ತಮಿಳುನಾಡು ಸಿಎಂ ಸ್ಟಾಲಿನ್ಗೆ ತಿರುಗೇಟು ಕೊಟ್ಟ ಗೃಹ ಸಚಿವ ಬಸವರಾಜ್ ಬೊಮ್ಮಾಯಿ!
ಬೆಂಗಳೂರು, ಜು. 06: ಕಾವೇರಿ ನದಿ ನೀರಿನ ವಿಚಾರದಲ್ಲಿ ಸದಾ ಖ್ಯಾತೆ ತೆಗೆಯುವ ತಮಿಳುನಾಡು ಮತ್ತೊಮ್ಮೆ ಅದೇ ರೀತಿ ಮಾಡುತ್ತಿದೆ. ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಸಿಎಂ ಯಡಿಯೂರಪ್ಪ ಪತ್ರ ಬರೆದಿರುವುದನ್ನು ರಾಜ್ಯದ ನಾಯಕರು ವಿರೋಧಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪರನ್ನು ಸಮರ್ಥಿಸಿಕೊಂಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
"ಕಾವೇರಿ ಕಣಿವೆಯಲ್ಲಿನ ಕರ್ನಾಟಕ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ನಾವು ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ." ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. "ಮೇಕೆದಾಟು ಯೋಜನೆ ಇಂದು-ನಿನ್ನೆಯದಲ್ಲ. ಹಲವಾರು ವರ್ಷಗಳ ಹಿಂದೆ ಈ ಯೋಜನೆ ಸಿದ್ಧವಾಗಿದೆ. ಇದು ವಿದ್ಯುತ್ ಉತ್ಪಾದನೆ, ಕುಡಿಯುವ ನೀರು ಮತ್ತು ಸಂಕಷ್ಟದ ವರ್ಷಗಳಲ್ಲಿ ಉಭಯ ರಾಜ್ಯಗಳ ನಡುವೆ ನೀರಿನ ಸಮರ್ಪಕ ನಿರ್ವಹಣೆ ಮಾಡಲು ಸಹಾಯಕ ಯೋಜನೆಯಾಗಿದೆ. ಉಭಯ ರಾಜ್ಯಗಳಿಗೂ ಅನುಕೂಲವಾಗುವ ಈ ಯೋಜನೆಯನ್ನು ಜಾರಿ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ. ಆದರೆ ತಮಿಳುನಾಡು ಸರ್ಕಾರ ತಕರಾರು ತೆಗೆಯುತ್ತಿದೆ" ಎಂದು ಬೊಮ್ಮಾಯಿ ಆಕ್ಷೇಪಿಸಿದ್ದಾರೆ.
"ಕರ್ನಾಟಕ ರಾಜ್ಯದ ಕಾವೇರಿ ಕಣಿವೆಯ ರೈತರ ಹಕ್ಕಿನ ಸಲುವಾಗಿ ನಾವು ಕಾನೂನು ಹೋರಾಟವನ್ನು ಸದಾಕಾಲ ಮಾಡುತ್ತಲೇ ಬಂದಿದ್ದೇವೆ. ನಮ್ಮ ಹಕ್ಕಿನ ಸಲುವಾಗಿ ಈಗಲೂ ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ನಮಗೆ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ. ಮೆಕೇದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಕೇಂದ್ರ ಸರ್ಕಾರದಿಂದ ಬೇಕಾಗುವ ಎಲ್ಲಾ ಅನುಮತಿಗಳನ್ನು ಪಡೆಯುತ್ತೇವೆ" ಎಂದು ಬೊಮ್ಮಾಯಿ ಹೇಳಿದ್ದಾರೆ.
Recommended Video