ಮೈಸೂರಿನಲ್ಲಿ ಅತ್ಯಾಚಾರ; ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ!
ಮೈಸೂರು, ಆಗಸ್ಟ್ 26; ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಂಗಳವಾರ ನಡೆದ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ ಟೀಕೆಗಳನ್ನು ಮಾಡಿದೆ. ಕಾಂಗ್ರೆಸ್ #LawlessKarnataka ಎಂಬ ಹ್ಯಾಷ್ಟ್ಯಾಗ್ ಅಡಿ ಟ್ವೀಟ್ಗಳನ್ನು ಮಾಡುತ್ತಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ' ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ' ಎಂದು ಆರೋಪ ಮಾಡಿದ್ದಾರೆ. 'ಸಂಪುಟ ವಿಸ್ತರಣೆ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧದ ಪ್ರಕರಣಗಳ ನಿಯಂತ್ರಣಕ್ಕೆ ಗಮನಹರಿಸಬೇಕು' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, "ಮೈಸೂರು ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದ ತನಿಖೆಯ ಮೇಲುಸ್ತುವಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ" ಎಂದು ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತನಿಖೆಯ ಮೇಲುಸ್ತುವಾರಿ ನೋಡಿಕೊಳ್ಳಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿಗೆ ಸೂಚಿಸಲಾಗಿದ್ದು, ತಕ್ಷಣ ಮೈಸೂರಿಗೆ ತೆರಳುವಂತೆ ನಿರ್ದೇಶನ ನೀಡಿದ್ದಾರೆ.
|
ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ
'ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ
ಸಿದ್ದರಾಮಯ್ಯ ತಮ್ಮ ಟ್ವೀಟ್ನಲ್ಲಿ, 'ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳು ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು' ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಸಭೆ
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಮೈಸೂರು ಸಂಸದ ಪ್ರತಾಪ್ ಸಿಂಹ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಭೆಯಲ್ಲಿದ್ದರು. ಘಟನೆ ಬಗ್ಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಗೃಹ ಸಚಿವರು ಹೇಳಿದ್ದೇನು?
ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು, "ಪ್ರಕರಣದ ತನಿಖೆಯ ಮೇಲುಸ್ತುವಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲು ಮಾಡಲಾಗಿದೆ. ತಕ್ಷಣ ಮೈಸೂರಿಗೆ ತೆರಳಿ ತನಿಖೆ ನೇತೃತ್ವ ವಹಿಸಿಕೊಳ್ಳುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
"ಹಿರಿಯ ಅಧಿಕಾರಿಗಳ ತಂಡ ಮೈಸೂರಿಗೆ ತೆರಳುತ್ತಿದೆ. ನುರಿತ ಅಧಿಕಾರಿಗಳ ತಂಡವನ್ನು ರಚನೆ ಮಾಡಿಕೊಂಡು ತನಿಖೆ ನಡೆಸುವಂತೆ ಪ್ರತಾಪ್ ರೆಡ್ಡಿ ಅವರಿಗೆ ಸೂಚಿಸಲಾಗಿದೆ. ಗುರುವಾರ ತಾವು ಮೈಸೂರಿಗೆ ಭೇಟಿ ನೀಡುವುದಾಗಿ" ಗೃಹ ಸಚಿವರು ಹೇಳಿದರು.
Recommended Video

ಎಫ್ಐಆರ್ ದಾಖಲು ವಿಳಂಬ
ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲು ಮಾಡಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೆಪಿಸಿಸಿ ವಕ್ತಾರೆ ಮಂಜುಳಾ ಮಾನಸ ಈ ಕುರಿತು ಮಾತನಾಡಿದ್ದು, "ಮಂಗಳವಾರ ರಾತ್ರಿ 7.30ರ ಸುಮಾರಿಗೆ ಘಟನೆ ನಡೆದಿದೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಖಾಸಗಿ ಆಸ್ಪತ್ರೆಗೆ ಅವರೇ ಹೋಗಿ ದಾಖಲಾಗಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರೂ ಎಫ್ಐಆರ್ ಬುಧವಾರ ದಾಖಲಾಗಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.











Click it and Unblock the Notifications