ಮತದಾರರ ಮಾಹಿತಿ ಸಂಗ್ರಹ: ಕಾಂಗ್ರೆಸ್ ಆರೋಪ ನಿರಾಧಾರ ಎಂದ ಅಶ್ವಥ್ ನಾರಾಯಣ
ಬೆಂಗಳೂರು, ನವೆಂಬರ್ 17: ಭ್ರಷ್ಟಾಚಾರ ಮತ್ತು ಅಕ್ರಮಗಳಲ್ಲೇ ಮುಳುಗಿರುವ ಕಾಂಗ್ರೆಸ್ ನಾಯಕರಿಗೆ ಮಾಡಲು ಏನೂ ಕೆಲಸವಿಲ್ಲ. ಪದೇಪದೇ ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವ ಇವರೆಲ್ಲರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಎದುರೇಟು ಕೊಟ್ಟಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಈ ಎಲ್ಲ ಪ್ರಕ್ರಿಯೆಗಳು ಚುನಾವಣಾ ಆಯೋಗದ ಅಡಿಯಲ್ಲಿ ನಡೆಯುತ್ತೆ. ಯಾವುದೇ ಪಕ್ಷ ಸರ್ಕಾರದ ಅಡಿಯಲ್ಲಿ ಆಗುವುದಿಲ್ಲ. ಕಳ್ಳನ ಮನಸ್ಸು ಹುಳ್ಳು ಹುಳ್ಗೆ ಅನ್ನೋ ಹಾಗೆ ಕಾಂಗ್ರೆಸ್ ಮಾತು. ಪುರುಸೊತ್ತಾಗಿ ಕಾಂಗ್ರೆಸ್ ಇದ್ದಾರೆ. ಹಾಗಾಗಿ ಇಂತಹ ಆರೋಪ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಹೊಂಬಾಳೆ ಎನ್ನುವ ಯಾವುದೋ ಒಂದು ಸಂಸ್ಥೆಯ ಹೆಸರನ್ನು ಹಿಡಿದುಕೊಂಡು ನನ್ನ ಮೇಲೆ ನಿರಾಧಾರ ಆರೋಪ ಮಾಡುತ್ತಿದ್ದಾರೆ. ಇಂದು ಎಂದಿನಂತೆ ಗಾಳಿಯಲ್ಲಿ ಗುಂಡು ಹೊಡೆಯುವ ಚಾಳಿಯಾಗಿದೆ. ನಮ್ಮ ಸಹೋದರನದು ಕೂಡ ಹೊಂಬಾಳೆ ಎನ್ನುವ ಸಂಸ್ಥೆ ಇದ್ದು, ಸಿನಿಮಾ ನಿರ್ಮಾಣದಲ್ಲಿ ತೊಡಗಿದೆ. ಈ ಸಂಸ್ಥೆಯು ನಾಡು ಮತ್ತು ದೇಶವೇ ಮೆಚ್ಚುವಂಥ ಸಿನಿಮಾಗಳನ್ನು ಮಾಡಿ, ಗೌರವ ತಂದಿದೆ. ಈಗ ಅವರು ಹೇಳುತ್ತಿರುವ ಹೊಂಬಾಳೆ ಸಂಸ್ಥೆಗೂ ನಮ್ಮ ಸೋದರನ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ಆ ಹೆಸರನ್ನು ಇಟ್ಟುಕೊಳ್ಳಬೇಡ ಎಂದು ಹೇಳಲು, ಮಲ್ಲೇಶ್ವರಂನಲ್ಲಿ ಕಚೇರಿ ಇರಬಾರದು ಎನ್ನಲು ನಾನ್ಯಾರು? ನಾನು ತತ್ತ್ವ-ಸಿದ್ಧಾಂತಗಳಿಗಾಗಿ ರಾಜಕೀಯಕ್ಕೆ ಬಂದಿದ್ದೇನೆಯೇ ವಿನಾ ಕಾಂಗ್ರೆಸ್ಸಿನವರಂತೆ ಕುಟುಂಬ ರಾಜಕಾರಣಕ್ಕಲ್ಲ ಎಂದರು.

