾರ ಈ ಕುರಿತು ಸಮುದಾಯದ ಮುಖಂಡರು ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರನ್ನೂ ಭೇಟಿಯಾಗಿದ್ದಾರೆ ಎಂದು ತಿಳಿಸಿದರು.
ಲಿಂಗಾಯತ ಧರ್ಮದ ಹೋರಾಟ
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ನಡೆದ ಹೋರಾಟ ಚುನಾವಣೆಯ ವಿಚಾರವಾಗಿರಲಿಲ್ಲ ಎಂದು ಎಂ.ಬಿ. ಪಾಟೀಲ್ ಹೇಳಿದರು.
ನಾನು ಲಿಂಗಾಯತ ಧರ್ಮವನ್ನು ಚುನಾವಣೆಯ ಟ್ರಂಪ್ ಕಾರ್ಡ್ ಆಗಿ ಎಲ್ಲಿಯೂ ಬಳಕೆ ಮಾಡಿಲ್ಲ. ಈ ಹೋರಾಟಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ. ಚುನಾವಣೆಯೇ ಬೇರೆ, ಧರ್ಮದ ಅಸ್ಮಿತೆಯೇ ಬೇರೆ ಎಂದು ಪಾಟೀಲ್ ಹೇಳಿದರು.
ಚುನಾವಣೆ ಮುಗಿಯಿತು ಎಂಬ ಕಾರಣಕ್ಕೆ ಪ್ರತ್ಯೇಕ ಧರ್ಮದ ಹೋರಾಟವನ್ನು ಕೈಬಿಡುವುದಿಲ್ಲ. ಜಾಮದಾರ್ ಅವರ ಜತೆಗೂಡಿ ಮತ್ತೆ ಹೋರಾಟ ಆರಂಭಿಸುತ್ತೇನೆ ಎಂದು ಹೇಳಿದರು.












Click it and Unblock the Notifications