ಮೇಕೆದಾಟು: ತಮಿಳುನಾಡು ಶಾಸನಸಭೆ ನಿರ್ಣಯ ಕಾನೂನು ಬಾಹಿರ ಎಂದ ಸಿಎಂ
ಬೆಂಗಳೂರು, ಮಾ.21: ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮೇಕೆದಾಟು ಯೋಜನೆ ವಿರುದ್ಧ ಕೈಗೊಳ್ಳಲಾಗಿರುವ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯವನ್ನು ಸಮಸ್ತ ಕರ್ನಾಟಕದ ಜನತೆ ಹಾಗೂ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ ಎಂದು ಹೇಳಿದ್ದಾರೆ.
Recommended Video

ಮೇಕೆದಾಟು ಯೋಜನೆ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿಗೆ ಸಂಬಂಧಿಸಿದ್ದಾಗಿದೆ. ಕಾವೇರಿ ನ್ಯಾಯಾಧೀಕರಣ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟ ನಂತರ ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ.

ಕವಡೆ ಕಾಸಿನ ಕಿಮ್ಮತ್ತಿಲ್ಲ:
ತಮಿಳುನಾಡು ರಾಜ್ಯ ತನ್ನ ವಿಧಾನ ಸಭೆಯಲ್ಲಿ ಇಂದು ಅಂಗೀಕರಿಸಿದ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ ಎಂದು ಜಲಸಂನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮೇಕೇದಾಟು ಯೋಜನೆಯನ್ನು ಅನುಷ್ಠಾನ ಮಾಡಿಯೇ ತಿರುತ್ತದೆ. ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನಿರ್ಣಯ ಅಂಗೀಕಾರ:
ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಡ್ಯಾಂ ಕಟ್ಟುವ ನಿರ್ಧಾರವನ್ನು ತಮಿಳುನಾಡು ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಪಕ್ಷಾತೀತವಾಗಿ ನಿರ್ಣಯ ಅಂಗೀಕರಿಸಲಾಗಿದೆ. ತಮಿಳುನಾಡು ಸಚಿವ ದೊರೈ ಮುರುಗನ್ ವಿಧಾನಸಭೆಯಲ್ಲಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ಅನುದಾನ ಮೀಸಲಿಟ್ಟಿರುವದನ್ನು ವಿರೋಧಿಸಿ ನಿರ್ಣಯ ಮಂಡಿಸಿದರು. ಇದಕ್ಕೆ ಆಡಳಿತಾರೂಢ ಡಿಎಂಕೆ ಮತ್ತು ಮಿತ್ರಪಕ್ಷಗಳಾದ ಕಾಂಗ್ರೆಸ್, ಎಂಡಿಎಂಕೆ, ವಿಸಿಕೆ ಮತ್ತು ಎಡಪಕ್ಷಗಳು ಹಾಗೂ ವಿರೋಧ ಪಕ್ಷವಾದ ಎಐಡಿಎಂಕೆ ಹಾಗೂ ಅದರ ಮಿತ್ರಪಕ್ಷಗಳಾದ ಪಿಎಂಕೆ ಮತ್ತು ಬಿಜೆಪಿ ಬೆಂಬಲ ವ್ಯಕ್ತಪಡಿಸಿವೆ.












Click it and Unblock the Notifications