ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ : ಕೇಂದ್ರ ಸರ್ಕಾರ
ಬೆಂಗಳೂರು, ಜನವರಿ 13 : ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಥವ ಕೇಂದ್ರಿಯ ಜಲ ಆಯೋಗ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ವಿವರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರ ನೀಡಿರುವ ತಾತ್ವಿಕ ಅನುಮೋದನೆ ಬೇಷರತ್ತಿನದಲ್ಲ. ಷರತ್ತು ಬದ್ಧ ಅನುಮೋದನೆ ಕೇವಲ ಡಿಪಿಆರ್ ತಯಾರಿಕೆಗೆ ಮಾತ್ರ ಸೀಮಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ
ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ವೇಳೆ ಕೇಂದ್ರ ಕೋರ್ಟ್ಗೆ ಪ್ರಮಾಣ ಪತ್ರವನ್ನು ಸಲ್ಲಿಸಿದೆ. ಇವುಗಳನ್ನು ಯೋಜನೆ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.
ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?
ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡುವ ತೀರ್ಮಾನವನ್ನು ಕೈಗೊಂಡಿದೆ. 'ಮೇಕೆದಾಟು ಯೋಜನೆ ಪೂರ್ಣಗೊಂಡರೆ 400 ಮೆಗಾವಾಟ್ ವಿದ್ಯುತ್, ಬೆಂಗಳೂರಿಗೆ 17 ಟಿಎಂಸಿ ನೀರು ಸಿಗಲಿದೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ತಮಿಳುನಾಡಿನ ವಿರೋಧವೇಕೆ?
ತಮಿಳುನಾಡು ಆರೋಪಕ್ಕೆ ಉತ್ತರ
ಕೇಂದ್ರ ಸರ್ಕಾರ ಡಿಪಿಆರ್ ಸಿದ್ಧಪಡಿಸಲು ಒಪ್ಪಿಗೆ ನೀಡುವ ಮುನ್ನ ನಮ್ಮ ಜೊತೆ ಚರ್ಚೆ ನಡೆಸಿಲ್ಲ ಎಂದು ತಮಿಳುನಾಡು ಸರ್ಕಾರ ಆರೋಪ ಮಾಡಿತ್ತು. ಕೇಂದ್ರ ಸರ್ಕಾರ ತಮಿಳುನಾಡಿನ ವಾದದಲ್ಲಿ ಸತ್ಯಾಂಶವಿಲ್ಲ. ಯೋಜನೆಯ ಸಾಧ್ಯಾಸಾಧ್ಯತೆ ವರದಿಯನ್ನು ಆಗಸ್ಟ್ 24ರಂದು ತಮಿಳುನಾಡಿನ ಜೊತೆ ಹಂಚಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದೆ.
ಮೇಕೆದಾಟು ಯೋಜನೆ
ಕುಡಿಯುವ ನೀರು ಪೂರೈಕೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುವ ಮೇಕೆದಾಟು ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 67.16 ಟಿಎಂಸಿ ಅಡಿಗಳು ಉದ್ದೇಶಿತ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯ 400 ಮೆಗಾವಾಟ್. ಅಂದಾಜು ವೆಚ್ಚ 5,912 ಕೋಟಿ.
3 ರಿಂದ 4 ಹಳ್ಳಿಗಳು ಮುಳುಗಲಿವೆ
'ಮೇಕೆದಾಟು ಯೋಜನೆ ಜಾರಿಗೊಳಿಸಲು ಅತಿ ಕಡಿಮೆ ಭೂಮಿ ಸಾಕು. ಯೋಜನೆಯಿಂದ 4900 ಹೆಕ್ಟೇರ್ ಪ್ರದೇಶ ಮುಳುಗಡೆಯಾಗಲಿದೆ. ಇದರಲ್ಲಿ 4700 ಹೆಕ್ಟೇರ್ ಅರಣ್ಯ ಪ್ರದೇಶ ಮತ್ತು ಖಾಸಗಿ ಜಮೀನು ಸೇರಿದಂತೆ 200 ಹೆಕ್ಟೇರ್ ಕಂದಾಯ ಭೂಮಿ ಸೇರಿದೆ. 3 ರಿಂದ 4 ಹಳ್ಳಿಗಳು ಜಲಾಶಯ ನಿರ್ಮಾಣವಾದ ಬಳಿಕ ಮುಳುಗಡೆಯಾಗಲಿವೆ' ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ತೀರ್ಪಿನ ಉಲ್ಲಂಘಟನೆ
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಕಾವೇರಿ ವಿವಾದದ ವಿಚಾರಣೆ ನಡೆಯುವಾಗ ಕರ್ನಾಟಕ ಈ ಯೋಜನೆ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ಯೋಜನೆ ಜಾರಿಗೊಳಿಸುವುದು ಕಾವೇರಿ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಲಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.
2013ರಲ್ಲೂ ವಿರೋಧ
ಕರ್ನಾಟಕ 2013ರಲ್ಲಿಯೇ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆಗ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿದ್ದರು.