ಮೇಕೆದಾಟು ಯೋಜನೆಯ ಜಾರಿ ಯಾವಾಗ, ನಿಮ್ಮ ಸಾಧನೆ ಏನು?: 100 ದಿನದ ಸರ್ಕಾರಕ್ಕೆ ಪ್ರಶ್ನೆ
ಬೆಂಗಳೂರು, 27: ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಮೇಕೆದಾಟು ಯೋಜನೆ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ಏಕೆ ಏನು ಮಾತನಾಡುತ್ತಿಲ್ಲ? ಬೆಂಗಳೂರಿಗೆ ಅಗತ್ಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವೇನು?. ಮೇಕೆದಾಟು ಯೋಜನೆ ಅನುಷ್ಠಾನ ಯಾವಾಗ ಎಂದು ಆಮ್ ಆದ್ಮಿ ಪಕ್ಷದ (AAP) ಪ್ರಶ್ನೆ ಮಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳು ಪೂರೈಸಿದ ಹಿನ್ನೆಲೆ ಹೇಳಿಕೆ ಬಿಡುಗಡೆ ಮಾಡಿದ ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಅವರು, ಕಾಂಗ್ರೆಸ್ ಸಂಭ್ರಮಾಚರಣೆ ಮಾಡಲು ಯಾವ ಸಾಧನೆ ಮಾಡಿದೆ?. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಮತ್ತು ಗೃಹಜ್ಯೋತಿ ಯೋಜನೆಯ ವಿದ್ಯುತ್ ಉಚಿತ ಸೌಲಭ್ಯವನ್ನು ಹೊರತು ಪಡಿಸಿ ಬೇರೆ ಏನು ಮಾಡಿದ್ದಾರೆ ಎಂದು ಕೇಳಿದರು.

ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಿಸಿ ನುಡಿದಂತೆ ನಡೆಯುವ ಸರ್ಕಾರ ಎಂದಿದ್ದರು. ಅಧಿಕಾರಕ್ಕೆ ಬಂದ ಬಳಿಕ ತಮ್ಮದೇ ನುಡಿಯನ್ನು ಅನುಸರಿಸುತ್ತಿಲ್ಲ ಏಕೆ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯದ ನಿಜವಾದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಬೆಂಗಳೂರಲ್ಲಿ ರಸ್ತೆಗುಂಡಿಗಳ ಸಮಸ್ಯೆ ಹೆಚ್ಚಾಗುತ್ತಲೇ ಇದೆ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಎಂದು ಸುತ್ತಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇನು ವಿರೋಧ ಪಕ್ಷದಲ್ಲಿಲ್ಲ. ತಮ್ಮದೇ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದಾರೆ.
ಬೆಂಗಳೂರಿನ ಸಮಸ್ಯೆ ಆಲಿಸುವ ನಾಟಕ
ಇನ್ನೂ ಬ್ರಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಮಸ್ಯೆಗಳೇನು ಎಂಬ ಅರಿವಿದ್ದುಕೊಂಡು ಪುನಃ ಆಲಿಸುವ ನಾಟಕ ಏಕೆ ಮಾಡುತ್ತಿದ್ದೀರಿ? ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಮೋಹನ್ ದಾಸರಿ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಮಳೆಯೇ ಇಲ್ಲದ ಪರಿಸ್ಥಿತಿ ಇದೆ. ರಾಜ್ಯದ ರೈತರ ಸಂಕಷ್ಟದ ದಿನಗಳನ್ನು ಲೆಕ್ಕಿಸದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲಾಗುತ್ತಿದೆ. ನಾಡು, ನುಡಿ, ಜಲಕ್ಕೆ ಬದ್ಧ ಎಂದರೆ ಇದೇನಾ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ವಿರುದ್ಧ 20% ಕಮಿಷನ್ ಆರೋಪ
ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್, ಪೇಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಹೋರಾಟ ಮಾಡಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಗುತ್ತಿಗೆದಾರರ ಬಾಕಿ ಪಾವತಿಗೆ 20% ಕಮಿಷನ್ ಕೇಳುತ್ತಿರುವ ಆರೋಪ ಕೇಳಿಬಂದಿದೆ. ಡಿ.ಕೆ.ಶಿವಕುಮಾರ್ ವಿರುದ್ಧವೇ ದೂರುಗಳು ವ್ಯಕ್ತವಾಗಿವೆ.
ಇದಷ್ಟೇ ಅಲ್ಲದೇ ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ 6 ರಿಂದ 8 ಲಕ್ಷ ರೂ. ಕಮಿಷನ್ ಅನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಕೇಳುತ್ತಿದ್ದಾರೆ ಎಂಬ ಆರೋಪವು ಇದೆ.ಕೇವಲ ಸರ್ಕಾರ ಬದಲಾಗಿದೆ, ಆದರೆ ಭ್ರಷ್ಟಾಚಾರ, ಕಮಿಷನ್ ದಂಧೆ, ವರ್ಗಾವಣೆ ದಂಧೆ ಎಲ್ಲವೂ ಮೊದಲಿನಂತೆ ಮುಂದುವರಿದಿದೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕರು ದೂರುತ್ತಿದ್ದಾರೆ ಎಂದು ಅವರು ವಿವರಿಸಿದರು.
ಗ್ಯಾರಂಟಿ ಯೋಜನೆಯಿಂದ ರಾಜ್ಯದ ಹಿತಾಸಕ್ತಿ ಬಲಿ?
ಹಾಗಿದ್ದರೆ ಸರ್ಕಾರದ ದುಡ್ಡು ಎಲ್ಲಿ ಹೋಯ್ತು? ಅಭಿವೃದ್ಧಿ ಕೆಲಸಗಳಿಗೆ ಮೀಸಲಿಟ್ಟ ದುಡ್ಡನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಏಕೆ? ಅಧಿಕಾರ ಹಿಡಿಯಲೇ ಬೇಕು ಎಂಬ ದುರಾಸೆಗೆ ಅವೈಜ್ಞಾನಿಕವಾಗಿ, ಅಧ್ಯಯನ ನಡೆಸದೆ ಏಕಾಏಕಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ರಾಜ್ಯದ ಹಿತಾಸಕ್ತಿಯನ್ನು ಬಲಿಕೊಟ್ಟಿರುವುದೇ ನಿಮ್ಮ ನೂರು ದಿನದ ಸಾಧನೆಯೇ? ಎಂದು ಮೋಹನ್ ದಾಸರಿ ಕಿಡಿಕಾರಿದರು.
ಈ ನಡುವೆ ಬಿಜೆಪಿ ವಿರುದ್ಧವೂ ಹರಿಹಾಯ್ದ ಅವರು, ನೂರು ದಿನಗಳು ಕಳೆದರು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪಕ್ಷದ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಲಾಗಿಲ್ಲ. ರಾಜ್ಯದಲ್ಲಿ ಪ್ರತಿಪಕ್ಷವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಇದು ರಾಜ್ಯದ ದೌರ್ಭಾಗ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.












Click it and Unblock the Notifications