ಮೈಸೂರು ಸ್ಯಾಂಡಲ್ಗೆ ತಮನ್ನಾ ರಾಯಭಾರಿಗೆ ವಿರೋಧ: 'ವಿಜಯೇಂದ್ರಗೂ ಅವರಿಗೂ ವ್ಯವಹಾರ ಇತ್ತೇನೋ'
ಬೆಂಗಳೂರು, ಮೇ 26: ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪಿಗೆ ರಾಯಭಾರಿ ಅನ್ನಾಗಿ ಮಾಡಿರುವುದು ವಿವಾದ ಎಬ್ಬಿಸಿದೆ. ಹಲವರು ತಮನ್ನಾ ಅವರ ಆಯ್ಕೆಯನ್ನು ಖಂಡಿಸಿದ್ದಾರೆ. ತಮನ್ನಾ ಆಯ್ಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟೀಕೆ ಮಾಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ ವಿರುದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕಿಡಿಕಾರಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್ ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಕೆಎಸ್ಡಿಎಲ್ ಸಾರ್ವಕಾಲಿಕ ಉತ್ಪಾದನೆ, ವಹಿವಾಟು ಮತ್ತು ಲಾಭ ಮಾಡಿದೆ. ಇದನ್ನು ನಾನು ನನ್ನ ಸ್ವಂತ ವ್ಯಾಪಾರಕ್ಕಿಂತ ಹೆಚ್ಚು ಆದ್ಯತೆ ಕೊಟ್ಟು, ದಕ್ಷತೆ ಹೆಚ್ಚಿಸಿದ್ದೇನೆ. ಸಂಸ್ಥೆ ಸೊರಗಿದ್ದಾಗ ಏನೂ ಮಾತನಾಡದವರ ಕೆಂಗಣ್ಣು ಈಗ ಅದರ ಮೇಲಿದೆ ಎಂದಿದ್ದಾರೆ. ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯಾಗಿ ಮಾಡಿಕೊಂಡಿರುವುದರ ಹಿಂದೆ ವಾಣಿಜ್ಯಿಕ ಉದ್ದೇಶವಿದೆ. ನಾನು ಇದನ್ನು ಸ್ಪಷ್ಟಪಡಿಸಿದ ಮೇಲೆ ಕೆಲವು ಕನ್ನಡಪರ ಸಂಘಟನೆಗಳ ನಾಯಕರು, ಈ ವಿಚಾರ ತಮಗೆ ಗೊತ್ತಿರಲಿಲ್ಲ. ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ನನಗೆ ಹೇಳಿದ್ದಾರೆ. ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ 23 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಡಿಶ್ ವಾಶರ್ ಮತ್ತು ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ನಾವು ವ್ಯಾಪಾರವನ್ನು ವ್ಯಾಪಾರವಾಗಿಯೇ ನೋಡಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುತ್ತಿದ್ದರು. ಅದನ್ನು ನಾವು ಮಟ್ಟ ಹಾಕಿದೆವು. ಈಗಲೂ ಕೆಲವರು ಇದನ್ನು ನಕಲು ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಸದ್ಯದಲ್ಲೇ ತಾವು ದೆಹಲಿಗೆ ಹೋಗುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಿಗಬೇಕಾಗಿರುವ ಡಿಫೆನ್ಸ್ ಕಾರಿಡಾರ್ ಕೊಡುವಂತೆ ಆಗ್ರಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ. ಇತ್ತೀಚೆಗೆ ನಡೆದ ನೀತಿ ಆಯೋಗದ ಸಭೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿನಲ್ಲಿರುವ ಎಚ್ಎಎಲ್ ಕಾರ್ಖಾನೆಯನ್ನು ತಮ್ಮ ರಾಜ್ಯಕ್ಕೆ ಸ್ಥಳಾಂತರಿಸುವಂತೆ ಕೋರಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ನಾಯ್ಡು ಅವರು ಈ ವ್ಯವಸ್ಥೆಯನ್ನು ಚೆನ್ನಾಗಿ ಬಲ್ಲವರು. ಅವರು ತಮ್ಮಲ್ಲೂ ಎಚ್ಎಎಲ್ ಘಟಕ ಸ್ಥಾಪನೆಗೆ ಕೇಳಿರಬಹುದು. ಅದರಲ್ಲಿ ತಪ್ಪೇನೂ ಇಲ್ಲ. ಒಂದು ವೇಳೆ ಅವರು ಎಚ್ಎಎಲ್ ಸ್ಥಳಾಂತರಕ್ಕೆ ಕೇಳಿದ್ದರೆ ಅದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರವು ಎರಡು ವರ್ಷಗಳ ಹಿಂದೆ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿತು. ಅದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ ರಕ್ಷಣಾ ವಹಿವಾಟಿನಲ್ಲಿ ದೇಶಕ್ಕೆ ಶೇಕಡ 65ರಷ್ಟು ಕೊಡುಗೆ ನೀಡುತ್ತಿರುವ ಮತ್ತು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿ ಇರುವ ನಮ್ಮ ರಾಜ್ಯಕ್ಕೆ ಆ ಯೋಜನೆಯನ್ನು ಘೋಷಿಸದೆ ಇದ್ದುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
ಚಂದ್ರಬಾಬು ನಾಯ್ಡು ತಮ್ಮಲ್ಲಿ ಉದ್ದಿಮೆ ಬೆಳೆಸಲು ಲೇಪಾಕ್ಷಿಯಲ್ಲಾದರೂ ಜಮೀನು ಕೊಡಲಿ, ಮಡಕಶಿರಾದಲ್ಲಾದರೂ ಭೂಮಿ ಕೊಡಲಿ, ಅದು ಅವರಿಗೆ ಬಿಟ್ಟಿದ್ದು. ಆದರೆ ನಮ್ಮಲ್ಲಿರುವ ಉದ್ಯಮಗಳನ್ನು ಎಳೆದುಕೊಂಡು ಹೋಗುವ ಆಲೋಚನೆಯನ್ನು ಅವರು ಮಾಡಿರಲಾರರು ಎಂದು ಭಾವಿಸಿರುವೆ. ರಾಜನಾಥ್ ಸಿಂಗ್ ಬಳಿಗೆ ಹೋಗುವಾಗ ಕೇಂದ್ರ ಸಂಪುಟದಲ್ಲಿ ಇರುವ ನಮ್ಮ ರಾಜ್ಯದ ಸಚಿವರುಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಅದಕ್ಕೂ ಮೊದಲು ಮುಖ್ಯಮಂತ್ರಿಗಳು ಮತ್ತು ಸರಕಾರದ ಮುಖ್ಯ ಕಾರ್ಯದರ್ಶಿಗಳ ಜತೆ ನೀತಿ ಆಯೋಗದ ಸಭೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ವಿದ್ಯಮಾನದ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.












Click it and Unblock the Notifications