DK Shivakumar: ನಮಗೆ ತಮಿಳುನಾಡಿನ ಮೇಲೆ ಯುದ್ಧ ಮಾಡುವ ಉದ್ದೇಶವಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ಯಾಕೆ?
ಬೆಂಗಳೂರು, ಜೂನ್ 1: ಮೇಕೆದಾಟು ನಮ್ಮ ಯೋಜನೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಸಮುದ್ರಕ್ಕೆ ಹೋಗುವ ನೀರು ತಡೆದು ಅದನ್ನು ಕಾವೇರಿ ಭಾಗದ ಜನರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹೇಳಿದರು.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ರಾಜ್ಯ ಬಜೆಟ್ ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ಅದನ್ನು ಖರ್ಚು ಮಾಡಿಲ್ಲ ಎಂದರು.

ನಮಗೆ ತಮಿಳುನಾಡಿನ ಮೇಲೆ ದ್ವೇಷ ಮಾಡುವ, ಯುದ್ಧ ಮಾಡುವ ಉದ್ದೇಶವಿಲ್ಲ. ಅಲ್ಲಿರುವವರು ನಮ್ಮ ಅಣ್ಣತಮ್ಮಂದಿರೆ. ನಮಗೆ ಯಾರ ಮೇಲೂ ದ್ವೇಷ, ಅಸೂಯೆ ಇಲ್ಲ. ಕಾವೇರಿ ನದಿಗೆ ಆಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರಿಗೆ ಯಾವಾಗ ಎಷ್ಟು ನೀರು ಬಿಡಬೇಕು ಎಂದು ಅವರು ತೀರ್ಮಾನಿಸಿ ಬಿಡುತ್ತಾರೆ ಎಂದು ತಿಳಿಸಿದರು.
ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸುವುದರಿಂದ ಅವರಿಗೆ ಆಗುವ ತೊಂದರೆ ಏನು? ನಮ್ಮಲ್ಲಿ ನೀರು ಸಂರಕ್ಷಣೆ ಮಾಡಿಕೊಂಡು ಕುಡಿಯುವ ನೀರು ಪೂರೈಸಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಹೀಗಾಗಿ ತಮಿಳುನಾಡಿನವರು ಆತಂಕಪಡುವ ಅಗತ್ಯವಿಲ್ಲ.

ಈ ಯೋಜನೆಯಿಂದ ಯಾವುದೇ ತೊಂದರೆ ಇಲ್ಲ, ಹೀಗಾಗಿ ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು. ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ ಎಂದು ಹೇಳಿದರು.












Click it and Unblock the Notifications