Caste Census: ಜಾತಿಗಣತಿ ಜಟಾಪಟಿ: ಒಕ್ಕಲಿಗ ಶಾಸಕರ ಸಭೆ ಕರೆದ ಡಿಕೆ ಶಿವಕುಮಾರ್
ಬೆಂಗಳೂರು, ಏಪ್ರಿಲ್ 15: ರಾಜ್ಯ ರಾಜಕೀಯದಲ್ಲಿ ಸದ್ಯ ಜಾತಿಗಣತಿ ವರದಿ ಜಟಾಪಟಿ ಜೋರಾಗಿದೆ. ಜಾತಿಗಣತಿ ಅನ್ನೋ ಜೇನುಗೂಡಿಗೆ ಕಲ್ಲೊಡೆದಿರುವ ಕರ್ನಾಟಕ ಸರ್ಕಾರ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದು, ಪರ ವಿರೋಧವಾಗಿ ಕರ್ನಾಟಕದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಮೂಲಕ ಮಾಹಿತಿ ನೀಡಿದ್ದು, ಜಾತಿ ಗಣತಿ ವಿಚಾರವಾಗಿ ಇಂದು (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು. ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಅವರ ಸರ್ಕಾರಿ ನಿವಾಸದಲ್ಲಿ ದಿನಾಂಕ 15-04-2025 ರಂದು ಮಂಗಳವಾರ ಸಂಜೆ 6.00 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ಕರೆಯಲಾಗಿದೆ.
ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರ್ಕಾರ ಕಸಿಯುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, "ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ. ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ" ಎಂದರು.

ಒಬಿಸಿಗಳ ಮೀಸಲಾತಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷ ಕಾರಿದ್ದರು. ಆದರೆ ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ ಎಂದು ಹೇಳಿದರು.
ಪ್ರಪಂಚದ ಅನೇಕ ರಾಷ್ಟ್ರಗಳು, ನಾಯಕರು ಹೆಚ್ಚು ಗೌರವ ನೀಡುವುದು ನಮ್ಮ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ. ನಮ್ಮ ದೇಶದ ಏಕೈಕ ರಾಷ್ಟ್ರೀಯ ಗ್ರಂಥ. ಭಾರತಕ್ಕೆ ಸಂವಿಧಾನ ಎನ್ನುವ ಆತ್ಮ ನೀಡಿದ ಪರಮಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು.
ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಸಂವಿಧಾನ ಕೊಟ್ಟ ಧೀಮಂತ ವ್ಯಕ್ತಿ. ನಾವು ಅಂಬೇಡ್ಕರ್ ಅವರ ಪ್ರತಿಮೆಗೆ ಪೂಜೆ ಮಾಡುವುದಕ್ಕಿಂತ ಪ್ರತಿಭೆಗೆ ಪೂಜೆ ಮಾಡಬೇಕು. ಜನಸಂಖ್ಯೆಯ ಆಧಾರದ ಮೇಲೆ ನಮ್ಮ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಮೀಸಲಿಡಲಾಗಿದೆ. ಗುತ್ತಿಗೆಯಲ್ಲಿ ಅವಕಾಶ ನೀಡಲಾಗಿದೆ. ಪಾವಗಡದ ಸೌರ ಪಾರ್ಕ್ ನಿರ್ಮಾಣದ ವೇಳೆಯಲ್ಲಿಯೂ ಮೀಸಲಾತಿ ನೀಡಲಾಯಿತು. ಈ ಮೂಲಕ ಅಂಬೇಡ್ಕರ್ ಅವರ ಆಶಯಗಳಿಗೆ ಗೌರವ ನೀಡಿದ್ದೇವೆ. ಶೋಷಿತರನ್ನು ಉದ್ಯಮಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ ಎಂದರು.
ಸಂವಿಧಾನ ರಕ್ಷಣೆಯ ಬಗ್ಗೆ ಏಕೆ ನಾವೆಲ್ಲರು ಇಷ್ಟು ಮಾತನಾಡುತ್ತೇನೆ ಎಂದರೆ, ನಾವು ಮಾತನಾಡಲು ರಕ್ಷಣೆ ನೀಡುತ್ತದೆ. ಬದುಕಿಗೆ, ಆಸ್ತಿಗೆ ಸೇರಿದಂತೆ ನಮ್ಮ ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಂವಿಧಾನ ರಕ್ಷಣೆ ನೀಡುತ್ತದೆ. ನ್ಯಾಯ ಒದಗಿಸುವುದೇ ನಮ್ಮ ಸಂವಿಧಾನದ ಮೂಲಮಂತ್ರ. ಸಂವಿಧಾನವೇ ನಮ್ಮ ತಂದೆ, ತಾಯಿ, ಸಂವಿಧಾನವೇ ಬಂಧು ಬಳಗ, ಅಂಬೇಡ್ಕರ್ ಅವರ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು ಎಂದು ಹೇಳಿದರು.
ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಸಾಕಷ್ಟು ಹೋರಾಟ ನಡೆಸಿದವರು ಬಾಬಾ ಸಾಹೇಬರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡುವಾಗ ಸಂವಿಧಾನದ ಪ್ರತಿ ಹಿಡಿದುಕೊಂಡು ಇತಿಹಾಸ ಸೃಷ್ಟಿ ಮಾಡಿದರು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡಾಗ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರಿಂದ ಸಂವಿಧಾನ ಪೀಠಿಕೆ ಓದಿಸಿ ಅಧಿಕಾರ ಸ್ವೀಕಾರ ಮಾಡಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬರಿಗೆ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿತು. ಚುನಾವಣೆ ಸೋತಾಗ ಅಂಬೇಡ್ಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಾನೂನು ಮಂತ್ರಿಯನ್ನಾಗಿ ಮಾಡಿದಾಗ ಅವರು ಕೇವಲ ಪರಿಶಿಷ್ಟರ ಪರವಾಗಿ ಕೆಲಸ ಮಾಡಲಿಲ್ಲ. ಸಮಾಜದ ಎಲ್ಲರ ಪರವಾಗಿ ಕೆಲಸ ಮಾಡಿದರು. ಕುವೆಂಪು ಅವರು ಹೇಳಿದಂತೆ ಸರ್ವರಿಗೂ ಸಮಬಾಳು, ಸಮಪಾಲು ಎನ್ನುವ ತತ್ವಕ್ಕೆ ಸತ್ವ ನೀಡಿದವರು ಬಾಬಾ ಸಾಹೇಬರು" ಎಂದು ಹೇಳಿದರು.
ಇನ್ನೂ ಶಾಂತಿನಗರ ಕ್ಷೇತ್ರದ ಶಾಸಕರಾದ ಹ್ಯಾರಿಸ್ ಅವರು ಅತ್ಯಂತ ಶ್ರದ್ದೆಯಿಂದ ಕೆಲಸ ಮಾಡುತ್ತಿದ್ದಾರೆ. ಇದೊಂದೆ ಕ್ಷೇತ್ರದಲ್ಲಿ ಮಕ್ಕಳ ಶಿಕ್ಷಣಕ್ಕೆ ಎಂದೇ ರೂ.50 ಕೋಟಿ ಖರ್ಚು ಮಾಡಲಾಗುತ್ತಿದೆ. ನೂತನ ಆಸ್ಪತ್ರೆಯನ್ನೂ ನಿರ್ಮಾಣ ಮಾಡಲಾಗುತ್ತಿದೆ ಎಂದುಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.












Click it and Unblock the Notifications