ಹಾಲು ಉತ್ಪಾದಕರಿಗೆ ಸಾಲ ಕೊಡಲು ಸಹಕಾರ ಬ್ಯಾಂಕ್ ಸ್ಥಾಪನೆ: ಬೊಮ್ಮಾಯಿ
ಬೆಂಗಳೂರು, ಮೇ. 07 : ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು 3600 ಕೋಟಿ ರೂ. ಮೂಲ ಬಂಡವಾಳದಿಂದ ನಂದಿನಿ ಕ್ಷೀರ ಅಭಿವೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ ಮಾಡಲು ನಮ್ಮ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.
ಹಾಲು ಉತ್ಪಾದಕ ರೈತರಿಗೆ ಸಹಕಾರಿ ಬ್ಯಾಂಕ್: ಹಾಲು ಉತ್ಪಾದಿಸುವ ರೈತರಿಗೆ ಸುಲಭ ಬಡ್ಡಿದರಲ್ಲಿ ಸಾಲ ಒದಗಿಸಲು ನಂದಿನಿ ಕ್ಷೀರ ಅಭಿವೃದ್ಧಿ ಸಹಕಾರಿ ಬ್ಯಾಂಕನ್ನು ಸ್ಥಾಪಿಸಲಾಗುತ್ತಿದೆ. 3600 ಕೋಟಿ ರೂ.ಗಳ ಬಂಡವಾಳ ಹೂಡಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ ಆಗಲಿದೆ. ಗೋವುಗಳ ವಿವಿಧ ತಳಿಗಳ ಅಭಿವೃದ್ಧಿ, ಹಾಲು ಮೆಗಾ ಡೈರಿ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.

ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ :
ರಾಜ್ಯದಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯ ಮಾಡಿ, ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ, ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ರೈತರ, ಶ್ರಮಿಕರ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಲು ಸರ್ಕಾರ ಬದ್ಧವಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಸಹಕಾರ, ಪಶುಸಂಗೋಪನೆ ಇಲಾಖೆಗಳನ್ನು ಸಂಯೋಜನೆಗೊಳಿಸುವ ಮೂಲಕ ಮಾಹತ್ಮಾ ಗಾಂಧಿಯವರ ಗ್ರಾಮೀಣಾಭಿವೃದ್ಧಿಯ ಕನಸನ್ನು ನನಸಲಾಗಲಿದೆ. ಎಲ್ಲದಕ್ಕೂ ಗೋಮಾತೆ ಅರೋಗ್ಯ ರಕ್ಷಣೆ ನಮ್ಮ ಆದ್ಯತೆ ಎಂದು ಹೇಳಿದರು.

ಪುಣ್ಯ ಕೋಟಿ ದತ್ತು ಯೋಜನೆ :
ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಹಿಂದೆ ನಾನು ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು 11 ಗೋವುಗಳನ್ನು ದತ್ತು ತೆಗೆದುಕೊಂಡು ಆಚರಿಸಿಕೊಂಡಿದ್ದೇನೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದರು.

ಗೋ ಸಂಪತ್ತಿನಿಂದ ಆದಾಯ ವೃದ್ಧಿ:
ಕಾಮಧೇನು ಎಂದೇ ಕರೆಯಲ್ಪಡುವ ಗೋವುಗಳಿಲ್ಲದೆ ಮನುಷ್ಯನ ಬದುಕಿಲ್ಲ. ಗೋವು ಸಾಕಾಣಿಕೆಯಿಂದ ಹಾಲು, ಇತ್ಯಾದಿ ಉತ್ಪನ್ನಗಳಿಂದ ಜೀವನದ ಆಧಾರವಾಗಿಸಿಕೊಂಡಿದ್ದಾರೆ. ನಮ್ಮ ಸರ್ಕಾರ ಗೋಹತ್ಯೆ ಕಾನೂನನ್ನು ಜಾರಿಗೆ ತರುವಾಗ, ವಯಸ್ಸಾದ ಗೋವುಗಳ ಸಾಕಾಣಿಕೆಯಿಂದ ರೈತರಿಗೆ ಹೊರೆಯಾಗುತ್ತದೆ ಎನ್ನುತ್ತಿದ್ದರು. ರೈತ ಗೋವುಗಳನ್ನು ಹೊರೆ ಎಂದು ತಿಳಿದೇ ಇಲ್ಲ. ಗೋ ಸಂಪತ್ತನ್ನು ಉಳಿಸಿಕೊಂಡರೆ ಆಹಾರ, ಆದಾಯ, ಪೌಷ್ಟಿಕತೆಯನ್ನು ನೀಡುತ್ತದೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.

100 ಗೋಶಾಲೆಗಳ ಆರಂಭ:
ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದಲ್ಲಿ 100 ಗೋ ಶಾಲೆಗಳನ್ನು ಪ್ರಾರಂಭ ಮಾಡಲಾಗುವುದು. ಗೋ ಉತ್ಪನ್ನಗಳ ಮಾರಾಟಕ್ಕಾಗಿ ಗೋ ಮಾತಾ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು. ಔಷಧಿ ವ್ಯವಸ್ಥೆ, 400 ಪಶು ವೈದ್ಯರ ನೇಮಕಾತಿ, ಡಿಪ್ಲೊಮಾ ಮಾಡಿದ ವಿದ್ಯಾರ್ಥಿಗಳಿಗಾಗಿ 250 ಹುದ್ದೆ ಭರ್ತಿಗೊಳಿಸಿ ಗೋ ಸೇವೆ, ಪಶುಸೇವೆಗೆ ಅವಕಾಶ ಕಲ್ಪಿಸಲಾಗುವುದು. ರೋಗಗ್ರಸ್ತ ದನಕರುಗಳ ಚಿಕಿತ್ಸೆಗೆ ಅನುಕೂಲವಾಗುವಂತಹ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗಿದ್ದು, ದನಕರುಗಳಿಗೆ ಮನೆಬಾಗಿಲಿಗೆ ತೆರಳಿ ಚಿಕಿತ್ಸೆ ಕೊಡಿಸುವಂತಹ ಮಾನವೀಯ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಪ್ರಾರಂಭಿಸಲಾಗಿದೆ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.












Click it and Unblock the Notifications