ಮೇಕೆದಾಟು ಯೋಜನೆ: ಕೇಂದ್ರದಿಂದ ಕರ್ನಾಟಕಕ್ಕೆ ಗ್ರೀನ್ ಸಿಗ್ನಲ್
ನವದೆಹಲಿ, ಡಿಸೆಂಬರ್ 21: ಮೇಕೆದಾಟು ಯೋಜನೆ ಕುರಿತ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ಕೇಂದ್ರ ಜಲ ಆಯೋಗವು ಕರ್ನಾಟಕಕ್ಕೆ ಸೂಚಿಸಿದೆ.
ಲೋಕಸಭೆಯಲ್ಲಿ ಈ ವಿಷಯವನ್ನು ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಕರ್ನಾಟಕದ ಸಂಸದರಾದ ಡಿ.ಕೆ. ಸುರೇಶ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.
'ಕುಡಿಯುವ ಹಾಗೂ ವಿದ್ಯುತ್ ಉತ್ಪಾದನೆ ಉದ್ದೇಶದ ಮೇಕೆದಾಟು ಅಣೆಕಟ್ಟೆ ಯೋಜನೆ ಸಂಬಂಧ ಕರ್ನಾಟಕ ಸರಕಾರವು ಸಾಧ್ಯತಾ ವರದಿಯನ್ನು (ಪೀಸಿಬಿಲಿಟಿ ರಿಪೋರ್ಟ್) ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿತ್ತು ಅದನ್ನು ಪರಿಶೀಲಿಸಿ ವಿಸ್ತೃತ ವರದಿ ತಯಾರಿಸುವಂತೆ ಸೂಚಿಸಲಾಗಿದೆ ಎಂದು ಅವರು ಉತ್ತರಿಸಿದ್ದಾರೆ.

ಮೇಕೇದಾಟು ಯೋಜನೆಯ ಬಗ್ಗೆ ತಮಿಳುನಾಡು ಖ್ಯಾತೆ ತೆಗೆಯುತ್ತಲೇ ಇದ್ದು, ಪ್ರಸ್ತುತ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಸಹ ತಮಿಳುನಾಡು ಸಂಸದರು ಪ್ರತಿಭಟನೆ ಮಾಡುತ್ತಲೇ ಇದ್ದಾರೆ. ಆದರೆ ಜಲಸಂಪನ್ಮೂಲ ರಾಜ್ಯ ಖಾತೆ ಸಚಿವರು ನೀಡಿರುವ ಉತ್ತರ ಕರ್ನಾಟಕಕ್ಕೆ ದೊರೆತ ಮುನ್ನಡೆ ಆಗಿದೆ.
ಕರ್ನಾಟಕವು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಾಗ ಕಾವೇರಿ ಕಣಿವೆಯ ಇತರೆ ರಾಜ್ಯಗಳ ಅಭಿಪ್ರಾಯವನ್ನೂ ಪರಿಗಣಿಸಬೇಕು. ಇದರಿಂದ ಅಂತಾರಾಜ್ಯ ಜಲಸೌಹಾರ್ಧ ಸಾಧಿಸಬಹುದು. ಸಂಭವನೀಯ ಬಿಕ್ಕಟ್ಟು ಬಗೆಹರಿಸಬಹುದು ಎಂದೂ ಅವರು ಸಲಹೆ ನೀಡಿದ್ದಾರೆ.












Click it and Unblock the Notifications