ಮೇಕೆದಾಟು ಯೋಜನೆ : ಪಕ್ಷಾತೀತ ಹೋರಾಟಕ್ಕೆ ಸಂಸದರ ನಿರ್ಧಾರ
ನವದೆಹಲಿ, ಡಿಸೆಂಬರ್ 20 : ಮೇಕೆದಾಟು ಯೋಜನೆ ವಿಚಾರದಲ್ಲಿ ಪಕ್ಷಭೇದ ಮರೆತು ಹೋರಾಡಲು ಸರ್ವಪಕ್ಷಗಳ ಸಂಸದರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಗುರುವಾರ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ದೆಹಲಿಯ ನಿವಾಸದಲ್ಲಿ ಕರ್ನಾಟಕದ ಸಂಸದರ ಸಭೆ ನಡೆಯಿತು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಇತರ ನಾಯಕರು ಪಾಲ್ಗೊಂಡಿದ್ದರು.
ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ
ಸಂಸತ್ನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಸಂಸತ್ ಅಧಿವೇಶನದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ತಮಿಳುನಾಡು ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಕರ್ನಾಟಕ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸುತ್ತಿದೆ.
ಮೇಕೆದಾಟು ಯೋಜನೆ : ತಮಿಳುನಾಡು ಸಿಎಂಗೆ ಡಿಕೆಶಿ ಪತ್ರ
ಗುರುವಾರ ನಡೆದ ಸಭೆಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ನಾಯಕರಾದ ಕೆ.ಎಚ್.ಮುನಿಯಪ್ಪ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮುಂತಾದವರು ಭಾಗವಹಿಸಿದ್ದರು....
ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?
ಡಿ.ವಿ.ಸದಾನಂದ ಗೌಡ ಹೇಳಿದ್ದೇನು?
ಸಭೆಯ ಬಳಿಕ ಮಾತನಾಡಿದ ಡಿ.ವಿ.ಸದಾನಂದ ಗೌಡ ಅವರು, 'ಮೇಕೆದಾಟು ಮತ್ತು ಮಹದಾಯಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಪಕ್ಷ ಭೇದ ಮರೆತು ಹೋರಾಡಲು ತೀರ್ಮಾನಿಸಲಾಗಿದೆ. ಕುಡಿಯುವ ನೀರಿಗಾಗಿ ನಮ್ಮ ಹೋರಾಟ ಮುಂದುವರೆಯಲಿದೆ. ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇವೆ. ತಮಿಳುನಾಡಿನ ಜೊತೆ ಚರ್ಚಿಸಲು ನಾವು ಸಿದ್ಧರಿದ್ದೇವೆ' ಎಂದು ಹೇಳಿದರು.
ಕೇಂದ್ರ ಜಲಮಂಡಳಿ ಸೂಚನೆ
ಮೇಕೆದಾಟು ಯೋಜನೆಯ ಕುರಿತು ಸಮಗ್ರ ಯೋಜನಾ ವರದಿ ಡಿಪಿಆರ್ ಸಲ್ಲಿಸುವಂತೆ ಕೇಂದ್ರ ಜಲ ಆಯೋಗ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿವೆ.
ತಮಿಳುನಾಡಿಗೆ ಪತ್ರ
ಮೇಕೆದಾಟು ಯೋಜನೆ ವಿಚಾರದಲ್ಲಿ ಚರ್ಚೆ ನಡೆಸಲು ಅನುಮತಿ ನೀಡುವಂತೆ ಕರ್ನಾಟಕದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. ಆದರೆ, ತಮಿಳುನಾಡು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮೇಕೆದಾಟುವಿಗೆ ಭೇಟಿ
ಸಚಿವ ಡಿ.ಕೆ.ಶಿವಕುಮಾರ್ ಅವರು ತಜ್ಞರ ಜೊತೆ ಮೇಕೆದಾಟುವಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅಧ್ಯಯನ ಮಾಡಿದ್ದಾರೆ. ಮೇಕೆದಾಟು ಯೋಜನೆ ಪೂರ್ಣಗೊಂಡರೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು ಜೊತೆಗೆ ಬೆಂಗಳೂರಿಗೆ 17 ಟಿಎಂಸಿ ನೀರು ನೀರು ಉಪಯೋಗಿಸಿಕೊಳ್ಳಲು ಅವಕಾಶ ಸಿಗಲಿದೆ.