ರಾಜ್ಯ ಕೋರ್ ಕಮಿಟಿ ಸಭೆ: ಅಮಿತ್ ಶಾ ಜೊತೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಮಿಟೀಂಗ್: ಶುರುವಾಯ್ತು ಆಕಾಂಕ್ಷಿಗಳಿಗೆ ನಡುಕ
ಬೆಂಗಳೂರು,ಮಾರ್ಚ್26: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಧಿಕಾರದ ಗದ್ದುಗೆ ಏರಲು ಮೂರು ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಇತ್ತ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಯ ಬೆನ್ನಲ್ಲೇ ಬಿಜೆಪಿ ಹೈ ಅಲರ್ಟ್ ಆಗಿದೆ.
ಹೌದು, ಕಾಂಗ್ರೆಸ್ ಟಿಕೆಟ್ ಬಿಡುಗಡೆಯ ಬಳಿಕ, ರಾಜ್ಯ ಬಿಜೆಪಿ ಟಿಕೆಟ್ ಬಿಡುಗಡೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಭಾವಿ ನಾಯಕರಾದ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾನುವಾರ ರಾತ್ರಿ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ಚರ್ಚೆ ನಡೆಯಲಿದೆ.

ಇನ್ನೂ ರಾಜ್ಯದಲ್ಲಿ ಚುನಾವಣಾ ಪ್ರಚಾರದ ಕಾವು ಹೆಚ್ಚಾಗುತ್ತಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಆದರೆ ಬಿಜೆಪಿ ಪಟ್ಟಿ ಇನ್ನು ರಾಜ್ಯ ಬಿಜೆಪಿಯಿಂದ ದೆಹಲಿಗೆ ರವಾನೆಯೇ ಆಗಿಲ್ಲ. ವರಿಷ್ಠರ ಸೂಚನೆಯಂತೆ ಜಿಲ್ಲಾ ಸಮಿತಿಗಳಿಂದ ಪ್ರತಿ ಪಕ್ಷದಿಂದ ಮೂರು ಹೆಸರುಗಳನ್ನು ಪಡೆದುಕೊಂಡಿರುವ ರಾಜ್ಯ ಘಟಕ ಹೈಕಮಾಂಡ್ಗೆ ಕಳುಹಿಸಿಕೊಡಬೇಕಿದೆ. ಹಾಗಾಗಿ ಭಾನುವಾರ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಈ ಬಾರಿ ಎಷ್ಟು ಜನ ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಕು, ಯಾವ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ನೀಡಬೇಕು, ನಮ್ಮ ಶಾಸಕರಿಲ್ಲದ ಕ್ಷೇತ್ರಗಳಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗೆ ಅವಕಾಶ ನೀಡಬೇಕೋ ಅಥವಾ ಹೊಸಬರಿಗೆ ಅವಕಾಶ ನೀಡಬೇಕೋ ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತದೆ. ಅಲ್ಲದೇ ಆಡಳಿತ ವಿರೋಧಿ ಅಲೆ ಇರುವ ಶಾಸಕರಿಗೆ ಟಿಕೆಟ್ ನೀಡಬೇಕಾ? ಬೇಡ್ವಾ? ಎಂಬ ಲೆಕ್ಕಾಚಾರ ಚರ್ಚೆಯಾಗಲಿದೆ. ಭಷ್ಟಚಾರದ ಆರೋಪ ಹೊತ್ತ ನಾಯಕರಿಗೆ ಟಿಕೆಟ್ ನಿರಾಕರಿಸಿದರೇ ಪಕ್ಷಕ್ಕೆ ಆಗುವ ಲಾಭ ನಷ್ಟಗಳ ಕುರಿತು ಚರ್ಚಯಾಗಲಿದೆ. ಟಿಕೆಟ್ ಗಾಗಿ ಸಾಕಷ್ಟು ಲಾಭಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಟಿಕೆಟ್ ಕೈ ತಪ್ಪುವ ನಡುಕ ಶುರುವಾಗಿದೆ.
ನಿರೀಕ್ಷೆಯಂತೆ ಈ ಬಾರಿಯೂ ಹಿರಿಯ ನಾಯಕ ಯಡಿಯೂರಪ್ಪ ಬಣ ಹಾಗು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಬಣ ಎನ್ನುವ ವಿಚಾರ ಟಿಕೆಟ್ ಹಂಚಿಕೆಯಲ್ಲಿ ಬರಲಿದ್ದು, ತಮ್ಮ ತಮ್ಮ ಬಣದವರಿಗೆ ಟಿಕೆಟ್ ಕೊಡಿಸಲು ಇಬ್ಬರು ನಾಯಕರೂ ಪ್ರಯತ್ನ ನಡೆಸಲಿದ್ದಾರೆ.

ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಬಳಿಕವೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಉದ್ದೇಶ ಹೊಂದಿದ್ದು, ಕಳೆದ ಬಾರಿ ನಾಲ್ಕು ಹಂತದಲ್ಲಿ ಪಟ್ಟಿಯನ್ನು ಬಿಡಗಡೆ ಮಾಡಲಾಗಿತ್ತು. ಆದರೆ, ಈ ಬಾರಿ ಮೂರು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡುವ ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನೂ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅಮಿತ್ ಶಾ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.












Click it and Unblock the Notifications