ಮೇಕೆದಾಟು ವಿವಾದ : ಸರ್ವಪಕ್ಷ ನಿಯೋಗದಿಂದ ಮೋದಿ ಭೇಟಿ
ಬೆಂಗಳೂರು, ಏ. 29 : ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಕುರಿತು ಚರ್ಚೆ ನಡೆಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ನಿಯೋಗದೊಂದಿಗೆ ಏ.30ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಕಾಲಾವಕಾಶ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬರೆದ ಪತ್ರಕ್ಕೆ ಪ್ರತಿಕ್ರಿಯೆ ಸಿಕ್ಕಿದ್ದು ಏ.30ರ ಗುರುವಾರ ಮಧ್ಯಾಹ್ನ ಭೇಟಿಗೆ ಪ್ರಧಾನಿ ಕಚೇರಿ ಸಮಯಾವಕಾಶ ನೀಡಿದೆ. [ಮೇಕೆದಾಟು ಯೋಜನೆ ವಿವಾದವೇನು?]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಮುಖಂಡರು, ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗ ಪ್ರಧಾನಿಯವರನ್ನು ಭೇಟಿ ಮಾಡಲಿದೆ. ಕರ್ನಾಟಕ ಮೇಕೆದಾಟು ಯೋಜನೆ ಆರಂಭಿಸುತ್ತಿರುವುದು ಕುಡಿಯುವ ನೀರಿಗಾಗಿ ಎಂದು ನಿಯೋಗ ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡಲಿದೆ.[ಮೇಕೆದಾಟು ಯೋಜನೆಗೆ ಕಾನೂನು ತೊಡಕಿದೆಯೇ?]
ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುತ್ತಿದೆ. ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ಏ.17ರಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಿದ್ದವು. ಏ.22ರಂದು ಸಿದ್ದರಾಮಯ್ಯ ಅವರು ಮೋದಿ ಅವರನ್ನು ಭೇಟಿ ಮಾಡಬೇಕಾಗಿತ್ತು. ಆದರೆ, ಸಮಯಾವಕಾಶ ಸಿಕ್ಕಿರಲಿಲ್ಲ. [ಏ.17ರ ಕರ್ನಾಟಕ ಬಂದ್ ಚಿತ್ರಗಳು]

ಏ.30ರಂದು ಸರ್ವಪಕ್ಷ ನಿಯೋಗದೊಂದಿಗೆ ಮೋದಿ ಭೇಟಿ
ಕರ್ನಾಟಕ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಪಕ್ಷ ನಿಯೋಗ ಏ.30ರಂದು ಭೇಟಿ ಮಾಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಮುಖಂಡರು, ರಾಜ್ಯದ ಸಂಸದರನ್ನು ಒಳಗೊಂಡ ನಿಯೋಗ ಪ್ರಧಾನಿಯವರನ್ನು ಭೇಟಿ ಮಾಡಲಿದೆ.

ಯೋಜನೆ ಕುರಿತು ಕರ್ನಾಟಕದ ವಾದವೇನು?
ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾಪವನ್ನು ಕರ್ನಾಟಕ ಸರ್ಕಾರ ಮುಂದಿಟ್ಟಿದೆ. ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಅಂತಹ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಿಕೊಳ್ಳುವುದು ಯೋಜನೆ ಮುಖ್ಯ ಉದ್ದೇಶವಾಗಿದೆ ಎಂದು ನಿಯೋಗ ಪ್ರಧಾನಿ ಅವರಿಗೆ ಮನವರಿಕೆ ಮಾಡಿಕೊಡಲಿದೆ.

ತಮಿಳುನಾಡಿನ ವಿರೋಧವೇಕೆ?
ಕಾವೇರಿ ನದಿ ಪಾತ್ರದ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸುವ ಪ್ರಸ್ತಾವನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಿದರೆ ಅದು ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಉಲ್ಲಂಘನೆಯಾಗುತ್ತದೆ ಮತ್ತು ನಮ್ಮ ರಾಜ್ಯಕ್ಕೆ ಹರಿದು ಬರುವ ನೀರಿನಲ್ಲಿ ಕೊರತೆ ಉಂಟಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಣೆಕಟ್ಟು ಪ್ರಸ್ತಾವನೆ ಹೊಸದಲ್ಲ
ಕರ್ನಾಟಕ ಮೇಕೆದಾಟು ಯೋಜನೆ ಪ್ರಸ್ತಾವನೆ ಮುಂದಿಡುತ್ತಿರುವುದು ಇದೇ ಮೊದಲಲ್ಲ. ಕಾವೇರಿ ನ್ಯಾಯಧೀಕರಣದ ತೀರ್ಪು 2007ರ ಫೆಬ್ರವರಿ 2ರಂದು ಹೊರಬಿತ್ತು. ಆಗ ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಪ್ರಸ್ತಾವನೆ ನಮ್ಮ ಮುಂದಿದೆ ಎಂದು ನ್ಯಾಯಾಧೀಕರಣ ಮುಂದೆ ಅರ್ಜಿ ಸಲ್ಲಿಸಿದೆ. ಇದೇ ರೀತಿ ಸುಪ್ರೀಂಕೋರ್ಟ್ಗೂ ಸಹ ಅರ್ಜಿ ಸಲ್ಲಿಕೆಯಾಗಿದೆ.

ಕರ್ನಾಟಕ ಬಂದ್ ನಡೆಸಲಾಗಿದೆ
ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ಏ.17ರಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಿದ್ದವು. ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿವೆ.












Click it and Unblock the Notifications