ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದನ್ನು ಕಾಯ್ತಿದ್ದೇನೆ: ಎಂಬಿ ಪಾಟೀಲ್
Recommended Video
ಬೆಂಗಳೂರು, ಮೇ 7: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೆಯ ಅವಧಿಗೆ ಮತ್ತೆ ಸಿಎಂ ಆಗುವುದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬ ಅಭಿಪ್ರಾಯ ಕಾಂಗ್ರೆಸ್ ಪಾಳದಿಂದ ಮತ್ತೆ ಮತ್ತೆ ಕೇಳಿಬರುತ್ತಿದೆ. ಸಿದ್ದರಾಮಯ್ಯ ಅವರೇ ನಮಗೆ ಈಗಲೂ ಮುಖ್ಯಮಂತ್ರಿ ಎಂದು ಕಾಂಗ್ರೆಸ್ನ ಕೆಲವು ಶಾಸಕರು ಹೇಳಿಕೆ ನೀಡುವ ಮೂಲಕ ಮೈತ್ರಿ ಸರ್ಕಾರದಲ್ಲಿ ನಡುಕ ಹುಟ್ಟಿಸಿದ್ದರು.
ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ಒಳ್ಳೆಯದು: ಶಾಸಕ ಸುಧಾಕರ್
ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್ ಕೂಡ ಸೋಮವಾರ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಆಶಯ ವ್ಯಕ್ತಪಡಿಸಿದ್ದರು. ಅದಕ್ಕೆ ಬೆಂಬಲ ಎಂಬಂತೆ ಗೃಹ ಸಚಿವ ಎಂಬಿ ಪಾಟೀಲ್ ಅವರೂ ದನಿಗೂಡಿಸಿದ್ದಾರೆ. ಜತೆಗೆ ತಾವೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂಬುದನ್ನು ಪುನಃ ಹೇಳಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಅವರ ಪರವಾಗಿವೆ. ಆದರೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕು. ಆಗ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಹೇಳಿದ್ದಾರೆ.
ಮತ್ತೆ ಸಿಎಂ ಆಗಬೇಕು
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ನಾನೂ ಹೇಳುತ್ತೇನೆ. ಅವರು ಸಿಎಂ ಆಗಿದ್ದಾಗ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಒಳ್ಳೆಯ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಬಡವರ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ಎರಡನೆಯ ಅವಧಿಗೆ ಸಿಎಂ ಆಗಬೇಕಿತ್ತು. ಆದರೆ ಜನರ ತೀರ್ಪನ್ನು ಗೌರವಿಸಬೇಕು. ಕಾಂಗ್ರೆಸ್ ಸ್ವಂತ ಬಲದಿಂದ ಮತ್ತೆ ಅಧಿಕಾರಕ್ಕೆ ಬಂದರೆ ಆಗ ಸಿದ್ದರಾಮಯ್ಯ ಅವರು ಪುನಃ ಸಿಎಂ ಆಗಲಿ ಎಂದು ಹೇಳಿದರು.
ನಾನೂ ಸಿಎಂ ಆಕಾಂಕ್ಷಿ
ನಾನೂ ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ. ಆದರೆ, ಮತ್ತೊಮ್ಮ ಮುಖ್ಯಮಂತ್ರಿ ಆಗುವ ಅರ್ಹತೆ ಸಿದ್ದರಾಮಯ್ಯ ಅವರಿಗೆ ಇದೆ. ಅವರು ಸಿಎಂ ಆಗುತ್ತಾರೆ ಎಂದರೆ ನಾನು ಕಾಯುತ್ತೇನೆ. ಈಗಿನ ಪರಿಸ್ಥಿತಿಯಲ್ಲಿ ಸಮನ್ವಯ ಸಮಿತಿಯ ಪರಿಣಾಮಕಾರಿ ಕಾರ್ಯನಿರ್ವಹಣೆ ಅತಿ ಮುಖ್ಯವಾಗಿದೆ. ಸಿದ್ದರಾಮಯ್ಯ ಅವರು ಅದರೆಡೆಗೆ ಗಮನ ಹರಿಸಬೇಕಿದೆ ಎಂದರು.
ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ
ಸರ್ಕಾರಕ್ಕೆ ಏನೂ ಆಗೊಲ್ಲ
ರಾಜ್ಯ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಲವು ಬಾರಿ ಹೇಳಿದ್ದಾರೆ. ಆದರೆ, ಸರ್ಕಾರಕ್ಕೆ ಏನೂ ಆಗಿಲ್ಲ. ಮೇ 23ರ ಬಳಿಕ ಕೂಡ ರಾಜಕೀಯ ಧ್ರುವೀಕರಣ ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ ಐದು ವರ್ಷಗಳವರೆಗೂ ಸುಭದ್ರವಾಗಿ ಇರುತ್ತದೆ. ಸಮ್ಮಿಶ್ರ ಸರ್ಕಾರವು ಲೋಕಸಭೆಯಲ್ಲಿ 16-18 ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಹೇಳಿದರು.
ಕೆ. ಸುಧಾಕರ್ ಹೇಳಿದ್ದೇನು
ಮೇ 23ರ ಫಲಿತಾಂಶದ ಬಳಿಕ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದೆ. ಆದರೆ, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಸರ್ಕಾರವಿದ್ದರೆ ಒಳ್ಳೆಯದು. ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾದರೆ ಒಳಿತು. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಂತೆ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾರೆ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿಯೇ ನಾವೆಲ್ಲ ಹೋಗುತ್ತಿದ್ದೇವೆ. ಹೈಕಮಾಂಡ್ ಸಿಎಂ ಬದಲಾಯಿಸಿದರೆ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಕೆ. ಸುಧಾಕರ್ ಹೇಳಿದ್ದರು.