ಮೇಕೆದಾಟು ಪಾದಯಾತ್ರೆ: ಡಿಕೆಶಿ ರಾಜಕೀಯ ಗುರು ಎಸ್.ಎಂ. ಕೃಷ್ಣ ಬರೆದ ಪತ್ರದಲ್ಲೇನಿದೆ?
ಬೆಂಗಳೂರು, ಜ.13: ಹೈಕೋರ್ಟ್ ತರಾಟೆ, ಸರ್ಕಾರದ ನಿರ್ಬಂಧಗಳ ಮಧ್ಯೆಯೂ ಮೇಕೆದಾಟು ಪಾದಯಾತ್ರೆ ಮುಂದುವರಿದಿದೆ. ಇದರ ಮಧ್ಯೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪತ್ರವೊಂದನ್ನು ಬರೆದಿದ್ದಾರೆ.
ಕೆಸಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಎಸ್.ಎಂ.ಕೃಷ್ಣ ಅವರು ಜನಸಾಮಾನ್ಯರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪಾದಯಾತ್ರೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ಯೋಜನೆ ಅನುಷ್ಠಾನಕ್ಕೆ ಸಹಮತವಿದೆ:
' ಬೆಂಗಳೂರಿನ ಭವಿಷ್ಯ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬವಣೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯದ ಬಹುದಿನಗಳ ಬೇಡಿಕೆಯಾದ ಮೇಕೆದಾಟು ಆಣೆಕಟ್ಟು ನಿರ್ಮಾಣ ಸಂಬಂಧ ಸರ್ಕಾರಗಳ ಗಮನ ಸೆಳೆಯಲು ತಮ್ಮ ನೇತೃತ್ವದಲ್ಲಿ ಮೇಕೆದಾಟು ಸಂಗಮದಿಂದ ಬೆಂಗಳೂರಿನವರೆಗೆ 'ನೀರಿಗಾಗಿ ನಡಿಗೆ' ಪಾದಯಾತ್ರೆಗೆ ಆಹ್ವಾನಕ್ಕೆ ಧನ್ಯವಾದಗಳು. ಈ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಂಪೂರ್ಣ ಸಹಮತವಿದೆ' ಎಂದು ಎಸ್.ಎಂ. ಕೃಷ್ಣ ಪತ್ರದಲ್ಲಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮನುಕುಲಕ್ಕೆ ಗಂಡಾಂತರವಾಗಿ ಕಾಡುತ್ತಿರುವ ಕೋವಿಡ್ ವೈರಸ್ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಾ ವಿವಿಧ ರೀತಿಯಲ್ಲಿ ರೂಪಾಂತರಗೊಂಡು ನಮ್ಮನ್ನು ಕಾಡುತ್ತಿದೆ. ಇದರ ಬೇನೆಯಿಂದ ಇಡೀ ಪ್ರಪಂಚ ನಲುಗಿ ಹೋಗಿದ್ದು ಹಲವು ಸಾವು ನೋವುಗಳು ಸಂಭವಿಸಿ ಅನಾಹುತ ಸೃಷ್ಟಿಸಿದೆ. ಇದರ ನಿಯಂತ್ರಣಕ್ಕಾಗಿ ಸರ್ಕಾರಗಳು ಎಷ್ಟೇ ಪ್ರಯತ್ನಿಸಿದರೂ ಇನ್ನೂ ತಹಬದಿಗೆ ಬಂದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು ವಿಶ್ವದ ನಗರಗಳ ಪಟ್ಟಿಯಲ್ಲಿ ಸ್ಥಾನಗಳಿಸಿದೆ. ಪ್ರಪಂಚದ ನಾನಾ ಮೂಲೆಗಳಿಂದ ಪ್ರತಿನಿತ್ಯ ಜನರು ಬಂದು ಹೋಗುತ್ತಿದ್ದಾರೆ. ಇದರ ಮಧ್ಯೆ ಕೊರೊನಾ ವೈರಸ್ ವೇಗವಾಗಿ ಹಬ್ಬುತ್ತಿದೆ. ಇಂತಹ ಸಂದರ್ಭದಲ್ಲಿ ತಾವು ಕೈಗೊಂಡಿರುವ ಪಾದಯಾತ್ರೆ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಲು ಒಪ್ಪಿಗೆ ಸೂಚಿಸಿರುವುದರಿಂದ ಹಾಗೂ ನಾಡಿನ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪಾದಯಾತ್ರೆಯನ್ನು ವಾಪಸ್ ಪಡೆಯಬೇಕು ಎಂದು ಎಸ್.ಎಂ. ಕೃಷ್ಣ ಅವರು ಉಭಯ ನಾಯಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
Recommended Video