ಕಾಂಗ್ರೆಸ್ಸಿನಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಯಾರ ಬಳಿಯೂ ಗಂಭೀರ ವಿಚಾರಗಳಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಕೆಲಸ. ಅದರಲ್ಲಿ ಮುಖ್ಯಮಂತ್ರಿಗಳಿಗಾಗಲಿ, ನನಗಾಗಲಿ ಏನೂ ಇಲ್ಲ. ಯಾರಾದರೂ ತಪ್ಪು ಮಾಡಿದ್ದರೆ ಕಾಂಗ್ರೆಸ್ಸಿನವರು ಆಯೋಗಕ್ಕೆ ದೂರು ಕೊಡಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅದು ಬಿಟ್ಟು ನನ್ನ ವಿರುದ್ಧ ಆರೋಪ ಮಾಡುವ ಚಿಲ್ಲರೆಬುದ್ಧಿ ತೋರಿಸಬಾರದು. ಹಿಂದೆ ಪಿಎಸ್ಐ ಹಗರಣದಲ್ಲೂ ಇವರೆಲ್ಲ ನನ್ನ ಹೆಸರನ್ನು ವಿನಾ ಕಾರಣ ಎಳೆದು ತಂದಿದ್ದರು. ಆದರೆ ಆಧಾರ ತೋರಿಸಿ ಎಂದಾಗ ಪಲಾಯನ ಮಾಡಿದರು ಎಂದು ಹರಿಹಾಯ್ದರು.
ಕಾಂಗ್ರೆಸ್ಸಿನವರು ಈಗ ಆರೋಪ ಮಾಡುತ್ತಿರುವ ಸಂಸ್ಥೆಯ ಪ್ರಮುಖ ವ್ಯಕ್ತಿ ನನ್ನೊಂದಿಗೆ ಫೋಟೋ ತೆಗೆಸಿಕೊಂಡಿರಬಹುದು. ಸಾರ್ವಜನಿಕ ಜೀವನದಲ್ಲಿರುವಾಗ ಹೀಗೆ ಸಾವಿರಾರು ಜನ ಏನೇನೋ ಕೆಲಸದ ಕಾರಣಕ್ಕೆ ಬರುತ್ತಾರೆ. ಹಾಗೆ ನೋಡಿದರೆ, ಕಾಂಗ್ರೆಸ್ ನಾಯಕರು ಕಳ್ಳಕಾಕರು ಮತ್ತು ಕೊಲೆಗಾರರ ಜೊತೆಯೆಲ್ಲ ಫೋಟೋ ತೆಗೆಸಿಕೊಂಡಿದ್ದಾರೆ. ರಾಜಕಾರಣಕ್ಕೆ ಬಂದಮೇಲೆ ಅದನ್ನೆಲ್ಲ ತಡೆಯಲು ಆಗುವುದಿಲ್ಲ ಎಂದರು.

ಬಿಜೆಪಿ ಸರಕಾರವು ಕೆಂಪೇಗೌಡರ ಪ್ರತಿಮೆ ಸ್ಥಾಪನೆ, ಹೂಡಿಕೆದಾರರ ಸಮಾವೇಶ, ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ಮುಂತಾದ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಿದೆ. ಈ ಯಶಸ್ಸನ್ನು ಸಹಿಸಿ ಕೊಳ್ಳಲಾಗದೆ ಕಾಂಗ್ರೆಸ್ ನಾಯಕರು ಹೀಗೆ ಹತಾಶೆಯ ಪರಮಾವಧಿ ತಲುಪಿದ್ದಾರೆ ಎಂದು ಅವರು ಟೀಕಿಸಿದರು.ಮತದಾರರ ಪಟ್ಟಿ ಪರಿಷ್ಕರಣೆಯು ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ನಡೆಯುವ ಪ್ರಕ್ರಿಯೆ. ಇದು ಅಧಿಕಾರಿಗಳು ಮತ್ತಿತರರು ಮಾಡುವ ಕೆಲಸವಾಗಿದೆ. ಬಿಬಿಎಂಪಿ ಚುನಾವಣೆಗೂ ನನಗೂ ಏನಾದರೂ ಸಂಬಂಧವಿದೆಯೇ? ಇದನ್ನೆಲ್ಲ ನೋಡಿದರೆ ಕಾಂಗ್ರೆಸ್ಸಿಗರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎನ್ನುವುದು ಗೊತ್ತಾಗುತ್ತದೆ" ಎಂದು ಸಚಿವರು ಲೇವಡಿ ಮಾಡಿದರು.











Click it and Unblock the Notifications