ಡಿ.2ರಿಂದ ಬಿಸಿಯೂಟ ನೌಕರರ ಮುಷ್ಕರ
ರಾಜ್ಯ ಸರ್ಕಾರ ಬಿಸಿಯೂಟದೊಂದಿಗೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ.ಆದ್ದರಿಂದ ರಾಜ್ಯದ 1.04ಲಕ್ಷ ಬಿಸಿಯೂಟ ತಯಾರಿಸುವ ನೌಕರರು ತಮ್ಮ ಕಾರ್ಯ ಸ್ಥಗಿತಗೊಳಿಸಿ, ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಸದ್ಯ ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆಯವರಿಗೆ 1,100 ಮತ್ತು ಅವರ ಸಹಾಯಕರಿಗೆ 1000 ರೂ. ವೇತನ ನೀಡಲಾಗುತ್ತಿದೆ. ಇದು 2009ರಲ್ಲಿ ನೀಡುತ್ತಿದ್ದ ವೇತನವಾಗಿದ್ದು, ಅಂದಿನಿಂದಲೂ ವೇತನ ಹೆಚ್ಚಳ ಮಾಡಿಲ್ಲ. ಸರ್ಕಾರ ವೇತನ ಹೆಚ್ಚಳ ಮಾಡುವ ಭರವಸೆ ನೀಡಿಲ್ಲ. ಆದ್ದರಿಂದ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ನೌಕರರು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷರಾದ ವರಲಕ್ಷ್ಮೀ ಅವರು ಹೇಳುವಂತೆ ಸರ್ಕಾರಕ್ಕೆ ವೇತನ ಹೆಚ್ಚಳ ಮಾಡುವಂತೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನೌಕರರ ಪ್ರಮುಖ ಬೇಡಿಕೆಗಳೆಂದರೆ, ವೇತನವನ್ನು 3,000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಪ್ರತಿಭಟನೆ ನಡೆಸುತ್ತೇವೆ. ಡಿ.2ರಿಂದ ಆರಂಭವಾಗುವ ಪ್ರತಿಭಟನೆ ಮೂರು ದಿನಗಳ ಕಾಲ ನಡೆಯಲಿದೆ. ಸರ್ಕಾರ ಸಮಸ್ಯೆಗೆ ಸ್ಪಂದಿಸದಿದ್ದರೆ, ಅಡುಗೆ ಕಾರ್ಯ ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಸಿಯೂಟ ನೌಕರರ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ನೌಕರರ ವೇತನ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಆದರೆ, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.