ಕರ್ನಾಟಕದ ಉತ್ತರ ಒಳನಾಡು,ಕರಾವಳಿಯಲ್ಲಿ ಎರಡು ದಿನ ಮಳೆ
ಬೆಂಗಳೂರು, ಅಕ್ಟೋಬರ್ 20: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಅಕ್ಟೋಬರ್ 24ರವರೆಗೂ ಮಳೆ ಇರಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 22ರವರೆಗೆ ಮಾತ್ರ ಮಳೆ ಇರಲಿದೆ.
ಕಲಬುರಗಿಯಲ್ಲಿ ಮತ್ತೆ ಆರೆಂಜ್ ಅಲರ್ಟ್ ಘೋಷಣೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದ ಕಾರಣ ಕಳೆದ ವಾರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಜೋರಾಗಿತ್ತು. ಮೂರ್ನಾಲ್ಕು ದಿನಗಳಿಂದ ಕೊಂಚ ಕಡಿಮೆಯಾಗಿದ್ದ ಮಳೆ ಇಂದಿನಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ.

ಅಕ್ಟೋಬರ್ 22ರವರೆಗೂ ರಾಜ್ಯಾದ್ಯಂತ ಮಳೆ
ಅಕ್ಟೋಬರ್ 22ರವರೆಗೂ ರಾಜ್ಯಾದ್ಯಂತ ಮಳೆಯಾಗಲಿದೆ. ಸೋಮವಾರ ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮಳೆ ಇತ್ತು. ಮಲೆನಾಡು, ಕರಾವಳಿ ಭಾಗದಲ್ಲೂ ತುಂತುರು ಮಳೆಯಾಗುತ್ತಿದೆ.

ಉತ್ತರ ಕರ್ನಾಟಕದಲ್ಲೂ ಮಳೆಯ ಮುನ್ಸೂಚನೆ
ಉತ್ತರ ಕರ್ನಾಟಕದ ಜಿಲ್ಲೆಗಳು ಮತ್ತು ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಆದರೆ, ಉತ್ತರ ಕರ್ನಾಟಕದಲ್ಲಿ ಅ.20 ಮತ್ತು 21ರಂದು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗಿನಲ್ಲಿ ಹೆಚ್ಚಲಿದೆ ಮಳೆ
ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಬಂದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮೈಸೂರು ರಸ್ತೆ, ಚಾಮರಾಜಪೇಟೆ, ಹೊಸಕೆರೆಹಳ್ಳಿ, ವಿಜಯನಗರ, ನಾಯಂಡಹಳ್ಳಿ, ಶ್ರೀನಗರ, ಚಂದ್ರಾ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಬಿಟಿಎಂ ಲೇಔಟ್, ಜಯನಗರ, ಕೆಆರ್ ಮಾರ್ಕೆಟ್ ಸೇರಿ ಹಲವೆಡೆ ಜೋರು ಮಳೆಯಾಗಿದೆ.

ಮಳೆಯಾಗಿರುವ ಪ್ರದೇಶಗಳು
ಹಾಸನದಲ್ಲಿ 7 ಸೆಂ.ಮೀ ಮಳೆಯಾಗಿದೆ. ಕೃಷ್ಣರಾಜಸಾಗರ, ಗೋಪಾಲನಗರ, ಸೋಮವಾರಪೇಟೆ, ಬನವಾಸಿ, ಮೈಸೂರು, ಶ್ರೀರಂಗಪಟ್ಟಣ, ನಂಜನಗೂಡು, ತಾಳಿಕೋಟೆ, ಲಿಂಗನಮಕ್ಕಿ, ಕಲಬುರಗಿ, ರಾಯಚೂರು, ಟಿ ನರಸೀಪುರ, ಕೊಳ್ಳೇಗಾಲ, ಕೆಆರ್ ಪೇಟೆ, ಪಾಂಡವಪುರದಲ್ಲಿ ಮಳೆಯಾಗಿದೆ. ಶಿರಾಲಿ ಮತ್ತು ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.