ಮೈಸೂರಿನಲ್ಲಿ ಅಕ್ಟೋಬರ್ ನಲ್ಲಿ ಉದ್ಯೋಗ ಮೇಳ : ಸಿದ್ದರಾಮಯ್ಯ
ಬೆಂಗಳೂರು, ಆ.09 : 'ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರ ಅನುಕೂಲಕ್ಕಾಗಿ ಮೈಸೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಿದ್ದರಾಮಯ್ಯ, 'ಉದ್ಯೋಗ ಮೇಳದಲ್ಲಿ ಮೈಸೂರು, ಚಾಮರಾಜನಗರ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ಭಾಗವಹಿಸಲಿದ್ದಾರೆ' ಎಂದರು. ಮೇಳದಲ್ಲಿ ಯುವ ಸಮೂಹ ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
'ಮೈಸೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಕಾರ್ಖಾನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗಿವೆ. ಅಲ್ಲಿ ಸ್ಥಳೀಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸಿಗುವಂತಾಗಬೇಕು. ಅದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ನಡೆಸಲು, ಕೌಶಲ್ಯ ತರಬೇತಿ ಮೇಳ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ' ನಿರ್ದೇಶನ ನೀಡಿದರು.
ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕಾ ಖರ್ಗೆ, ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದರು.